Showing posts with label ಕನ್ನಡ. Show all posts
Showing posts with label ಕನ್ನಡ. Show all posts

Sunday, November 1, 2015

ಬೋರ್ಡ್ ನಲ್ಲಿ ಕಾಣದೆ ಇರುವ - ಫಲಿತಾಂಶ (1976)

ಪಾಠ ಪ್ರವಚನಗಳು ಹಲವಾರು ಬಾರಿ ಹಳೆಯದಾಗಿಬಿಡುತ್ತದೆ, ಆದರೆ ಅವು ನಮಗೆ ದಾರಿ ತೋರಿಸಿದ ಬಗೆ ಯಾವತ್ತಿಗೂ ನೆನಪಿರುತ್ತದೆ. ಪುಟ್ಟಣ್ಣ ಕಣಗಾಲ್ ಚಿತ್ರಜಗತ್ತಿನಲ್ಲಿ ಸೃಷ್ಠಿ ಮಾಡಿದ ರತ್ನಗಳು ಹಲವಾರು.

ಒಂದೊಂದು ರತ್ನವೂ ಭಿನ್ನ ವಿಭಿನ್ನ. ಪ್ರತಿ ರತ್ನ ಮಣಿಯನ್ನು ಅರಸುತ್ತಾ ಅದನ್ನು ನೋಡಿ ಸಂಭ್ರಮಿಸುತ್ತಾ ಹೋಗುತ್ತಿದ್ದ ನನಗೆ, ಆ ಸಾಲಿನಲ್ಲಿ ಒಂದು ಅನರ್ಘ್ಯ ರತ್ನದ ಹೆಸರಿತ್ತು, ಆದರೆ ಆ ಜಾಗದಲ್ಲಿ ಖಾಲಿ ಖಾಲಿ. ಅದರ ಫಲಕ ನೋಡಿದೆ, ಅದರಲ್ಲಿ "ಫಲಿತಾಂಶ" ಎಂದಿತ್ತು.

ಯಾಕೋ ಕುತೂಹಲ ಕಾಡಿತು, ಆ ಜಾಗವನ್ನು ಮತ್ತೆ ಮತ್ತೆ ನೋಡಿದೆ ಕೆಳಕಂಡ ವಿವರಗಳು ಸಿಕ್ಕವು.

ಆ ಮಾಣಿಕ್ಯ ೧೯೭೬ ನೆ ಇಸವಿಯಲ್ಲಿ ಅನಾವರಣಗೊಂಡಿತ್ತು.

ಅರೆಗಲ್ ಬ್ರದರ್ಸ್ ತಮ್ಮ ಕಿಸೆಯಿಂದ ಹಾಕಿದ ಕಾಂಚಣ ಈ ರತ್ನವನ್ನು ಬೆಳ್ಳಿ ತೆರೆಯಲ್ಲಿ ಬೆಳಗಿಸಿತ್ತು.

ಜೈ ಜಗದೀಶ್, ಆರತಿ, ಶುಭ ಜೊತೆಯಲ್ಲಿ ಹಿಂದಿ ಚಿತ್ರ ಜಗತ್ತಿನ ಕಂಚಿನ ಕಂಠ ಅಮರೀಶ್ ಪುರಿ ಕನ್ನಡಕ್ಕೆ ಕಾಲಿಟ್ಟ ಹೆಮ್ಮೆಯ ಕ್ಷಣ ಅದು.

ಆರ್ ಏನ್ ಜಯಗೋಪಾಲ್ ರಚಿಸಿದ ಸುಂದರ ಹಾಡುಗಳನ್ನು ಎಸ್ ಪಿ ಬಾಲಸುಬ್ರಮಣ್ಯಂ ಮತ್ತು ವಾಣಿ ಜಯರಾಂ ಅಷ್ಟೇ ಸುಂದರವಾಗಿ ಜೀವ ತುಂಬಿ ಹಾಡಿದ್ದರು. ಇಂದಿಗೂ ನೆನಪಲ್ಲಿ ಉಳಿದಿರುವ ಅನೇಕ ಗೀತೆಗಳಲ್ಲಿ ಇವು ಕೂಡ ಒಂದು.

ಪುಟ್ಟಣ್ಣ ಚಿತ್ರಗಳು ಎಂದ ಮೇಲೆ ಸಂಗೀತದ ಮಾತು ಬಂದಾಗ ಮೊದಲ ಹೆಸರು ಬರುವುದು ಅವರ ನೆಚ್ಚಿನ ಗೆಳೆಯ ವಿಜಯಭಾಸ್ಕರ್. ಹೌದು ಈ ಚಿತ್ರವನ್ನು ವಿಜಯಭಾಸ್ಕರ್ ಸಂಗೀತ ಶರಧಿಯಲ್ಲಿ ಅದ್ದಿ ತೆಗೆದಿದ್ದಾರೆ.

"ಈ ಚೆಂಡಿನ ಆಟ" ಎಸ್ ಪಿ ಬಾಲಸುಬ್ರಮಣ್ಯಂ ಮತ್ತು ಪಿ ಸುಶೀಲ ಹಾಡಿದ್ದಾರೆ.



"ಲವ್ ಎಂದರೆ ಯಾರೂ ಬಿಡಿಸಿದ ಬಂಧನ" ಈ ಹಾಡು ಇಷ್ಟವಾಗುವುದು ವಾಣಿಜಯರಾಂ ಅವರ ಧ್ವನಿ ಮತ್ತು ಪಾಶ್ಚಾತ್ಯ ಸಂಗೀತದ ಅಚ್ಚಿನಲ್ಲಿ ಮೂಡಿರುವ ಹಿನ್ನೆಲೆ ಸಹ ಗಾಯಕರ ಧ್ವನಿ.


ಫಲಿತಾಂಶವನ್ನು ಕಪ್ಪು ಬಿಳುಪಿನಲ್ಲಿ ಸೆರೆ ಹಿಡಿದದ್ದು ಬಿ ಎನ್ ಹರಿದಾಸ್ ಅವರ ಕ್ಯಾಮೆರ. 

ಶ್ರೀನಿವಾಸ್ ಕುಲಕರ್ಣಿಯವರ ಕತೆಯನ್ನು ತೆರೆಗೆ ಅಳವಡಿಸಿ ಈ ರತ್ನವನ್ನು ಬೆಳ್ಳಿ ತೆರೆಯಲ್ಲಿ ನೋಡಲು ಅನುಕೂಲ ಮಾಡಿಕೊಟ್ಟವರು ಪುಟ್ಟಣ್ಣ ಕಣಗಾಲ್.

ಹುಡುಕಿ ಹುಡುಕಿ ಸುಸ್ತಾಗಿ ಅಲ್ಲೇ ಒಂದು ಮೂಲೆಯಲ್ಲಿ ಕುಳಿತಾಗ ಈ ಚಿತ್ರದ ಪುಟ್ಟ ಮಾಹಿತಿ ಫಲಕ ಅಲ್ಲಿ ನೇತು ಹಾಕಿದ್ದು ಬಿದ್ದು ಹೋಗಿತ್ತು .. :-)


ಫಲಿತಾಂಶ
ನಿರ್ದೇಶನಪುಟ್ಟಣ್ಣ ಕಣಗಾಲ್
ನಿರ್ಮಾಪಕಅರಗಲ್ ಸಹೋದರರು
ಕಥೆಶ್ರೀನಿವಾಸ ಕುಲಕರ್ಣಿ
ಪಾತ್ರವರ್ಗಜೈಜಗದೀಶ್ ಆರತಿ ವೈಶಾಲಿ,ಪದ್ಮಾಕುಮುಟಅರುಣ ಇರಾನಿ,ಶುಭಲೋಕನಾಥ್ಲೀಲಾವತಿ,ಅಮರೀಶ್ ಪುರಿ
ಸಂಗೀತವಿಜಯಭಾಸ್ಕರ್
ಛಾಯಾಗ್ರಹಣಬಿ.ಎನ್.ಹರಿದಾಸ್
ಬಿಡುಗಡೆಯಾಗಿದ್ದು೧೯೭೬
ಚಿತ್ರ ನಿರ್ಮಾಣ ಸಂಸ್ಥೆಎ.1 ಮೂವೀಟೋನ್
ಹಿನ್ನೆಲೆ ಗಾಯನವಾಣಿ ಜಯರಾಂ,ಎಸ್.ಪಿ.ಬಾಲಸುಬ್ರಹ್ಮಣ್ಯಂ


ಈ ಚಿತ್ರ ಎಲ್ಲೇ ಹುಡುಕಿದರೂ ಸಿಗದ ಕಾರಣ, ಪುಟ್ಟಣ್ಣ ಕಣಗಾಲ್ ಚಿತ್ರಸರಣಿಯಲ್ಲಿ ಕೊನೆಯಲ್ಲಿ ಬರೆಯೋಣ ಎಂದು ಇಟ್ಟುಕೊಂಡಿದ್ದೆ. ಚಿತ್ರವನ್ನು ಕೈ ಬಿಡಲು ಮನಸ್ಸು ಒಪ್ಪಲ್ಲಿಲ್ಲ. ಆದ್ದರಿಂದ ಈ ಚಿತ್ರದ ಬಗ್ಗೆ ಅಂತರ್ಜಾಲದಲ್ಲಿ ಕೈ ಎಟುಕಿದ ಮಾಹಿತಿಯನ್ನು ಓದಿ ನನಗೆ ಅನ್ನಿಸಿದ ಒಂದಷ್ಟು ಪದಗಳಲ್ಲಿ ಒಂದು ಲೇಖನ ಮಾಡಿದ್ದೇನೆ. ಈ ಚಿತ್ರವನ್ನು ಯಾವಾಗಲಾದರೂ ನೋಡಿಯೇ ನೋಡುತ್ತೇನೆ ಎನ್ನುವ ಆತ್ಮವಿಶ್ವಾಸ ನನ್ನಲ್ಲಿದೆ. ನೋಡಿದ ದಿನ ಆ ಚಿತ್ರವನ್ನು ನನ್ನ ಮೂಸೆಯಲ್ಲಿ ಅರಳಿಸಿ, ನನಗೆ ತಾಕಿದ ಅನುಭವದ ಬಗ್ಗೆ ಒಂದಷ್ಟು ಪದಗಳನ್ನು ಹರಿಯ ಬಿಡುತ್ತೇನೆ...

****

ಪುಟ್ಟಣ್ಣ ಕಣಗಾಲ್ ಗುರುಗಳೇ, ಕರುನಾಡಿನ ಭಾಷೆಯಲ್ಲಿ ನಿಮ್ಮ ದಿಗ್ದರ್ಶನದಲ್ಲಿ ಅರಳಿದ ೨೪ ಚಿತ್ರಗಳಲ್ಲಿ ೨೩ ಚಿತ್ರಗಳನ್ನು ನೋಡಿ ನನ್ನ ಅನುಭವಕ್ಕೆ ನಿಲುಕಿದ ಒಂದೆರಡು ಮಾತುಗಳನ್ನು ಹಂಚಿಕೊಂಡಿದ್ದೇನೆ. ಒಂದು ಚಿತ್ರದ ಬಗ್ಗೆ ಕೇವಲ ಲಭ್ಯವಾದ ಮಾಹಿತಿಯನ್ನು ಮಾತ್ರ ಕೊಟ್ಟಿದ್ದೇನೆ. ನಿಮ್ಮ ಚಿತ್ರಗಳನ್ನು ಬಾಲ್ಯದಿಂದಲೂ ಆನಂದಿಸಿಕೊಂಡು ಬಂದಿದ್ದ ನನಗೆ, ಆ ಚಿತ್ರಗಳ ಬಗ್ಗೆ ಬರೆಯಬೇಕೆಂಬ ಹಂಬಲ ಹುಟ್ಟಿತ್ತು. ನಾ ಏನೇ ಬರೆದಿದ್ದರೂ ಅದು ನಿಮ್ಮ ಆಶೀರ್ವಾದದ ಬಲ ನನ್ನೊಳಗೆ ಕೂತು ಬರೆಸಿದೆ. ಈ ಲೇಖನಮಾಲಿಕೆಗಳನ್ನೂ ಬರೆಯುವ ಸಾಹಸಕ್ಕೆ ಸ್ಫೂರ್ತಿ ನೀಡಿದವರು ನನ್ನ ಅಪ್ಪ (ಮಂಜುನಾಥ್), ಮತ್ತು ನನ್ನ ಸೋದರ ಮಾವ (ಶ್ರೀಕಾಂತ್ ಅಲಿಯಾಸ್ ರಾಜ),  ಇವರಿಬ್ಬರೂ ಹಲವಾರು ರೀತಿಯಲ್ಲಿ ನನಗೆ ಮಾರ್ಗದರ್ಶಿಗಳು ಮತ್ತು ಪ್ರತ್ಯಕ್ಷವಾಗಿ ಪರೋಕ್ಷವಾಗಿ ಶ್ರೀ  ನೀವು ಬರೆಯಿರಿ ಖಂಡಿತ ನೀವು ಈ ಸುಂದರ ಮಾಲೆಯನ್ನು ಪೂರ್ಣ ಮಾಡುತ್ತೀರಿ ಎಂದು ಧೈರ್ಯ ತುಂಬಿದವರು ಶ್ರೀ ಬಾಲಸುಬ್ರಮಣ್ಯ ಅರ್ಥಾತ್ ಬಾಲೂ ಸರ್, ಶ್ರೀ ಪ್ರಕಾಶ್ ಹೆಗ್ಡೆ, ಶ್ರೀಮತಿ ರೂಪ ಸತೀಶ್, ಶ್ರೀಮತಿ ನಿವೇದಿತ ಚಿರಂತನ್, ಶ್ರೀಮತಿ ಸ್ವರ್ಣ ಪಿ, ಶ್ರೀಮತಿ ಹರಿಣಿ GNT, ಶ್ರೀಮತಿ ಸುಗುಣ ಮಹೇಶ್, ಬದರಿನಾಥ್ ಪಲವಳ್ಲಿ  ಮತ್ತು ನಿಮ್ಮ ದಿಗ್ದರ್ಶನದ ಬಗ್ಗೆ ಅಭೂತಪೂರ್ವ ಮಾಹಿತಿ ಕೊಟ್ಟ ನಿಮ್ಮಯ ಆತ್ಮೀಯ ಸ್ನೇಹಿತರಾದ ಶ್ರೀ ಮೋಹನ್ ಕಂಪ್ಲಾಪುರ್ ಅಥವಾ ಕಂಪ್ಲಾಪುರದ ಮೋಹನ್  ಮತ್ತು ಅನೇಕ ಪುಟ್ಟಣ್ಣ ಕಣಗಾಲ್ ಅಭಿಮಾನಿಗಳು.

ಇಂದಿಗೂ ನನಗೆ ನೆನಪಿದೆ ನಿಮ್ಮ ಸಹೋದರ ಶ್ರೀ ನರಸಿಂಹ ಶಾಸ್ತ್ರಿಗಳು ನಿರರ್ಗಳವಾಗಿ ಒಂದೂವರೆ ತಾಸು ನಿಮ್ಮ ಬೆಳ್ಳಿಮೋಡದ ಚಿತ್ರದ ತಯಾರಿಯಿಂದ ಹಿಡಿದು ಸಿನಿಮಾ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿದ್ದನ್ನು ಅದ್ಭುತವಾಗಿ ಕಣ್ಣಿಗೆ ಕಟ್ಟಿದಂತೆ ವಿವರಿಸಿದ ರೀತಿ. ನಿಮ್ಮ ಮತ್ತು ನಿಮ್ಮ ಸಹೋದರರ ಚರಣ ಕಮಲಗಳಿಗೆ ಈ ಲೇಖನ ಅರ್ಪಿತ.

ಇದು ಖಂಡಿತ ನಾ ಬರೆದಿದ್ದಲ್ಲ, ನನ್ನೊಳಗೆ ಕೂತು, ನನಗೆ ಪ್ರೇರಣೆ ನೀಡಿ ನನ್ನ ಕೈಯಿಂದ ಬರೆಸಿದವರು.  ನೀವೇ ಹೇಳುವಂತೆ ಈ ಲೇಖನ ಮಾಲಿಕೆಯ ದಿಗ್ದರ್ಶನ ಜಗನ್ಮಾತೆ.

ಧನ್ಯವಾದಗಳು ಗುರುಗಳೇ ಮತ್ತು ಆರಂಭದಿಂದಲೂ ಪ್ರೋತ್ಸಾಹಿಸಿದ ಎಲ್ಲಾ ಓದುಗರಿಗೆ ನನ್ನ ಶಿರಸಾ ಪ್ರಣಾಮಿ.. !

Saturday, October 31, 2015

ಕಾಡುವ ಭಾವದೊಳಗೆ ಮಾಸದ ಮಸಣದ ಹೂವು (1984)

ಕೊಳವೆ ಬಾವಿ ತೋಡುವಾಗ ಆ ಯಂತ್ರ ಒಂದೇ ಸಮನೆ ನೆಲವನ್ನು ಕೊರೆಯುತ್ತಾ ಹೋಗುತ್ತದೆ ಎಡಬಿಡದೆ. ಹಾಗೆಯೇ ಪುಟ್ಟಣ್ಣ ಕಣಗಾಲ್ ಅವರ ನಿರ್ದೇಶನದ ಅಂತಿಮ ಚಿತ್ರ ಕೂಡ. ಈ ಚಿತ್ರವನ್ನು ಅನೇಕ ಬಾರಿ ನೋಡಿದ್ದೇನೆ. ಈ ಲೇಖನ ಬರೆಯುವ ಮೊದಲು ನೋಡಲು ಕುಳಿತೆ. ಸೂಕ್ಷ್ಮವಾಗಿ ಗಮನಿಸಿದಾಗ ಅರಿವಿಗೆ ಬಂದದ್ದು, ಈ ಚಿತ್ರದಲ್ಲಿ ಅನೇಕ ಉದ್ದುದ್ದ ದೃಶ್ಯಗಳು ಇವೆ (ಲಾಂಗ್ ಶಾಟ್ಸ್). ನನಗೆ ಅಚ್ಚರಿ ಆಯಿತು, ತಾಂತ್ರಿಕತೆ ಮತ್ತು ನಿರ್ದೇಶನದ ಮೇಲೆ ಮತ್ತು ಕತೆಯ ಮೇಲೆ ಹಿಡಿತ ಇದ್ದಾಗ ಎಂಥಹ ಜಾದೂ ಮಾಡಬಹುದು ಎಂದು.

ಈ ಚಿತ್ರ ಚೆನ್ನಾಗಿದೆ ಎಂದರೆ, ಮನುಕುಲದ ಮೇಲೆಯೇ ಒಂದು ರೀತಿಯಲ್ಲಿ ವಾಕರಿಕೆ ಬರುತ್ತದೆ, ಏಕೆಂದರೆ ಇದರ ಹುಟ್ಟಿಗೆ ಮನುಕುಲದ ವಿಷಮ ಮನಸ್ಥಿತಿಯೇ ಕಾರಣ. ಶ್ರೀ ತ ರಾ ಸುಬ್ಬರಾಯರು ರಚಿಸಿದ ಅನೇಕ ಕೃತಿಗಳು ಚಲನಚಿತ್ರಗಳಾಗಿವೆ. ಇದು ಒಂದು ರೀತಿಯ ವಿಚಿತ್ರ ಪರಿಸ್ಥಿತಿ. ಪುಟ್ಟಣ್ಣ ಅವರು ಈ ಚಿತ್ರವನ್ನು ನಿರ್ದೇಶಿಸಿದ ರೀತಿ ನೋಡಿದಾಗ, ಮುಂದಿನ ಚಿತ್ರಗಳು ಹೇಗಿರಬಹುದು ಎನ್ನುವ ಒಂದು ಖುಷಿ ಮನಸ್ಸಿಗೆ ಬಂದಿದ್ದು ಸುಳ್ಳಲ್ಲ. 

ಕಾರಣ, ನಾ ಮಸಣದ ಹೂವು ಕಾದಂಬರಿಯನ್ನು ಓದಿದಾಗ ಅಕ್ಷರಶಃ ಮನಸ್ಸು ಗಲಿಬಿಲಿಗೊಂಡಿದ್ದು ಮತ್ತು ಮನಸ್ಸು ತಲ್ಲಣಗೊಂಡಿದ್ದು ನಿಜ. ಮನುಜ ತನಗೆ ಬೇಕಾದ ದೇಹದ ಬಯಕೆಗೆ ಅಥವಾ ತನ್ನ ಕೆಲಸ ಸಾಧಿಸಿಕೊಳ್ಳುವ ತವಕದಲ್ಲಿ ಸಮಾಜದಲ್ಲಿ ಒಂದು ಅಸಹ್ಯ ಎನಿಸುವ ಒಂದು ಮೂಲೆಯನ್ನು ಸೃಷ್ಠಿ ಮಾಡಿದ್ದಾನೆ ಎಂದು ಅರಿವಾದಾಗ ನಿಜಕ್ಕೂ ವಕರಿಕೆಯೇ ಬರುತ್ತದೆ. ಕಾದಂಬರಿ ಕತೃ, ಆ ಲೋಕದ ದೃಶ್ಯವನ್ನು ಅಷ್ಟು ಸಹಜವಾಗಿ ಕಟ್ಟಿಕೊಟ್ಟಿದ್ದಾರೆ. 

ಪುಟ್ಟಣ್ಣ ಕಣಗಾಲ್ ಅವರು ಅಕ್ಷರಶಃ ಪುಸ್ತಕದಲ್ಲಿ ಇರುವಂಥಹ ಕ್ರೌರ್ಯ, ಸಾಕಪ್ಪ ಎನ್ನಿಸುವಷ್ಟು ಮನಸ್ಸಿಗೆ ಹಿಂಸೆ ಅನ್ನಿಸುವ ದೃಶ್ಯಗಳನ್ನು ನವಿರಾಗಿ, ಮನಕ್ಕೆ ತಾಕುವಂತೆ ಚಿತ್ರೀಕರಿಸಿದ್ದಾರೆ. ಈ ರೀತಿಯ ಕಥೆಗಳನ್ನು ದೃಶ್ಯಕಾವ್ಯವಾಗಿ ಮಾಡಲು ಅದ್ಭುತ ಸೃಜನಶೀಲತೆ ಬೇಕು.  ಎಲ್ಲೇ ಮೀರಲು ಎಲ್ಲಾ ಅವಕಾಶಗಳು ಇದ್ದಾಗ್ಯೂ, ಸಹ್ಯವಾಗಿ ಚಿತ್ರವನ್ನು ಕೊಟ್ಟಿರುವುದು ಅವರ ಅಸಾಧಾರಣ ಪ್ರತಿಭೆಯ ವಿರಾಟ್ ರೂಪ ಎಂಬ ಮಾತು ನನ್ನದು. 

ಉತ್ತುಂಗದಲ್ಲಿದ್ದ ಅಂಬರೀಶ್ ಅಕ್ಷರಶಃ ತಮ್ಮ ಗುರುಗಳ ದಿಗ್ದರ್ಶನದಲ್ಲಿ ತಮ್ಮ ಇಮೇಜ್ ಬಿಟ್ಟು ಅಭಿನಯಿಸಿದ್ದಾರೆ. ಮೇಡಂ ನನಗೆ ಎರಡು ಸಾವಿರ ಕೊಡಿ, ನೀವು ಹೇಳಿದ ಕೆಲಸ ಮಾಡಿಕೊಂಡು ಇರುತ್ತೇನೆ ಎನ್ನುವಾಗ ಅವರ ಕಣ್ಣುಗಳಲ್ಲಿ ಕಾಣುವ ನೋವು, ಜೀವನದ ಬಗ್ಗೆ ತಿರಸ್ಕಾರ ಜೊತೆಯಲ್ಲಿಯೇ, ಹೇಗಾದರೂ ಸರಿ ಬದುಕಬೇಕು ಎನ್ನುವ ಭಾವ ಎದ್ದು ಕಾಣುತ್ತದೆ. ತಮ್ಮ ತಾಯಿಗೆ ರಾತ್ರಿಯೊಳಗೆ ನಾ ಬರದಿದ್ದರೆ, ಇಲಿ ಪಾಷಾಣ ಮತ್ತು ನೀರು ಇದೆ ಎನ್ನುವ ಧ್ವನಿಯಲ್ಲಿ ನಿರಾಶೆ, ಹತಾಶೆ ಮತ್ತು ತನ್ನ ತಾಯಿಗೆ, ಬಡತನದಿಂದ ಮುಕ್ತಿ ನೀಡಲು ವಿಷ ತಿನ್ನು ಎಂದು ಹೇಳುವಂಥಹ ದೃಶ್ಯ. ಇದರಲ್ಲಿ ಅವರ ಅಭಿನಯ ಕಣ್ಣಲ್ಲಿ ನೀರು ಮೂಡಿಸುತ್ತದೆ. 

ಎರಡು ಸಾವಿರ ಕೊಡಿ ಎಂದಾಗ, ಅದಕ್ಕೆ ಕೆಲವು ನಿಯಮಗಳಿವೆ ಎಂದಾಗ, ಏನೇ ಆಗಲಿ, ನಾ ನೀವು ಹೇಳುವ ಕೆಲಸ ಮಾಡುತ್ತೇನೆ ಎಂದು ಎರಡು ಬೊಗಸೆಗಳನ್ನು ಒಡ್ಡಿ ನಿಂತಾಗ, ಯಾರ ಕಣ್ಣಲ್ಲೇ ಆದರೂ ಜೋಗದ ಹನಿ ಕಂಡೆ ಕಾಣುತ್ತದೆ. ತಲೆಹಿಡುಕನ ಪಾತ್ರದಲ್ಲಿ ಅದ್ಭುತ ಪರಕಾಯ ಪ್ರವೇಶ. ನಡೆ, ನುಡಿ, ಹಾವ ಭಾವ, ಅಬ್ಬಬ್ಬ ಎನ್ನಿಸುತ್ತದೆ. 

ಜಯಂತಿ, ಮಾತೆ ಬೇಡ, ಹಲವಾರು ದೃಶ್ಯಗಳಲ್ಲಿ ಬರಿ ಕಣ್ಣುಗಳಲ್ಲೇ ಅಭಿನಯ ತೋರಿಸಿದ್ದಾರೆ. ಆ ಪಾತ್ರಕ್ಕೆ ಬೇಕಾದ ಅಂಗೀಕ ಅಭಿನಯ, ತಿರಸ್ಕಾರ, ಹಣಕ್ಕೆ ಮಾತ್ರ ಪ್ರಾಮುಖ್ಯತೆ ಮಿಕ್ಕವು ಗೌಣ ಎಂದು ಕೆಲವು ದೃಶ್ಯಗಳಲ್ಲಿ ಕಂಡು ಬಂದರೆ, ಇನ್ನೂ ಕೆಲವು ದೃಶ್ಯಗಳಲ್ಲಿ ನಂಬಿದವರನ್ನು ಸಲಹುವುದು, ಜೊತೆಯಲ್ಲಿಯೇ ಅವರನ್ನು ರಕ್ಷಿಸಲು ಮುಂದಾಗುವ ರೀತಿಯ  ಅಭಿನಯ ಅವರು ಮಾತ್ರ ಮಾಡಲು ಸಾಧ್ಯ. ತಾನು ಕಳಿಸಿದ ಹುಡುಗಿಯ ವರ್ತನೆ ಬಗ್ಗೆ ಕೇಳಿಬಂದಾಗ ಕೋಪಗೊಂಡು ಆ ಹುಡುಗಿಗೆ ದಂಡಿಸುತ್ತಾರೆ, ನಂತರ ನಿಜದ ಅರಿವಾದ ಮೇಲೆ, ಆಕೆಯನ್ನು ತಬ್ಬಿಕೊಂಡು ಕ್ಷಮೆ ಕೇಳುತ್ತಾರೆ. ಇಂಥಹ ವೃತ್ತಿಯಲ್ಲಿ ಈ ರೀತಿಯ ಮಾನವೀಯತೆಯೂ ಇದೆ ಎಂದು ಕೂಗಿ ತೋರಿಸುವ ಅಭಿನಯ. ಇಡಿ ಚಿತ್ರವನ್ನು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ್ದಾರೆ.  

ಇನ್ನು ಉಳಿದ ಪಾತ್ರಗಳು ಚಿತ್ರಕ್ಕೆ ಬೇಕಾದ ಅಗತ್ಯ ಅಭಿನಯವನ್ನು ನೀಡಿದ್ದಾರೆ. ಇಡಿ ಚಿತ್ರದ ತುಂಬಾ ತುಂಬಿಕೊಂಡಿರುವುದು ಅಂಬರೀಶ್ ಮತ್ತು ಜಯಂತಿ. ಇವರಿಬ್ಬರಿಂದ ಹಿತಮಿತವಾಗಿ, ಪರಿಣಾಮಕಾರಿಯಾಗಿ ಅಭಿನಯ ತೆಗೆದಿರುವುದು ಪುಟ್ಟಣ್ಣ ಅವರ ಅದ್ಭುತ ಹಿಡಿತ ಹೊಂದಿರುವ ನಿರ್ದೇಶನದ ಕುರ್ಚಿ. 

ಪಂಚಾಮೃತದಲ್ಲಿ ಹಾಲು, ಮೊಸರು, ಸಕ್ಕರೆ, ಜೇನುತುಪ್ಪ, ಮತ್ತು ಫಲಗಳು ಸೇರಿದಂತೆ, ಪ್ರತಿ ದೃಶ್ಯವನ್ನು ಕಲೆಯ ಹಾಲಿನ ಕಡಲಲ್ಲಿ ಅದಕ್ಕೆ ಬೇಕಾಗುವ ವಿವಿಧ ಭಾವಗಳನ್ನು ಬೆರೆಸಿ ಅದ್ದಿ ತೆಗೆದಂತೆ ಚಿತ್ರೀಕರಿಸಿದ್ದಾರೆ. ಚಿತ್ರವನ್ನು ನೋಡುತ್ತಾ ಹೋದಂತೆ, ಅಲ್ಲಿ ಚಿತ್ರಕಥಾವಸ್ತುಗಿಂತಲೂ ಪುಟ್ಟಣ್ಣ ಅವರ ನಿರ್ದೇಶಕನ ಜವಾಬ್ಧಾರಿ ಕೊಂಚವೂ ಅಲುಗಾಡದಂತೆ ಆದರೆ ಅವರ ಮೇಲೆ ಹೆಮ್ಮೆ ಬರುವಂತೆ ದೃಶ್ಯಗಳನ್ನು ಪೋಣಿಸಿದ್ದಾರೆ. 

ಕೆಲವು ಅದ್ಭುತ ದೃಶ್ಯಗಳು 
೧) ಮೇಡಂ, ಎರಡು ಸಾವಿರ ಕೊಡಿ ಎಂದಾಗ, ನನಗೆ ಒಂದು ಮುತ್ತು ಕೊಡು ಎಂದು ಕೇಳುತ್ತಾರೆ. ಹಿಂದೆ ಮುಂದೆ ನೋಡುತ್ತಾ ನಿಂತ ನಾಯಕನಿಗೆ ಬಯ್ದು, ಒಂದು ಮುತ್ತು ಕೊಡಲು ಹಿಂದೆ ಮುಂದೆ ನೀಡುವ ನೀನು ಈ ಮನೆಯಲ್ಲಿ ಏನು ತಾನೇ ಕೆಲಸ ಮಾಡ್ತೀಯ, ಹೋಗು ಹೋಗು ಎಂದು ಅಟ್ಟುತ್ತಾರೆ. ಆಗ ಕೊಂಚವೂ ಗಲಿಬಿಲಿ ಗೊಳ್ಳದೆ ಮುತ್ತು ನೀಡುತ್ತಾರೆ, ಆದರೆ ಆ ದೃಶ್ಯವನ್ನು ತೋರಿಸುವ ರೀತಿ ಅದ್ಭುತ. ಅಶ್ಲೀಲತೆ ಇಲ್ಲವೇ ಇಲ್ಲ ಅಲ್ಲಿ.  ಬದುಕಲೇ ಬೇಕು  ಎಂಬ ಹಠ ಬಂದಾಗ, ಜೀವನ ತನಗೆ ತಾನೇ ದಾರಿ ತೋರಿಸುತ್ತದೆ, ಹಾಗೂ ಧೈರ್ಯ ತುಂಬುತ್ತದೆ. 

೨) ಮೇಡಂ, ಸುಮ್ಮನೆ ಎರಡು ಸಾವಿರ ಗೊತ್ತಿರದ ಅವನಿಗೆ ಕೊಟ್ಟು ಬಿಟ್ಟಿರಿ, ಅವನು ಬರದೆ ಹೋದರೆ "ನೋಡು ಅವನು ನಿಯತ್ತಿನ ಮನುಷ್ಯ ಅನ್ನಿಸುತ್ತದೆ, ಒಂದು ವೇಳೆ ಬರದೆ ಹೋದರೆ, ನನ್ನ ಕಾಲುಮುಟ್ಟಿ ನಮಸ್ಕರಿಸಿದ ಅವನ ಶ್ರದ್ಧೆ ವಜಾ ಮಾಡಿಕೊಳ್ಳುತ್ತೇನೆ". ಬಂಡೆಯಲ್ಲಿ ಕೂಡ ನಂಬಿಕೆ ಇದು, ಒಲಿದರೆ ದೇವರಾಗುತ್ತದೆ, ಇಲ್ಲವೇ ಮನೆ ಕಟ್ಟಲು ಕಲ್ಲಾಗುತ್ತದೆ ಎನ್ನುತ್ತದೆ ಸುಭಾಷಿತ. ಎಷ್ಟು ನಿಜ ಅಲ್ಲವೇ. 

೩) ಇದುವರೆಗೂ ಯಾರು ಯಾರಿಗೋ ಕೈ ಮುಗಿದೇ, ಆದರೆ ಇಂದು ಒಂದು ದೇವರ ಮೂರ್ತಿ ತರಹ ಇರುವ ನಿಮಗೆ ಕೈಮುಗಿಯುತ್ತೇನೆ ಎಂದು ಲೋಕನಾಥ್ ಪಾತ್ರಧಾರಿಗೆ ಕೈಮುಗಿಯುವ ಜಯಂತಿ ಅಭಿನಯ. ಆ ಮನೆಗೆ ಬರುವವರೆಲ್ಲ ಬರಿ ಸುಖಃ ಅರಸಿಕೊಂಡು ಬರುವವರಲ್ಲ, ಬದಲಿಗೆ ಮಾನವೀಯತೆಯನ್ನು ಅರಸಿಕೊಂಡು ಬರುವವರು ಇದ್ದಾರೆ ಎನ್ನುವ ನಿರೂಪಣೆ ಇಲ್ಲಿದೆ. 

ಈ ಚಿತ್ರದ ದೊಡ್ಡ ಆಸ್ತಿ ಚಿತ್ರದಲ್ಲಿ ಅದ್ಭುತವಾಗಿ ಚಿತ್ರೀಕರಣಗೊಂಡ ಹಾಡುಗಳು. ಇಂಥಹ ಚಿತ್ರದಲ್ಲೂ ಕರುನಾಡನ್ನು, ಅದರ ಸೊಬಗನ್ನು ತೋರಿಸುವ ಪುಟ್ಟಣ್ಣ ಅವರ ವಿಶಿಷ್ಟ ಭಾವ ಇಲ್ಲೂ ಇದೆ. ಬಹುತೇಕ ಕರಾವಳಿ ಪ್ರದೇಶಗಳಲ್ಲಿ ಚಿತ್ರಿತವಾಗಿರುವ "ಕನ್ನಡ ನಾಡಿನ ಕರಾವಳಿ" ಜಯಚಂದ್ರನ್ ಮತ್ತು ವಾಣಿ ಜಯರಾಂ ಅವರ ಜೇನಿನ ಕಂಠದಲ್ಲಿ ಮೂಡಿ ಬಂದಿದೆ. ಎಸ್ ಆರ್ ಎಕ್ಕುಂಡಿ ಅವರ ಅಮೋಘ ಸಾಹಿತ್ಯಕ್ಕೆ ಕರಾವಳಿಯ ಎಲ್ಲಾ ಪ್ರಕಾರದ ಸಂಗೀತ ಒದಗಿಸಿರುವ ವಿಜಯಭಾಸ್ಕರ್, ಮತ್ತು ನೃತ್ಯ ಸಂಯೋಜನೆ, ಕರುನಾಡಿನ ವಿಶಿಷ್ಠತೆಯನ್ನು ಎತ್ತಿ ತೋರಿಸುವ ಹಾಡಾಗಿ ಉಳಿದುಕೊಂಡು ಬಂದಿದೆ. 

ಪ್ರೀತಿ ಎಲ್ಲಿಂದ ಹುಟ್ಟುತ್ತೆ ಹೇಗೆ ಜೀವನವನ್ನು ಬೆಳಗಬಲ್ಲದು ಎನ್ನುವ ಅನೇಕ ಪ್ರಶ್ನೆಗಳಿಗೆ ಹಾಡಿನ ರೂಪದಲ್ಲಿ ಚಿತ್ರೀಕರಿಸಿದ್ದಾರೆ "ಉಪ್ಪಿನ ಸಾಗರಕ್ಕೂ ಮುಪ್ಪಿದೆಯಂತೆ" ಮತ್ತೊಮ್ಮೆ ಜಯಚಂದ್ರನ್ ಮತ್ತು ವಾಣಿ ಜಯರಾಂ ಮನಸ್ಸಿನ ಮೂಲೆ ಮೂಲೆಯನ್ನು ತಟ್ಟುತ್ತಾರೆ. ವಿಜಯನಾರಸಿಂಹ ಅವರ ಸರಳ ಆದರೆ ಪರಿಣಾಮಕಾರಿ ಸಾಹಿತ್ಯ ಇಷ್ಟವಾಗಲೇ ಬೇಕು. ಪ್ರೇಮಿಗಳ ಹಾಡಾಗಿ ಬರುತ್ತದೆ. 

ಒಂದು ಕ್ಷಣದ ಆದರೆ ಜೀವನದ ಗತಿಯನ್ನು ಬದಲಾಯಿಸಬಲ್ಲ ತಿರುವನ್ನು ಒಂದು ಹಾದಿ ಬಿಟ್ಟ ಹುಡುಗಿಗೆ ಕೊಡುವ ನಾಯಕನನ್ನು ಕನಸಿನಲ್ಲಿ ಮತ್ತು ಮನಸ್ಸಿನಲ್ಲಿಯೇ ಅಭಿನಂದಿಸುವ ಹಾಡಾಗಿ ಬಂದಿದೆ "ಓ ಗುಣವಂತ". ಈ ಹಾಡಿನ ಸಾಹಿತ್ಯ ಎಷ್ಟು ಬಾರಿ ಕೇಳಿದರೂ, ಹೊಸ ಹೊಸ ರೀತಿಯಲ್ಲಿ ಮನಸ್ಸಿಗೆ ತಾಕುತ್ತದೆ. ಕನಸ್ಸುಗಳ ಮೂಟೆಯನ್ನು ಹೊತ್ತು ಸಾಗುವಾಗ ಬರುವ ಒಂದು ವಿಚಿತ್ರ ತಿರುವು ಮತ್ತು ಆ ತಿರುವಿಗೆ ಒಂದು ಕೊಂಕು ಹಾಕಿ, ಮತ್ತೆ ಹಳಿಗೆ ಬರುವ ಜೀವನ ಪಥವನ್ನು ತೋರುವ ಆ ನಾಯಕನಿಗೆ ಧನ್ಯವಾದಗಳನ್ನು ಅರ್ಪಿಸುವ ಹಾಡನ್ನು ಎಸ್ ಜಾನಕಿಯಮ್ಮ ಆಪೋಶನ ಮಾಡಿ ಹಾಡಿದ್ದಾರೆ. ಸಂಗೀತ, ಅದಕ್ಕೆ ತಕ್ಕಂತೆ ಸಾಹಿತ್ಯ, ಅದಕ್ಕೆ ಬೇಕಾದ ಅದ್ಭುತ ಗಾಯನ... ನಾ ಹೇಳೋಲ್ಲ ನೀವೇ ಕೇಳಿ ಈ ಹಾಡನ್ನು ತಲೆದೂಗದೆ ಇರಲು ಸಾಧ್ಯವೇ ಇಲ್ಲ. 

ಚಂದ್ರ ತೋರಿಸಲೇ, ನಕ್ಷತ್ರಗಳನ್ನು ನಿನ್ನ ಮುಡಿಗೆ ಪೋಣಿಸಲೇ ಎಂದು ಇಲ್ಲದ ಆಸೆ ಹುಟ್ಟಿಸುವ ಪ್ರೇಮಿಗಳ ಆಶಾಪಾಶದ ಮಧ್ಯದಲ್ಲಿ, ನನ್ನ ಮಟ್ಟ ಹೀಗಿದೆ, ನನಗೆ ಅದು ತರಲು ಆಗೋಲ್ಲ, ಇದು ತರಲು ಅಸಾಧ್ಯ ಎಂದು ಹೇಳುತ್ತಲೇ, ನಿನಗಾಗಿ ಏನು ತರಲಿ ಹೇಳು ಎಂದು ಪ್ರೀತಿಯ ನಿವೇದನೆ ಮಾಡುವ ಹಾಡಿನಲ್ಲಿ ಎಸ್ ಅರ್ ಎಕ್ಕುಂಡಿ ವಿರಚಿತ "ಯಾವ ಕಾಣಿಕೆ ನೀಡಲಿ" ಎಂದು ಎಸ್ ಪಿ ಬಾಲಸುಬ್ರಮಣ್ಯಂ ಮನವನ್ನು ತಟ್ಟುತ್ತಾರೆ. 

ಕಸದ ಬಿದ್ದ ಹೂವಿಗೂ ಬೆಲೆಯಿದೆ, ಮುದುಡಿ ಹೋದ ಮಾಲೆಗೆ ಬೆಲೆ ಕಟ್ಟುವ ಮನಸಿದ್ದರೆ ಸಾಕು, ಅದು ಹೃದಯ ಕಮಲದ ಗುಡಿಯಲ್ಲಿ ಪೂಜೆಗೆ ಅರ್ಹವಾಗುವ ಮನಸ್ಸಿಗೆ ಅರ್ಪಿತವಾಗುತ್ತದೆ ಎನ್ನುವ ಒಂದು ಹೃದಯ ಹಿಂಡುವ ಸಾಹಿತ್ಯ "ಮಸಣದ ಹೂವೆಂದು ನೀನೇಕೆ ಕೊರಗುವೆ" ಹಾಡು, ಇಲ್ಲಿ ಎಸ್ ಪಿ ಬಾಲಸುಬ್ರಮಣ್ಯಂ ಅವರ "ಪಾರ್ವತಿ" ಎಂದು ಕೂಗುವ ಶಬ್ದ ಮನಸ್ಸಿನ ಮೇಲೆ ತುಂಬಾ ಪರಿಣಾಮ ಬೀರುತ್ತದೆ. 

ಹಾಡುಗಳು ಚಿತ್ರದ ಅವಿಭಾಜ್ಯ ಅಂಗ ಮತ್ತು ಅದು ಕತೆಯನ್ನು ಮುಂದುವರೆಸಲು ಸಹಾಯವಾಗುತ್ತದೆ ಎಂದು ಬಲವಾಗಿ ನಂಬಿದ್ದ ಪುಟ್ಟಣ್ಣ ಕಣಗಾಲ್ ತಮ್ಮ ಅಂತಿಮ ಚಿತ್ರದಲ್ಲಿಯೂ ಕೂಡ ಹಾಡುಗಳನ್ನು ಸರಿಯಾದ ಜಾಗದಲ್ಲಿ ಅಳವಡಿಸಿಡಿಸಿ ಕಥೆಯ ಓಟಕ್ಕೆ ಒಂದು ನಿರ್ಧಿಷ್ಟ ವೇಗವನ್ನು ಕೊಟ್ಟಿದ್ದಾರೆ. 

ಇಡಿ ಚಿತ್ರ ಎಲ್ಲೂ ಒಂದಿನಿತು ಬೇಸರ ತರಿಸುವುದಿಲ್ಲ. ಒಬ್ಬ ಜಾದೂಗಾರ ಯಕ್ಷಿಣಿ ಮಾಡಿ ಮಾಡಿ ಜನರ ಮನಸ್ಸನ್ನು ಗೆಲ್ಲುವಂತೆ, ಪ್ರತಿ ದೃಶ್ಯಗಳನ್ನು ಜಾದೂಗಾರಿಕೆಯ ದಂಡದಿಂದ ಸ್ಪರ್ಶ ಮಾಡಿ, ಮರೆಯದ ಮಾಣಿಕ್ಯವನ್ನು ಬೆಳ್ಳಿ ತೆರೆಯಲ್ಲಿ ಬೆಳಗಿಸಿದ್ದಾರೆ. 

ಅನುಗ್ರಹ ಮೂವಿ ಮೇಕರ್ಸ್ ಲಾಂಛನದಲ್ಲಿ ಬಿ ಎಸ್ ಗಾಯತ್ರಿ ಮತ್ತು ಎಸ್ ಆರ್ ಸರ್ವೋತ್ತಮ ಕಣಗಾಲ್ ಅವರ ನಿರ್ಮಾಣದಲ್ಲಿ ಮೂಡಿ ಬಂದ ಈ ಚಿತ್ರ ರತ್ನಕ್ಕೆ ಛಾಯಾಗ್ರಾಹಣ ಮಾಡಿದವರು ಎಸ್ ಮಾರುತಿರಾವ್.  ಸರಳ ಆದರೆ ಪರಿಣಾಮಕಾರಿ ಸಂಭಾಷಣೆ ನೀಡಿದವರು ಟಿ ಜಿ ಅಶ್ವತ್ ನಾರಾಯಣ. 

ತಮ್ಮ ಎಲ್ಲಾ ಕಾಯಕಕ್ಕೂ ಪ್ರೇರೇಪಣೆ ನೀಡಿದ ಜಗನ್ಮಾತೆಯನ್ನು ಸ್ಮರಿಸುತ್ತಾ  ಆ ಮಾತೆಯ ದಿಗ್ದರ್ಶನದಲ್ಲಿ ಈ ದೃಶ್ಯ ಕಾವ್ಯವನ್ನು ಕಟ್ಟಿಕೊಟ್ಟವರು ಪುಟ್ಟಣ್ಣ ಕಣಗಾಲ್ ಅವರು. 

ತಾವು ಕಂಡ ರೀತಿಯಲ್ಲಿ ಚಿತ್ರವನ್ನು ಮುಗಿಸುವ ಮೊದಲೇ ಆ ಜವರಾಯನ ಕರೆಗೆ ಓಗೊಟ್ಟು ಇಹಲೋಕದಿಂದ ಹೊರನೆಡೆದ ಮೇಲೆ, ಅವರಿಗೆ ಗೌರವ ಸಲ್ಲಿಸುತ್ತಲೇ, ಉಳಿದ ಭಾಗವನ್ನು ಆದಷ್ಟು ಪುಟ್ಟಣ್ಣ ಅವರ ಕಲ್ಪನೆಯಲ್ಲಿ ಇರಬಹುದು ಎನ್ನುವ ರೀತಿಯಲ್ಲಿ ಚಿತ್ರವನ್ನು ಪೂರ್ಣಗೊಳಿಸಿ, ತಾವು ಚಿತ್ರೀಕರಿಸಿದ ಭಾಗದಲ್ಲಿ ತಪ್ಪಿದ್ದರೆ ಅದು ತಮ್ಮದೇ ಎಂದು ಹೇಳಿ ತಮ್ಮ ಗೆಳೆಯ ಪುಟ್ಟಣ್ಣ ಕಣಗಾಲ್ ಅವರಿಗೆ ವಂದನೆ ಅರ್ಪಿಸುವ ಇತ್ತೀಚಿಗಷ್ಟೇ ಪುಟ್ಟಣ್ಣ ಕಣಗಾಲ್ ಅವರನ್ನು ಸ್ವರ್ಗದಲ್ಲಿ ಭೇಟಿ ಮಾಡಲು ತೆರಳಿದವರು ರವಿ ಅಥವಾ ಕೆ ಎಸ್ ಎಲ್ ಸ್ವಾಮೀ. 



ಈ ಚಿತ್ರದ ಹೆಸರು ಮಸಣದ ಹೂವು ಎಂದಿದ್ದರೂ ಕನ್ನಡಿಗರ ಮತ್ತು ಚಲನ ಚಿತ್ರ ರಸಿಕರ ಹೃದಯ ಕಮಲದಲ್ಲಿ ಈ ಚಿತ್ರ ಎಂದೂ ಬಾಡದ ಪಾರಿಜಾತ ಹೂವಾಗಿ ಸದಾ ನಗುನಗುತ್ತಲೇ ಇರುತ್ತದೆ. 

ಪುಟ್ಟಣ್ಣ ಕಣಗಾಲ್ ಮತ್ತು ರವಿ ಅವರಿಗೆ ಈ ಲೇಖನ ಅರ್ಪಿತ. 

Thursday, October 29, 2015

ಸ್ನೇಹದ ಅಮೃತ ಸಿಂಚನ ಮಾಡುವ ಅಮೃತ ಘಳಿಗೆ (1984)

ಸಮುದ್ರದಲ್ಲಿ ತೇಲುವ ಅನುಭವ ಎಷ್ಟು ಸೊಗಸೋ ಅಷ್ಟೇ ಭಯನಕವಾಗಿರುತ್ತೆ ದೈತ್ಯ ಅಲೆಗಳು ಸುತ್ತ ಮುತ್ತಲ ಸೃಷ್ಠಿಯನ್ನು ಆಪೋಶನ ಮಾಡುವಾಗ. ಆದರೆ ಆ ದೈತ್ಯ ಅಲೆಗಳಿಗೆ ಶಕ್ತಿ ಕೊಡುವುದು ಯಾವುದು ಗೊತ್ತೇ, ಕಡಲಲ್ಲಿ ಇರುವ ನೀರು ಮತ್ತು ಅದರ ಮೇಲೆ ಬೀಸುವ ಗಾಳಿ.

ನಿಜ ಅದರ ಒಡಲೊಳಗೆ ಇರುವ ನೀರು ದೈತ್ಯಾಕಾರ ತಾಳುತ್ತದೆ ಎಂದರೆ, ಅದರೊಳಗಿನ ಶಕ್ತಿ ನಮ್ಮ ಊಹೆಗೆ ನಿಲುಕದ್ದು. 

ಪುಟ್ಟಣ್ಣ ಕಣಗಾಲ್ ಅವರು ಮಾಮೂಲಿ ಎನ್ನುವ ಕಥೆಯನ್ನು ಕೂಡ ಅಸಾಧಾರಣ ರೀತಿಯಲ್ಲಿ ತೆರೆಯ ಮೇಲೆ ಬಡಿಸುತ್ತಿದ್ದುದು ಅವರ ಅಗಾಧ ಪ್ರತಿಭೆಯ ಶಕ್ತಿಯಿಂದ. ನಮ್ಮ ಕಣ್ಣಿಗೆ ಸಾಧಾರಣ ಎನ್ನಿಸುವುದನ್ನು ಅಷ್ಟೇ ವಿವರವಾಗಿ, ವಿಶಿಷ್ಟ ರೀತಿಯಿಂದ ಹೀಗೂ ನೋಡಬಹುದು ಎನ್ನುವುದನ್ನು ಕಳಿಸಿಕೊಟ್ಟ ಗುರುಗಳು ಅವರು. 

ಅಮೃತ ಘಳಿಗೆ ಈ ಚಿತ್ರದ ಕಥೆಯನ್ನು ಅವರ ಜೀವದ ಗೆಳೆಯ ಮೋಹನ್ ಕಂಪ್ಲಾಪುರ್ ಕೊಟ್ಟಾಗ ಅ ಪುಸ್ತಕದ ಮೇಲೆ ಇದ್ದ ಶಿರೋನಾಮೆ "ದೊಡ್ಡೇರಿ ವೆಂಕಟಗಿರಿ ರಾವ್ - "ಅವಧಾನ" ". ಅದನ್ನೇ ಸುಂದರ ಚಿತ್ರಕಥೆ ಮಾಡಿ, ಅದಕ್ಕೊಂದು ಸುಂದರ ತಾಣವನ್ನು ಹುಡುಕಿ, ಅಮೃತ ಘಳಿಗೆ ಎನ್ನುವ ಒಂದು ನಿತ್ಯ ನೂತನ ಚಿತ್ರವನ್ನು ನೀಡಿದರು. ಈ ಕಥೆ ಆ ಕಾಲದಲ್ಲಿ ಸುಧಾ ವಾರ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಮೂಡಿ ಬಂದಿತ್ತು. ಪುಟ್ಟಣ್ಣ ಅವರ ಹುಡುಕಾಟದಲ್ಲಿ ಸಿಕ್ಕ ಇಂಥಹ ಕಥಾ ಮುತ್ತುಗಳು ಹೇರಳ. 

ಎಸ್ ಆರ್ ರಾಜನ್, ಭೀಮ ರಾವ್, ಕೆ ನಾಗರತ್ನ, ಪುಟ್ಟಣ್ಣ ಕಣಗಾಲ್ ತಂಡ ನಿರ್ಮಾಪಕರಾಗಿ ಈ ಚಿತ್ರವನ್ನು ಜಯಭೇರಿ ಫಿಲಂಸ್ ಲಾಂಛನದಲ್ಲಿ ತೆರೆಗೆ ತಂದರು. 

ಆರಂಭದಲ್ಲಿ ಪುಟ್ಟಣ್ಣ ಅವರ ಮಾತೃಶ್ರಿ ಅವರಿಗೆ ನಮನ ಸಲ್ಲಿಸುತ್ತಾ, ಶುರುವಾಗುವ ಈ ಚಿತ್ರದ ವಿಶೇಷ ಛಾಯಾಗ್ರಹಣ ಬಿ ಎಸ್ ಬಸವರಾಜ್ ಅವರದ್ದು. ಅದ್ಭುತ ಹಾಡುಗಳನ್ನು ಬರೆದದ್ದು ಜೀವದ ಗೆಳೆಯ ವಿಜಯನಾರಸಿಂಹ ಅದಕ್ಕೆ ಸಂಗೀತ ಕಿರೀಟ ತೊಡಿಸಿದವರು ಇನ್ನೊಬ್ಬ ಜೀವದ ಗೆಳೆಯ ವಿಜಯಭಾಸ್ಕರ್. 

ಪುಟ್ಟಣ್ಣ ಅವರಿಗೆ ಕರುನಾಡಿನ ಪ್ರತಿಭೆಗಳನ್ನು, ಕರುನಾಡಿನ ಸುಂದರ ತಾಣಗಳನ್ನು ಪರಿಚಯಿಸುವ ಉತ್ಸಾಹ ಯಾವಾಗಲೂ ಇತ್ತು. ಅವರ ಚಿತ್ರಗಳ ಮೂಲಕ ಬೆಳಕಿಗೆ ಬಂದ ನಕ್ಷತ್ರಗಳು ಅನೇಕ ಅನೇಕ. ಈ ಚಿತ್ರದ ಮೂಲಕ ಕರುನಾಡಿಗೆ ಕೊಟ್ಟ ಉಡುಗೊರೆ ಬಿ ಆರ್ ಛಾಯ ಎನ್ನುವ ಕರುನಾಡಿನ ಮನೆಮಗಳಾದ ಗಾಯಕಿ. 

ಚುರುಕು ಸಂಭಾಷಣೆ, ಹಿತಮಿತವಾದ ಪದಗಳು ಪುಟ್ಟಣ್ಣ ಚಿತ್ರಗಳ ಆಸ್ತಿ, ಈ ಚಿತ್ರಕ್ಕೆ ಪದಗಳನ್ನು ಜೋಡಿಸಿದವರು ಬಿ ಎಲ್ ವೇಣು. ಜಗನ್ಮಾತೆಯ ದಿಗ್ದರ್ಶನದಲ್ಲಿ ಚಿತ್ರಕಥೆ, ನಿರೂಪಣೆ ಮತ್ತು ನಿರ್ವಹಣೆ ಪೂಜ್ಯ ಗುರುಗಳಾದ ಪುಟ್ಟಣ್ಣ ಕಣಗಾಲ್ ಅವರದ್ದು. 

ಪುಟಿಯುವ ಯೌವನದ ಉತ್ಸಾಹ ಕೆಲವೊಮ್ಮೆ ಎಂಥಹ ಹಾದಿಯನ್ನು ಹಿಡಿಯುತ್ತದೆ ಎನ್ನುವುದರ ಆರಂಭ ಈ ಚಿತ್ರದ ಆರಂಭಿಕ ದೃಶ್ಯದಲ್ಲಿ ಕಾಣುತ್ತದೆ. ಬುಗ್ಗೆ ಬುಗ್ಗೆಯಾಗಿ ದೋಣಿಯ ಮೋಟಾರಿನ ಕೆಳಗೆ ಉಕ್ಕುವ ನೀರು ಈ ಮಾತಿಗೆ ಸಾಕ್ಷಿ. 
ಆಧುನಿಕ ಪ್ರಪಂಚ ದಾಪುಗಾಲು ಇಡುತ್ತಾ ಸಾಗಿದಾಗ ಪ್ರಕೃತಿಯನ್ನು ಮನುಷ್ಯ ಹೇಗೆ ಕಬಳಿಸುತ್ತಾ ಹೋಗುತ್ತಾನೆ ಎನ್ನುವುದಕ್ಕೆ ಶರಾವತಿ ಹಿನ್ನೀರಿನ ಬಗ್ಗೆ ನಾಯಕಿ ಮಾತಲ್ಲಿ ಬರುವ ಆರಂಭಿಕ ಸಂಭಾಷಣೆ ಸಾಕ್ಷಿಯಾಗಿ ನಿಲ್ಲುತ್ತದೆ. 

ಶಾಲೆಯ ಕಡಿವಾಣದ ದಿನಗಳಿಂದ ಕಾಲೇಜು ಎನ್ನುವ ಸ್ವತಂತ್ರ ಎನ್ನುವ ಇನ್ನೊಂದು ಪರಿಧಿಯೊಳಗೆ ಹೋಗುವ ಹರೆಯದ ತುಡಿತವನ್ನು ಕೆಲವೇ ದೃಶ್ಯಗಳಲ್ಲಿ ಅಚ್ಚುಕಟ್ಟಾಗಿ ತಂದಿದ್ದಾರೆ. ನೋಡಿದ ತಕ್ಷಣ ರೂಪು, ವಯ್ಯಾರ ಅಥವಾ ಲಕ್ಷಣಗಳನ್ನು ಗಮನಿಸದೆ ಪ್ರೀತಿ ಎನ್ನುವ ಒಂದು ವಿಚಿತ್ರ ಭಾವಕ್ಕೆ ಬೀಳುವ ನಾಯಕ ಪಾತ್ರಧಾರಿ ರಾಮಕೃಷ್ಣ ಉತ್ತಮವಾಗಿ ಅಭಿನಯಿಸಿದ್ದಾರೆ. ನಾಯಕಿ ಪದ್ಮಾವಾಸಂತಿ ಮತ್ತೆ ಅಭಿನಯವನ್ನು ಸಾಣೆ ಹಿಡಿದಂತೆ ನಟಿಸಿದ್ದಾರೆ. ಇನ್ನೂ ಮೊದಲ ಪರಿಚಯ ಶ್ರೀಧರ್ ಗಂಭೀರ ಪಾತ್ರದಲ್ಲಿ ಮಿಂಚಿದ್ದಾರೆ. ಎಲ್ಲೂ ಅತಿರೇಕದ ಅಭಿನಯ ಅಥವಾ ದೃಶ್ಯಗಳನ್ನು ಕಟ್ಟಿ ಕೊಡದಿರುವುದು ಪುಟ್ಟಣ್ಣ ಅವರ ಎಲ್ಲಾ ಚಿತ್ರಗಳ ಪ್ರಮುಖ ಆಕರ್ಷಣೆ. ಹದವಾಗಿ, ನವಿರಾದ ಸಂಭಾಷಣೆಗಳು ಮತ್ತು ಅದಕ್ಕೆ ಬದ್ಧವಾಗಿ ನಿಲ್ಲುವ ದೃಶ್ಯ ಜೋಡಣೆ, ಪರಿಸರ ಇದು ಈ ಚಿತ್ರದ ಮತ್ತೊಂದು ಆಕರ್ಷಣೆ. ರಾಮಕೃಷ್ಣ ಒಬ್ಬರನ್ನು ಬಿಟ್ಟರೆ ಮಿಕ್ಕೆಲ್ಲಾ ಕಲಾವಿದರು ಅಷ್ಟೇನೂ ಬೆಳಕಿಗೆ ಬಂದು ಮಿಂಚಿದ ಪ್ರತಿಭೆಗಳಲ್ಲ. ಆದರೆ ಪ್ರತಿಯೊಬ್ಬರಲ್ಲೂ ಕಥೆಗೆ ಬೇಕಷ್ಟು ಅಭಿನಯ ಹೊಮ್ಮಿಸಿರುವ ರೀತಿ ಇಷ್ಟವಾಗುತ್ತದೆ.

ಸೂರ್ಯಾಸ್ತದ ಅನೇಕ ದೃಶ್ಯಗಳನ್ನು ಪರಿಣಾಮಕಾರಿಯಾಗಿ ಉಪಯೋಗಿಸಿರುವ ಪುಟ್ಟಣ್ಣ, ಅದನ್ನು ಸರಿಯಾದ ದೃಶ್ಯಕ್ಕೆ ಒಪ್ಪವಾಗಿ ಜೋಡಿಸಿದ್ದಾರೆ.

ಮೊದಲ ಪ್ರೇಮವನ್ನು ನಿವೇದಿಸುತ್ತಾ ಮನಸ್ಸಲ್ಲೇ ರಮ್ಯ ಕಲ್ಪನೆ ಮಾಡಿಕೊಳ್ಳುವ ಹಾಡಾಗಿ "ಮಯೂರಿ ನಾಟ್ಯ ಮಯೂರಿ" ಎಸ್ ಪಿ ಬಾಲಸುಬ್ರಮಣ್ಯಂ ಮತ್ತು ಛಾಯ ಅವರ ಕಂಠ ಸಿರಿಯಲ್ಲಿ ಬರುತ್ತದೆ. ರಾಮಕೃಷ್ಣ ಅವರ ನೃತ್ಯ, ಪದ್ಮಾವಾಸಂತಿ ಅಭಿನಯ ಈ ಹಾಡಿನ ಮೆಚ್ಚತಕ್ಕ ಅಂಶ. ಶರಾವತಿ ಹಿನ್ನೀರಿನ ರಮ್ಯ ತಾಣವನ್ನು ಪರಿಚಯಿಸಿಕೊಡುತ್ತಾರೆ

ಪ್ರಣಯದ ಉತ್ತುಂಗ, ಮತ್ತು ಮನಸ್ಸಿನ ಮೇಲೆ ಹಿಡಿತ ಜಾರುವ ದೃಶ್ಯವನ್ನು ಹಾಡಾಗಿ "ಪಾರವತಿ ಪರಶಿವನ ಪ್ರಣಯ ಪ್ರಸಂಗ" ಹಾಡಿನಲ್ಲಿ ಮನಸ್ಸಿನ ಮೇಲೆ ಬೀರುವ ವಿಧ ವಿಧ ಭಾವಕ್ಕೆ ಒಪ್ಪುವಂತೆ ಬಣ್ಣ ಬಣ್ಣಗಳ ಬೆಳಕಲ್ಲಿ ಈ ಹಾಡನ್ನು ಚಿತ್ರೀಕರಿಸಿದ್ದಾರೆ ಇಕ್ಕೇರಿಯ ದೇಗುಲದಲ್ಲಿ. ಪುಟ್ಟಣ್ಣ ಅವರ ತಾಂತ್ರಿಕ ಜ್ಞಾನದ ಭವ್ಯ ಅನಾವರಣ.

ಮುಂದಿನ ವಿದ್ಯಾಭ್ಯಾಸಕ್ಕೆ ಹೊರಡುವ ನಾಯಕ, ಮೊದಲ ಕಾಗದವನ್ನು ತಲುಪಿಸಿದಾಗ ಅದನ್ನು ಓದುವ ನಾಯಕಿ, ಮತ್ತು ಆ ದೃಶ್ಯವನ್ನು ಉಯ್ಯಾಲೆಯಲ್ಲಿ ತೂಗಿದಂತೆ ಚಿತ್ರೀಕರಿಸಿದ್ದಾರೆ. ಅದನ್ನು ನಾಯಕಿಯ ದೇಹದಲ್ಲಿ ಆಗುವ ಬದಲಾವಣೆ ಮತ್ತು ನಾಯಕ ಹೊರಳಿದ ಪಥದಲ್ಲಿ ನಿಲ್ಲುವನು ಎನ್ನುವ ಉಪಮೆ ನೀಡಿದ್ದಾರೆ. ಬಿಸಿಗೆ ಕರಗಿದ ಮಂಜಿನಂತೆ ನಾಯಕನ ಪ್ರೇಮವೂ ಪ್ರೀತಿಯೂ ಅನುಮಾನಕ್ಕೆ ತಿರುಗುತ್ತೆ ಇದರ ಮುನ್ಸೂಚನೆ ಈ ದೃಶ್ಯದಲ್ಲಿ ಕಾಣುತ್ತದೆ.

ನಾಯಕಿ ತನ್ನ ಬವಣೆಯನ್ನು ತನ್ನ ಆತ್ಮೀಯ ಸ್ನೇಹಿತ ಶ್ರೀಧರ್ ಗೆ ಹೇಳಲು ಹೊರ ಕರೆಯುತ್ತಾಳೆ, ಆದರೆ ಸ್ನೇಹಿತನ ಮುಂದೆ ತಾನು ಕಾಲು ಜಾರಿದ್ದೇನೆ ಎಂದು ಹೇಳಲು ತೊಳಲಾಡುವ ದೃಶ್ಯವನ್ನು ಅಷ್ಟೇ ಅದ್ಭುತವಾಗಿ ಕ್ಯಾಮೆರ ಓಡಾಡುತ್ತಲೇ ಇರುವಂತೆ ತೋರಿಸಿದ್ದಾರೆ. ಶ್ರೀಧರ್ ಹತ್ತಿರ ಬಂದು ಏನು ಸಮಾಚಾರ ಎಂದಾಗ, ಕ್ಯಾಮೆರ ನಿಲ್ಲುತ್ತದೆ, ಅಂದರೆ, ಜೀವದ ಗೆಳೆಯ ಆತ್ಮ ವಿಶ್ವಾಸ ತುಂಬುತ್ತಾನೆ ಮತ್ತು ತನ್ನ ಎಲ್ಲಾ ಕಷ್ಟಗಳಿಗೆ ಸ್ಪಂಧಿಸುತ್ತಾನೆ ಎನ್ನುವ ಭರವಸೆ ಮೂಡಿದಾಗ ತೂಗಾಡುವ ಮನಸ್ಸು ಒಂದು ತಹಬದಿಗೆ ನಿಲ್ಲುತ್ತದೆ ಎನ್ನುವ ಮಾತನ್ನು ಈ ದೃಶ್ಯದಲ್ಲಿ ಕಟ್ಟಿಕೊಟ್ಟಿದ್ದಾರೆ.

ನಾಯಕಿಯ ಪರಿಸ್ಥಿತಿಗೆ ಪರಿಹಾರ ಎನ್ನುವಂತೆ ತಾನೇ ಮದುವೆ ,ಮಾಡಿಕೊಳ್ಳುವ ಶ್ರೀಧರ್, ತನ್ನ ತಾಯಿಗೆ ಹೇಳುವ ಮಾತು "ಯಾವತ್ತೂ ಯಾವ ಕಾರಣಕ್ಕೂ ಇವಳ ಮನಸ್ಸನ್ನು ನೋಯುವ ಮಾತನ್ನು ಆಡಬೇಡ" ಎಂದಾಗ ತಾಯಿ ಹೇಳುವ ಅದ್ಭುತ ಮಾತು "ಮಗ ಇಷ್ಟ ಪಟ್ಟು ಮದುವೆ ಮಾಡಿಕೊಂಡ ಹೆಣ್ಣನ್ನು ನಿಕೃಷ್ಟವಾಗಿ ಕಾಣುವಷ್ಟು ಕೆಟ್ಟ ತಾಯಿಯಲ್ಲ" ಎನ್ನುತ್ತಾಳೆ.

ಇದಕ್ಕೆ ವಿವರಣೆಯೇ ಬೇಡವೇ ಬೇಡ.

ಕರುನಾಡಿನ ರಮ್ಯತಾಣ ಶ್ರೀಧರ ತೀರ್ಥ ಇರುವ ವರದಹಳ್ಳಿ. ಇಲ್ಲಿ ಚಿತ್ರೀಕರಣ ಮಾಡಿದ್ದಾರೆ ಒಂದು ಅದ್ಭುತ ಹಾಡನ್ನು "ಹಿಂದೂಸ್ಥಾನವು ಎಂದೂ ಮರೆಯದ" ಜಯಚಂದ್ರನ್ ಹಾಡಿರುವ ರೀತಿ, ಆ ಸಾಹಿತ್ಯ ಅದ್ಭುತ. ಶ್ರೀಧರ್ ಈ ಹಾಡಿಗೆ ಉತ್ತಮ ಅಭಿನಯ ನೀಡಿದ್ದಾರೆ. ಮುಂದೆ ಇದೆ ಹಾಡನ್ನು ಬಿ ಆರ್ ಛಾಯ ಹಾಡಿರುವ ರೀತಿಯೂ ಸೊಗಸಾಗಿದೆ.

ಶ್ರೀಧರ್ ಪಾತ್ರ ಮರಣಹೊಂದಿದಾಗ, ಮುಗ್ಧ ಮಗು ಸ್ಮಶಾನದಲ್ಲಿ ಏನೂ ಮಾತಾಡದೆ ಅಥವಾ ಅಳಲು  ಗೊತ್ತಾಗದೆ ನಿಂತಿರುತ್ತದೆ. ಇಲ್ಲಿ ಯಾವುದೇ ಭಾವನಾತ್ಮಕ ಸಂಭಾಷಣೆ ಇರುವುದಿಲ್ಲ, ನಿಶ್ಯಬ್ಧ... ಅತ್ಯುತ್ತಮ ದೃಶ್ಯ ಇಡಿ ಚಿತ್ರದಲ್ಲಿ.

ಕಡೆಯ ಕೆಲ ದೃಶ್ಯದಲ್ಲಿ ರಾಮಕೃಷ್ಣ ತನ್ನ ತಪ್ಪಿನ ಅರಿವಾಗಿ ನಾಯಕಿಯನ್ನು ನೋಡಲು ಬಂದಾಗ, ನಾಯಕಿಯ ಮೊಗದಲ್ಲಿ ತನ್ನ ಬಾಳನ್ನು ನಾಶ ಮಾಡಿದ ಅವನನ್ನು ನೋಡಿದ ತಕ್ಷಣ ಕೋಪ ಆದರೆ ಕೆಲವು ಕ್ಷಣಗಳಲ್ಲಿ ಶಾಂತ ಸ್ವಭಾವದ ಅಭಿನಯ ಸೂಪರ್ ಸೂಪರ್ ಎನ್ನಿಸುತ್ತದೆ.

ಶ್ರೀಧರ್ ಬರೆದಿಟ್ಟ ಪತ್ರ ಮತ್ತು ಉಯಿಲನ್ನು ಓದುವ ರಾಮಕೃಷ್ಣ ಕೂತಿರುವ ಶರಾವತಿ ಹಿನ್ನೀರಿನ ದಡದಲ್ಲಿ ದೃಶ್ಯವನ್ನು ಪದೇ ಪದೇ ಹಿಂದಕ್ಕೆ ಮುಂದಕ್ಕೆ ಜೂಮ್ ಮಾಡುತ್ತಲೇ ಇರುತ್ತದೆ ದೃಶ್ಯ ಸಂಯೋಜನೆ, ನಾಯಕ ತನ್ನ ಗತ ಜೀವನದಲ್ಲಿ ಮಾಡಿದ ತಪ್ಪನ್ನು ತಿದ್ದಿಕೊಳ್ಳಬೇಕು ಮತ್ತು ಅದಕ್ಕೆ ಒಂದು ಅವಕಾಶವಿದೆ, ಮತ್ತೆ ತನ್ನ ತಪ್ಪನ್ನು ಸರಿ ಪಡಿಸಿಕೊಳ್ಳಲಿಕ್ಕೆ ಸಾಧ್ಯವಿದೆ ಎನ್ನುವ ಅಭಿಪ್ರಾಯ ಮೂಡಿಬರಲು ಸಹಾಯ ಮಾಡುತ್ತದೆ.


ಪುಟ್ಟಣ್ಣ ಕಣಗಾಲ್ ಮತ್ತೆ ತಮ್ಮ ಜಾದೂವನ್ನು ತೋರಿಸಿದ ಚಿತ್ರ ಇದು. ಸುಂದರ ಕಥೆಯನ್ನು ಅಷ್ಟೇ ಅಚ್ಚುಕಟ್ಟಾಗಿ ನಿರೂಪಣೆ ಮಾಡಿರುವ ರೀತಿಗೆ ಮನಸ್ಸಲ್ಲೇ ನಮನ ಸಲ್ಲಿಸುತ್ತೇನೆ. 

Sunday, October 18, 2015

ಸಾವಿರ ಸಾವಿರ ಮನಸ್ಸಿನ ಭಾವದ ಉಗಮಸ್ಥಾನ "ಸಾವಿರ ಮೆಟ್ಟಿಲು" - ಪೂರ ಹತ್ತದ ಮೆಟ್ಟಿಲುಗಳು (2006)

ಕಲಾವಿದರ ಕಾಲು ಅಳತೆ ಒಬ್ಬರಿಂದ ಒಬ್ಬರದು ವಿಭಿನ್ನ ಎಂದು ಹೇಳುತ್ತಾರೆ. ಒಬ್ಬರ ಪರಿಶ್ರಮದ ಪಾದರಕ್ಷೆ ಇನ್ನೊಬ್ಬರ ಕಾಲಿಗೆ ಆಗೋಲ್ಲ ಎಂದು.

ಪುಟ್ಟಣ್ಣ ಕಣಗಾಲ್ ಒಂದು ಪ್ರತಿಭಾ ಪೆಟ್ಟಿಗೆ, ಅವರ ಮೆದುಳು ಒಂದು ಈಗಿನ ಕಾಲದ ಮಾಹಿತಿ ಕೇಂದ್ರ ಅಥವಾ ಕಂಪ್ಯೂಟರ್ ಇದ್ದ ಹಾಗೆ. ಅವರ ಬಗ್ಗೆ ಜನಜನಿತ ಮಾತು ಅಂದರೆ, ಅವರು ಒಂದು ಸಿನಿಮಾ ಕೈಗೆತ್ತಿಕೊಂಡರೆ ಅದರಲ್ಲಿಯೇ ಮುಳುಗಿಬಿಡುತ್ತಿದ್ದರು ಎಂದು, ಹಾಗಾಗಿ ಕಥೆ ಚಿತ್ರಕಥೆ ಎಲ್ಲವೂ ಅವರ ತಲೆಯೊಳಗೆ ಇದ್ದುಬಿಡುತ್ತಿದ್ದವು, ಒಂದು ಮಾದರಿ ಅಥವ ಆಧುನಿಕ ಭಾಷೆಯಲ್ಲಿ ಹೇಳುವುದಾದರೆ ಬ್ಲೂ ಪ್ರಿಂಟ್ ಅಥವಾ ನಕಾಶೆ ಇರುತ್ತಿದ್ದವು ಅನ್ನಿಸುತ್ತದೆ, ಅದನ್ನು ಚಿತ್ರಿಕರಿಸುವಾಗ ಅದಕ್ಕೆ ಮತ್ತಷ್ಟು ಹೊಳಪು ಕೊಟ್ಟು ಬೆಳಗಿಸುತ್ತಿದ್ದರು ಎನ್ನುವ ಅನುಭವ ಅವರ ಎಲ್ಲಾ ಚಿತ್ರಗಳನ್ನು ನೋಡಿದ ಅವರ ಅಪ್ಪಟ ಅಭಿಮಾನಿಗಳಲ್ಲಿ ಒಬ್ಬನಾದ ನನ್ನದು. 

ಇದು ಒಂದು ಮಟ್ಟಿಗೆ ನಿಜ, ಕಲಾವಿದ ಎಂದಿಗೂ ತನ್ನ ಕಲೆಯನ್ನು ಅಥವಾ ತನ್ನ ಕೃತಿಯನ್ನು ಹೊಳಪಿನ ಮೂಸೆಗೆ ತಳ್ಳುತ್ತಲೇ ಇರುತ್ತಾನೆ. ಅದು ಪೂರ್ಣ ಕೃತಿಗೆ ಬರುವಷ್ಟರಲ್ಲಿ ಅವರ ತಲೆಯೊಳಗೆ ಮತ್ತು ಹೃದಯದ ಪರಿಷ್ಕರಣ ಪೆಟ್ಟಿಗೆಯೊಳಗೆ ಮಿಂದೆದ್ದು ಬರುತ್ತದೆ. 

ಅದನ್ನು ಮುಟ್ಟುವುದು ಅಥವಾ ಅದನ್ನು ಮುಂದುವರೆಸುವುದು ಸವಾಲಿನ ಸಂಗತಿಯೇ ಸರಿ. ಶ್ರೀ ಬಸವೇಗೌಡರು ಮತ್ತು ಕೆ ಎಸ್ ಎಲ್ ಸ್ವಾಮೀ ಇಬ್ಬರ ಪರಿಶ್ರಮ ನಿಜಕ್ಕೂ ಶ್ಲಾಘನೀಯ. ಪೂರ್ಣ ಚಿತ್ರಕಥೆಯಿಲ್ಲ, ಕಥೆಯನ್ನು ಎಲ್ಲಿಂದ ಆರಂಭಿಸಬೇಕು, ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಹೀಗೆ ಯಾವುದೇ ಒಂದು ನಿರ್ದಿಷ್ಟ ಚೌಕಟ್ಟಿನ ಜೊತೆಯಲ್ಲಿದೆ ಒಬ್ಬ ಕಲಾವಿದನ ಕುಂಚವನ್ನು ಮುಂದಕ್ಕೆ ಒಯ್ಯುವುದು ಸವಾಲಿನ ವಿಷಯ. ಇಂಥಹ ಪರಿಶ್ರಮ ಕೈಗೊಂಡ ಇಬ್ಬರೂ ಸಾಧಕರಿಗೂ ಮತ್ತು ಅದಕ್ಕೆ ಸಹಕರಿಸಿದ ಎಲ್ಲಾ ಕಲಾವಿದರಿಗೂ ಮತ್ತು ತಾಂತ್ರಿಕ ವರ್ಗಕ್ಕೆ ಅಭಿನಂದನೆಗಳು. 

ಈ ಚಿತ್ರದ ಬಗ್ಗೆಗಿನ ನನ್ನ ಬರಹವನ್ನು ಪುಟ್ಟಣ್ಣ ಅವರು ಚಿತ್ರೀಕರಿಸಿದ ಭಾಗಗಷ್ಟೇ ಸೀಮಿತಗೊಳಿಸುತ್ತೇನೆ, ಕಾರಣ ನಿಮಗೆ ಗೊತ್ತು. 

ಪುಟ್ಟಣ್ಣ ಕಣಗಾಲ್ ಅವರ ಮೊದಲ ಕೆಲ ಪ್ರಯತ್ನಗಳಲ್ಲಿ ಇದು ಒಂದು ಚಿತ್ರ ಎನ್ನಿಸುವ ಎಲ್ಲಾ ಸುಳಿವು ಇದರಲ್ಲಿ ಸಿಗುತ್ತದೆ. ವಜ್ರ ತನ್ನನ್ನೇ ತಾನು ಹೊಳಪಿನ ಪ್ರಖರತೆ ಒಡ್ಡಿಕೊಳ್ಳುತ್ತಿರುವ ಎಲ್ಲಾ ಲಕ್ಷಣಗಳು ಇವೆ ಈ ಚಿತ್ರದಲ್ಲಿ. 

ಈ ಚಿತ್ರದಲ್ಲಿ ನಟಿಸಿರುವ ಸುಮಾರು ೮೦% ಕಲಾವಿದರು ಈ ಚಿತ್ರ ಬಿಡುಗಡೆಯಾದಾಗ ಇಲ್ಲ. ತಾರಾಗಣ ಪಟ್ಟಿಯಲ್ಲಿ ಅವರ ಹೆಸರಿನ ಹಿಂದೆ "ದಿ।।" ಎಂದು ನೋಡುವುದು ಮನಸ್ಸಿಗೆ ಬಹಳ ಹಿಂಸೆಯಾಗುತ್ತದೆ.ನಮ್ಮ ಕರುನಾಡಿನ ಚಿತ್ರರಂಗವನ್ನು ಬೆಳಗಲು ಶ್ರಮಿಸಿದ  ಅನೇಕ ಕಲಾರತ್ನಗಳ ಹೆಸರುಗಳ ಹಿಂದೆ ಆ ಅಕ್ಷರ ನೋಡುವುದು ನಿಜಕ್ಕೂ ಬೇಸರದ ಸಂಗತಿ. 

ಕಪ್ಪು ಬಿಳುಪಿನಲ್ಲಿ ತಯಾರಾದ ಈ ಚಿತ್ರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿಯೇ ಚಿತ್ರಿಕರಣವಾಗಿದೆ. ಒಂದು ಪ್ರದೇಶವನ್ನು ಅದೇ ಅದೇ ಚೌಕಟ್ಟಿನಲ್ಲಿ ತರದೇ, ಪ್ರತಿದೃಶ್ಯವನ್ನು ಅರೆ ಇದು ಬೇರೆಯದೇ ತಾಣ ಇರಬಹುದೇನೋ ಅನ್ನುವಂತೆ ತೋರಿಸಿದ್ದಾರೆ ಛಾಯಾಗ್ರಾಹಕರು. 

"ಗಂಡು ಬೀರಿ ನಾನಲ್ಲ" ಹಾಡು ಎಲ್ ಆರ್ ಈಶ್ವರಿ ಅಬ್ಬರಿಸಿದ್ದಾರೆ, ಜೊತೆಯಲ್ಲಿಯೇ ನಿಜಕ್ಕೂ ಗಂಡು ಬೀರಿಯಂತೆಯೇ ಅಭಿನಯಿಸಿರುವ ಜಯಂತಿ.  
ಎಳನೀರು ಮಾರುವ ಪಾತ್ರದಲ್ಲಿ ನನ್ನ ಪ್ರೀತಿಯ ಅಶ್ವತ್ ಗಮನಸೆಳೆಯುತ್ತಾರೆ. 
ಆ ಕಾಲದ ಸುರಸುಂದರಾಂಗ ಕಲ್ಯಾಣ್ ಕುಮಾರ್ "ಕೈ ನೀಡಿದೇ ನೀನು ಅಂದು" ಪಿ ಬಿ ಶ್ರೀನಿವಾಸ್ ಮತ್ತು ಎಸ್ ಜಾನಕಿ  ಹಾಡಿಗೆ ಸುಂದರ ನೃತ್ಯ ಮತ್ತು ಅಭಿನಯಯವರ ಜೊತೆಯಲ್ಲಿ ಜಯಂತಿ ಅವರದು 
"ನಮ್ಮೂರ ಬೆಟ್ಟದ" ಎನ್ನುವ ಹಾಡಿನಲ್ಲಿ ಮೈಸೂರನ್ನು ರಮ್ಯವಾಗಿ ತೋರಿಸುವ ದೃಶ್ಯಗಳು ಕಣ್ಣಿಗೆ ಕಟ್ಟುತ್ತವೆ. ಪಿ ಬಿ ಶ್ರೀನಿವಾಸ್ ಮತ್ತು ಪಿ ಸುಶೀಲ ಸಾಹಿತ್ಯಕ್ಕೆ ದನಿಯಾಗುತ್ತಾರೆ. 

ಅದ್ಭುತ ದೃಶ್ಯ ಸಂಯೋಜನೆ ಅಂದರೆ 
ವಜ್ರಮುನಿ, ಜಯಂತಿ ಮತ್ತು ಕಲ್ಯಾಣ್ ಕುಮಾರ್ ಒಂದು ದೃಶ್ಯದಲ್ಲಿ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿಕ್ಕಿಕೊಂಡಿರುತ್ತಾರೆ. ಆ ದೃಶ್ಯದಲ್ಲಿ ಮೂವರು ಜೋರಾಗಿ ಮಾತಾಡಬೇಕು ಅಥವಾ ಬೇಡಿಕೊಳ್ಳುವ ದನಿ ಇರಬೇಕು ಇಲ್ಲವೇ ಅಥವಾ ಒಬ್ಬರಿಗೂಬ್ಬರು ತಮ್ಮ ತಮ್ಮ ಬಗ್ಗೆ ಸಮಜಾಯಿಷಿ ಕೊಡಬೇಕು. ಇವಿಷ್ಟನ್ನು ಕೇವಲ ಒಂದು ನಿಮಿಷದ ದೃಶ್ಯದಲ್ಲಿ ತೋರಿಸುತ್ತಾರೆ ಪುಟ್ಟಣ್ಣ ಅವರು. ಇಡಿ ದೃಶ್ಯವನ್ನು ಮೂರು ಜೊತೆ ಕಣ್ಣುಗಳಲ್ಲಿ ತೋರುತ್ತಾರೆ.. ಪ್ರತಿ ಐದು ಅಥವಾ ಹತ್ತು ಕ್ಷಣಗಳಿಗೆ ಒಂದೊಂದು ಜೊತೆ ಕಣ್ಣುಗಳಲ್ಲಿ ಭಾವ ಬದಲಾಗುತ್ತಾ ಹೋಗುತ್ತದೆ. ಅದ್ಭುತ ಅದ್ಭುತ ಎನ್ನಿಸುವ ದೃಶ್ಯ ಸಂಯೋಜನೆ. 

ಜಯಂತಿ ಪಾತ್ರವನ್ನು ಅತಿ ಅಲ್ಲಿಯ ತನಕ ಅತಿ ಎತ್ತರದಲ್ಲಿ ಕೂರಿಸಿದ್ದ ವಜ್ರಮುನಿ ಮನೆಯವರು (ಪಂಡರಿ ಬಾಯಿ ಮತ್ತು ಆಕೆಯ ಮಗಳು ಮತ್ತು ಮಗ), ಯಾವುದೇ ಕಾರಣಕ್ಕೆ, ಜಯಂತಿ ಅಪರಾಧಿನಿ ಎಂದುಅರಿವಾಗುತ್ತದೆ , ಮಹಡಿಯ ಕೆಳಗೆ ಇದ್ದ ವಜ್ರಮುನಿ ಮತ್ತು ಆತನ ತಾಯಿ ಪಂಡರಿಬಾಯಿ ಜಯಂತಿಯನ್ನು ಕರೆಯುತ್ತಾರೆ. ಜಯಂತಿ ಇಳಿದುಬರುತ್ತಿರುವಾಗ ಆಕೆಯ ಕಣ್ಣಲ್ಲಿ ಅಪರಾಧಿ ಭಾವ ಎದ್ದು ಕಾಣುತ್ತದೆ, ಜೊತೆಯಲ್ಲಿಯೇ ಕ್ಯಾಮೆರ ಚಾಲನೆ ನಿಧಾನವಾಗಿ ಕೆಳಗೆ ಇಳಿಯುತ್ತಾ ಹೋಗುತ್ತದೆ. ವಜ್ರಮುನಿ ಮತ್ತು ಪಂದರಿಬಾಯಿಯವರ ಮುಖಭಾವವನ್ನೇ ತೋರಿಸುತ್ತಾ ಕ್ಯಾಮೆರಾ ನಿಧಾನವಾಗಿ ಕೆಳಗೆ ಇಳಿಯುತ್ತಾ ಹೋಗುತ್ತದೆ. 

ಅಂದರೆ ಜಯಂತಿ ಪಾತ್ರ, ಆ ಮನೆಯವರ ಮುಂದೆ ಅಪರಾಧಿ ಭಾವದಿಂದ ಎತ್ತರದಲ್ಲಿದ್ದ ವ್ಯಕ್ತಿತ್ವ ಭೂಮಿಗೆ ಇಳಿಯುತ್ತಾ ಹೋದಂತೆ ತೋರಿಸುವ ದೃಶ್ಯ. 

ಗುರುಗಳೇ ಇವೆರಡು ದೃಶ್ಯಗಳು ಸಾಕು, ನಿಮ್ಮ ಪ್ರತಿಭೆ ಅನಾವರಣಗೊಳ್ಳಲು ಕರುನಾಡಿನ ರಂಗ ಪರದೆ ಕಾಯುತ್ತಿತು ಎಂದು ತಿಳಿದುಕೊಳ್ಳಲು. 

ಪುಟ್ಟಣ್ಣ ಅವರ ತಲೆಯಲ್ಲಿದ್ದ ಇಡಿ ಚಿತ್ರಕಥೆ ಸಿಕ್ಕಿದ್ದರೂ, ಅಥವಾ ಕಥೆಯ ಒಳ ಸುಳಿವು ಗೊತ್ತಿದ್ದರೂ ಪುಟ್ಟಣ್ಣ ಕಣಗಾಲ್ ಅವರ ಮನಪಟಲದಲ್ಲಿದ್ದ ಚಿತ್ರಕೃತಿಯನ್ನು ಇತರರಿಗೆ ಅಸಾಧ್ಯ ಎನ್ನಿಸುತ್ತಿತ್ತೋ ಏನೋ. ನನ್ನ ಉತ್ತರ ಅಸಾಧ್ಯ ಎಂದು. ಕಾರಣ ಗುರುಗಳು ಗುರುಗಳೇ. 

ಪುಟ್ಟಣ್ಣ ಕಣಗಾಲ್ ಅವರಿಗೆ ಒಂದು ಶ್ರದ್ಧಾ ಪೂರ್ವಕ ನಮನಸಲ್ಲಿಸುವ ಕಾರ್ಯದಲ್ಲಿ ಬಸವೇಗೌಡರು ಮತ್ತು ಕೆ ಎಸ್ ಎಲ್ ಸ್ವಾಮೀ ಮತ್ತು ಚಿತ್ರತಂಡದವರು ಶ್ರಮಿಸಿದ್ದು ನಿಜಕ್ಕೂ ಶ್ಲಾಘನೀಯ. ಪುಟ್ಟಣ್ಣ ಕಣಗಾಲ್ ಮೇಲಿನ ಪ್ರೀತಿ ಮತ್ತು ಗೌರವ ಅವರ ಈ ಬೃಹತ್ ಕಾರ್ಯದಲ್ಲಿ ಜೊತೆ ನೀಡಿದೆ. 

ಪುಟ್ಟಣ್ಣ ಕಣಗಾಲ್ ಅವರಿಗೆ ನನ್ನ ಹೃದಯ ಪೂರ್ವಕ ನಮನಗಳು. 

Friday, October 16, 2015

ಋಣ ಮುಕ್ತಳು - ಒಂದು ವಿಭಿನ್ನ ಅನುಭವ (1984)

ಒಂದು ಮಹಾನ್ ಚೇತನ ಅಮೋಘ ಚಿತ್ರಗಳನ್ನು ನೀಡುತ್ತಾ ನೀಡುತ್ತಾ ಬಸವಳಿದಾಗ ಮತ್ತೆ ಅದಕ್ಕೆ ಚೈತನ್ಯ ನೀಡುವುದೇ ಮತ್ತೊಂದು ಪರಿಶ್ರಮ ಬೇಡುವ ಚಿತ್ರ.

ಹೌದು ಈ ಚಿತ್ರವನ್ನು ನಾ ಇದುವರೆಗೂ ನೋಡೇ ಇರಲಿಲ್ಲ. ಯಾವಾಗಲೂ ಈ ಚಿತ್ರ ದೂರದರ್ಶನದಲ್ಲಿ ಮೂಡಿ ಬಂದರೂ ಬರಿ ಅಂತಿಮ ಕ್ಷಣವನ್ನು ಮಾತ್ರ ನೋಡಿದ್ದೇ.  ಭಾರತಿ ತನ್ನ ಮೊಗದಲ್ಲಿ ಯಾವುದೇ ಭಾವನೆ ತೋರದೆ ನಿಧಾನವಾಗಿ ಆಶ್ರಮವಾಸಿಗಳ ಜೊತೆಯಲ್ಲಿ ನಿರ್ಮಲ ಎನ್ನಿಸುವ ಶ್ವೇತ ವಸ್ತ್ರಧಾರಿಯಾಗಿ ಹೆಜ್ಜೆ ಹಾಕುತ್ತಾ ಹೋಗುವುದು, ಮತ್ತು ರಾಮಕೃಷ್ಣ ತನ್ನ ಹೆತ್ತ ತಾಯಿಯನ್ನು ನೋಡುತ್ತಾ ನಿಲ್ಲುವುದು ಅವರ ಮೊಗದ ಮೇಲೆ ಒಂದು ರೀತಿಯ ಆತಂಕ ಮತ್ತು ತನ್ನ ಮಾತೆ ತನಗೆ ನೆಮ್ಮದಿ ಸಿಗುವ ತಾಣವನ್ನು ಅರಸಿಕೊಂಡ ಒಂದು ಸಂತೋಷ. 

ಕಣಗಾಲ್ ಕ್ರಿಯೇಷನ್ಸ್ ಲಾಂಛನದಲ್ಲಿ ಪುಟ್ಟಣ್ಣ ಕಣಗಾಲ್ ಪರಿವಾರದವರೊಡನೆ ಸೇರಿ ತಯಾರಿಸಿದ ಚಿತ್ರ ಇದು. ಶ್ರೀಮತಿ ಅನುಪಮ ನಿರಂಜನ್ ರವರ "ಋಣ" ಎನ್ನುವ ಕಾದಂಬರಿ ಆಧಾರಿತ ಈ ಚಿತ್ರ ಮೊದಲಿಂದ ಕಡೆಯತನಕ ಏರು ಪೆರಿಲ್ಲದೆ ನೋಡಿಸಿಕೊಂಡು ಹೋಗುತ್ತದೆ. 

ಚಿತ್ರದ ಹೆಸರನ್ನು ತೋರಿಸುವಾಗ ಒಂದು ಪುಸ್ತಕದಲ್ಲಿ  ಪ್ರತಿ ಹಾಳೆಯನ್ನು ತಿರುವು ಹಾಕುತ್ತ ಹೋದಂತೆ ತಾರಾಗಣವನ್ನು ಪರಿಚಯ ಮಾಡಿಕೊಡುತ್ತಾರೆ. ನಮಗೆ ಕಾಣದ ನರಕಲೋಕದಲ್ಲಿ ಚಿತ್ರಗುಪ್ತ ಪ್ರತಿ ಜೀವಿಯ ತಪ್ಪು ಒಪ್ಪುಗಳನ್ನು ಅವಲೋಕಿಸುತ್ತಾ ಪಡೆದದ್ದು, ಕಳೆದದ್ದು ಇವುಗಳ ತುಲನೆ ಮಾಡಿ ಯಮಧರ್ಮ ಶಿಕ್ಷೆ ಕೊಡಲು ಅಹವಾಲು ನೀಡುವಂತೆ ತೋರುವ ದೊಡ್ಡ ಪುಸ್ತಕದ ಹಾಳೆಗಳಂತೆ ಈ ದೃಶ್ಯ ಗೋಚರಿಸುತ್ತದೆ. ಪುಟ್ಟಣ್ಣ ಪ್ರತಿ ಚಿತ್ರವನ್ನು  ಆರಂಭಿಸುವ ರೀತಿ ಯಾವಾಗಲೂ ವಿಭಿನ್ನ. 

ಸಂಭಾಷಣೆಯ ಜವಾಬ್ಧಾರಿಯನ್ನು ಕುಣಿಗಲ್ ನಾಗಭೂಷಣ್ ಜೊತೆ ಹಂಚಿಕೊಂಡು, ಚಿತ್ರಕಥೆ ಬರೆದು ನಿರೂಪಣೆ ಮಾಡಿ ಜಗನ್ಮಾತೆಯ ದಿಗ್ಧರ್ಶನದಲ್ಲಿ ಚಿತ್ರ ಮೂಡಿಸಿದ್ದಾರೆ. ಅವರ ಕನಸಿಗೆ ಕಣ್ಣಾಗಿ ಬರುವುದು ಎಸ್ ಮಾರುತಿರಾವ್ ಅವರ ಛಾಯಾಗ್ರಹಣ ಮತ್ತು ಹಿನ್ನೆಲೆ ಸಂಗೀತ ಮತ್ತು ಹಾಡುಗಳಿಗೆ ಜೀವ ತುಂಬುವ ಸಂಗೀತ ಹೊಣೆ ವಿಜಯಭಾಸ್ಕರ್ ಅವರದ್ದು. 

ಮನುಜ ತಾನು ಮಾಡಿದ ಪಾಪ ಪುಣ್ಯ ಇವುಗಳನ್ನು ಇಲ್ಲೇ ಒಪ್ಪ ಮಾಡಿ ಹೋಗುತ್ತಾನೆ ಎನ್ನುವ ನೀತಿಯ ತಳಹದಿ ಈ ಚಿತ್ರದಲ್ಲಿದೆ. ಹಳ್ಳಿಯಲ್ಲಿ ಹಾಯಾಗಿ ಇರಬಹುದಾದ ಮನೆಯ ಯಜಮಾನ ಹಣದ ಆಮಿಷಕ್ಕೆ ಒಳಗಾಗಿ ಪಟ್ಟಣಕ್ಕೆ ಬಂದು, ಆ ಪಟ್ಟಣದ ರೂಪು ರೇಶೆಗಳಿಗೆ ತಕ್ಕಂತೆ ಅನೈತಿಕತೆಯಿಂದ ಹಣ ಸಂಪಾದಿಸುವುದು, ಇದರ ಜೊತೆಯಲ್ಲಿ ಇವನ ಈ ಸಾಹಸ ಮಕ್ಕಳ ಮೇಲೆ ಪರಿಣಾಮ ಬೀರುವುದು ಸುಂದರವಾಗಿ ಚಿತ್ರಿಕೃತವಾಗಿದೆ. 

ಬುದ್ಧಿವಂತ ಮೊದಲನೇ ಮಗುವನ್ನು  ಎರಡನೇ ಮಗುವಿನ ಮುಂದೆ ಹೋಗಲಿ, ಈ ಚಿಕ್ಕ ಮಗುವಿನ ಮನದಲ್ಲಿ ರೋಷ ದ್ವೇಷ ತುಂಬಿ ಸಮಾಜಕ್ಕೆ ಒಂದು ರೀತಿಯ ಪಿಡುಗು ಎನ್ನಿಸುವಂತಹ ಪ್ರಜೆ ನೀಡುವುದರಲ್ಲಿ ಅಪ್ಪನ ಪಾತ್ರಧಾರಿ ಸಫಲ ಆಗುತ್ತಾರೆ. 
ಇದರ ಜೊತೆಯಲ್ಲಿ ಕ್ಷಣಿಕ ಆಸೆಗೆ ಬಲಿಯಾಗಿ ಮನೆಕೆಲಸದ ಹುಡುಗಿಯ ಜೊತೆಯಲ್ಲಿ ಅಕ್ರಮ ಸಂಬಂಧ ಇಟ್ಟುಕೊಂಡು ಒಂದು ಮಗುವಿನ ಜನನಕ್ಕೆ ಕಾರಣವಾಗುವಂಥಹ ವಿಚಿತ್ರ ಪರಿಸ್ಥಿತಿಯನ್ನು ನಿರ್ಮಾಣ ಮಾಡಿಕೊಳ್ಳುತ್ತಾನೆ. ಆ ಮನೆಗೆಲಸದ ಹುಡುಗಿ ಬೇರೆ ಮದುವೆ ಮಾಡಿಕೊಂಡರೂ, ಅಲ್ಲಿ ಸುಖ ಕಾಣದೆ ಗಂಡನನ್ನು ಕಳೆದುಕೊಂಡು, ಆ ದುಃಖದಲ್ಲಿಯೇ ತನ್ನ ಅನೈತಿಕ ಮಗುವನ್ನು ಜತನಮಾಡುವ ಪಾತ್ರ. 

ಮಗು ಒರಟು ಎಂದು ಗೊತ್ತಿದ್ದರೂ, ತಾಯಿ ಹೃದಯ ಮಿಡಿಯುತ್ತದೆ, ಬೇರೆಯವರ ಹತ್ತಿರ ಒರಟು ಒರಟಾಗಿ ಮಾತಾಡಿದರೂ ತನ್ನ ತಾಯಿಗೋಸ್ಕರ ಮಿಡಿಯುವ ಮಗು. ಇವರೆಡರ ಭಾವನಾತ್ಮಕ ತಾಕಲಾಟ ಸುಂದರವಾಗಿ ಕೆಲವು ದೃಶ್ಯಗಳಲ್ಲಿ ಭಿತ್ತರಗೊಂಡಿದೆ. 

ಅದರಲ್ಲೂ, ಜಗಳ ಮಾಡಿಕೊಂಡು ಮನೆಬಿಟ್ಟು ಹೋದ ಮಗನನ್ನು ನೆನೆದು, ಅಯ್ಯೋ ನಾ ತಪ್ಪು ಮಾಡಿದೆ, ಅವನನ್ನು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ಹಲಬುವ ಅಪ್ಪ, ಮತ್ತು ಅಕಾಲ ಮರಣಕ್ಕೆ ತುತ್ತಾಗಿ, ಕಡೆಯಲ್ಲಿ ತನ್ನ ಮಗನನ್ನು ನೋಡಬೇಕು ಎಂದು ಬಯಸಿ, ಮಗ ಬರುವ ಮುನ್ನ ಇಹಲೋಕ ತ್ಯಜಿಸಿದ ಮೇಲೆ, ಸುಮಾರು ಒಂದು ಮೂವತ್ತು ಸೆಕೆಂಡ್ ಏಕದಂ ಮೌನ. ತಾಯಿ ನೋಡಿದೆಯ ಮಗನೆ ನಿನ್ನ ಅಪ್ಪನನ್ನು ಎಂದಾಗ, ಮಗ ದೊಡ್ಡದಾಗಿ ಬಾಯಿ ತೆಗೆದು ಅಳುವ ಮೂಕ ದೃಶ್ಯ, ಇಡಿ ಚಿತ್ರದಲ್ಲಿ ಪುಟ್ಟಣ್ಣ ಅವರ ಕೈಚಳಕ ಕಾಣಿಸುವ ದೃಶ್ಯ ಇದು. 

ಕೆಲವೇ ಕೆಲವು ಪಾತ್ರಗಳು, ಆದರೆ ಎಲ್ಲರೂ ಅಚ್ಚುಕಟ್ಟಾಗಿ ಅಭಿನಯಿಸಿದ್ದಾರೆ. ಭಾರತಿ, ಸುಂದರಕೃಷ್ಣ ಅರಸ್, ರಾಮಕೃಷ್ಣ, ಭರತ್ ಭಾಗವತರ್, ಆಶಾಲತ, ಮಾ, ಹಿರಣ್ಣಯ್ಯ, ರಾಜಾನಂದ್, ಪದ್ಮಾವಾಸಂತಿ ಎಲ್ಲರೂ ಎಷ್ಟು ಬೇಕೋ ಅಷ್ಟು ಅಭಿನಯ ನೀಡಿದ್ದಾರೆ. 

"ಆಕಾಶದುದ್ದಾದ ಮಾಮರವು ಚಂದ" ಮನುಜನ ಇಬ್ಬಗೆ ನೀತಿಯನ್ನು ಸುಂದರ ಹೋಲಿಕೆಗಳ ಮೂಲಕ ವಿಜಯನಾರಸಿಂಹ ಬರೆದ ಹಾಡನ್ನು ಎಸ್ ಜಾನಕಿ ಹಾಡಿದ್ದಾರೆ. 

"ದೇವರ ಒಲಿಸಲು" ತಾಯಿಯ ಮಹತ್ವವನ್ನು ಬಿಂಬಿಸುವ ಹಾಡು ಎಸ್ ಪಿ ಬಾಲಸುಬ್ರಮಣ್ಯಂ ಜೀವ ತುಂಬಿದ್ದಾರೆ 

"ಕಣ್ಣಾರೆ ಕಂಡೆ ನಾ" ವಾಣಿ ಜಯರಾಂ ಅವರ ಕಂಚಿನ ಕಂಠ ಇಷ್ಟವಾಗುತ್ತದೆ. 



ಕಥಾವಸ್ತು ಆ ಕಾಲಕ್ಕೆ ಒಂದು ಚೂರು ಮುಂದಾಗಿತ್ತು ಅನ್ನಿಸುತ್ತದೆ. ಕೆಲವೊಮ್ಮೆ ಸಾಗರ ಪ್ರಶಾಂತವಾಗಿದ್ದ ಸಾಗರ ಚಂಡಮಾರುತದ ಮುನ್ಸೂಚನೆ ನೀಡುವಂತೆ, ಪುಟ್ಟಣ್ಣ ಕಣಗಾಲ್ ತಮ್ಮ ಮುಂದಿನ ಚಿತ್ರ ರತ್ನಕ್ಕೆ ಈ ಚಿತ್ರದಿಂದಲೇ ಅನಿಯಾಗುತ್ತಿದ್ದರೋ ಏನೋ ಎನ್ನಿಸಿತು ನನಗೆ. 

Sunday, October 11, 2015

ಮನುಜನ ಭಾವಗಳನ್ನು ಮಧ್ಯೆ ಕೂರಿಸಿ ತೋರಿಸುವ ಧರಣಿ ಮಂಡಲ ಮಧ್ಯದೊಳಗೆ (1983)

ಕೆಲವೊಮ್ಮೆ ನಮ್ಮ ಮನಸ್ಸು ಗಲಿಬಿಲಿಯಾಗಿದ್ದಾಗ ಅಥವಾ ಕೆಲವೊಮ್ಮೆ ನಿರ್ಮಲವಾಗಿದ್ದಾಗ ಒಳಗಿನ ಬಿಳಿಯ ಮನ ಪಟಲದಲ್ಲಿ ವರ್ಣಮಯ ದೃಶ್ಯಗಳು ಕಾಣಸಿಗುತ್ತದೆ. ಆದರೆ ಅದು ಕ್ಷಣಿಕ ಮಾತ್ರ, ಆ ಪಟಲದಲ್ಲಿ ಮೂಡುತ್ತಿದ್ದ ದೃಶ್ಯಗಳನ್ನು ಮತ್ತೆ ಮತ್ತೆ ರೂಪಿಸಿಕೊಳ್ಳಲು ಬಲು ಕಷ್ಟ.

ಅಳತೆಗೂ ಮೀರಿದ ಕೆಲವು ಭಾವನಾತ್ಮಕ ದೃಶ್ಯಗಳು ಹಾಗೆ ಬಂದು ಹೋಗುವುದು ಉಂಟು. ಅಂಥಹ ಸಹಜವಾದ, ಆದರೆ ಈ ವ್ಯಾವಹಾರಿಕ ಪ್ರಪಂಚದಲ್ಲಿ ನಾನು, ನನ್ನದು, ನನ್ನದೇ ಎನ್ನುವ ಸ್ವಾರ್ಥ ಭಾವಗಳೇ ನಮ್ಮನ್ನು ಕಪಿ ಮುಷ್ಠಿಯಲ್ಲಿ ಇರಿಸಿಕೊಂಡು, ತನ್ನದೇ ರಕ್ತ ಹಂಚಿಕೊಂಡು ಹುಟ್ಟಿದ ಮಾಂಸದ ಮುದ್ದೆಯನ್ನು ಮೂಲೆ ಗುಂಪು ಮಾಡುವ ಶಕ್ತಿ ಹೊಂದಿಬಿಡುತ್ತದೆ.

ಈ ರೀತಿಯ ಒಂದು ಕಥೆಯನ್ನು ಸಿನಿಮಾ ತೆರೆಗೆ ಒಪ್ಪುವ ರೀತಿಯಲ್ಲಿ ಅಳವಡಿಸಿಕೊಳ್ಳುವುದು ಕಷ್ಟ ಸಾಧ್ಯದ ಕೆಲಸ. ಕಥೆ, ಚಿತ್ರಕಥೆ ಬರೆದು, ನಿರೂಪನೆಯನ್ನು ತಾಯಿ ಜಗನ್ಮಾತೆಯ ಅಭಯ ಹಸ್ತದ ವಾರದಲ್ಲಿ ಮೂಡಿಸಿರುವ ಚಿತ್ರವೇ "ಧರಣಿ ಮಂಡಲ ಮಧ್ಯದೊಳಗೆ" 

ಇದೊಂದು ಪುಟ್ಟಣ್ಣ ಅವರ ಎಲ್ಲಾ ಚಿತ್ರಗಳಿಗಿಂತ ಭಿನ್ನ. ಇದುವರೆಗೂ ಅವರು ತುಳಿದಿದ್ದ ದಾರಿಯಲ್ಲಿ ತುಸು ಹೊರಳಿ ಈ ಚಿತ್ರವನ್ನು ಮೂಡಿಸಿದ್ದಾರೆ. 

ಮೊದಲ ಮೊದಲಿಗೆ ಅರೆ ಏನಿದು ಹೀಗಿದೆ ಚಿತ್ರ ಎಂದು ನನಗನ್ನಿಸಿದ್ದು ಪ್ರಾಮಾಣಿಕವಾಗಿ ನಿಜ. ಆದರೆ ನೋಡುವಾಗ ಮತ್ತು ನೋಡಿದ ಕೆಲಹೊತ್ತಿನ ಮೇಲೆ, ಕೆಸರಲ್ಲಿ ಮುಳುಗುವ ಮನುಜನಂತೆ ನಿಧಾನವಾಗಿ ಈ ಚಿತ್ರದ ಒಳ ಹೂರಣ ಅರ್ಥವಾಗುತ್ತಾ ಹೋಗುತ್ತದೆ. 
ನಾಲ್ಕು ಮುಖ್ಯ ಪಾತ್ರಗಳು, ನಾಯಕ್, ದಳವಾಯಿ, ಪಾಳೆಗಾರ, ಮತ್ತು ಪುರುಷೋತ್ತಮ.   ಸಮಾಜಕ್ಕೆ ಬೇಕಾದ ನಾಲ್ಕು ಮುಖ್ಯ ಆಧಾರ ಸ್ಥಂಭಗಳು. 

ಪುರುಷೋತ್ತಮ ಎನ್ನುವ ಪಾತ್ರ ಎಂದಿಗೂ ಸೇಡು, ದ್ವೇಷಗಳ ಬತ್ತಳಿಕೆಯೊಳಗೆ ಇಳಿಯಬಾರದು, ಆದರೆ ಈ ಸಮಾಜದಲ್ಲಿ ಸೇಡಿನ ಮನೋಭಾವ ಹೊತ್ತು, ಅಲ್ಪ ಸ್ವಲ್ಪ ಹದ್ದುಬಸ್ತಿಗೆ ಬರುತ್ತಿದ್ದ ಇತರ ಮೂರು ಆಧಾರಗಳನ್ನು ತನ್ನ ಕೈಯಾರೆ ತಾನೇ ಹಾಳು ಮಾಡಿ, ತನ್ನನ್ನು ತಾನೇ ಹಳಿದುಕೊಳ್ಳುವಂಥಹ ಸ್ಥಿತಿಗೆ ಇಳಿಯಬೇಕಾಗುತ್ತದೆ. 

ಇಡಿ ಸಮಾಜವನ್ನು ಮುನ್ನಡೆಸಬೇಕಾದ ನಾಯಕ್ ಪಾತ್ರ, ಪರಿಸ್ಥಿಯ ಆಳ ತಿಳಿಯದೆ ತೆಗೆದುಕೊಳ್ಳುವ ಆತುರದ ನಿರ್ಧಾರ, ಮತ್ತು ವ್ಯಾವಹಾರಿಕ ಜ್ಞಾನವಿಲ್ಲದೇ, ವಿವೇಚನೆ ಇಲ್ಲದೆ ತೆಗೆದುಕೊಳ್ಳುವ ಕೆಲವು ತೀರ್ಮಾನಗಳು ತನ್ನನ್ನೇ ನಂಬಿಕೊಂಡು ನಿಲ್ಲುವ ತನ್ನ ಜನರಿಗೆ ಬರಿ ಬೇಡದ, ನಡೆಯದ ಆಶ್ವಾಸನೆ ಕೊಡುವಂತಹ ಪಾತ್ರವಾಗಿ ಬಿಡುತ್ತದೆ. 

ನಾಯಕ್ ತೆಗೆದುಕೊಳ್ಳುವ ನಿರ್ಧಾರವನ್ನು, ತೀರ್ಮಾನಗಳನ್ನು, ಸಲಹೆಗಳನ್ನು ಆಚರಣೆಗೆ ತರಬೇಕಾದ ಪಾಳೇಗಾರ್, ತನ್ನ ಆಸೆ ಆಮಿಷಗಳಿಗೆ, ತನ್ನ ಸ್ವಂತ ವಿಚಾರಗಳಿಗೆ, ಸೋತು, ಸಮಾಜಕ್ಕೆ ಆಘಾತ ಮಾಡುವ ಈ ಪಾತ್ರ ಕಡೆಗೆ ಕಾನೂನನ್ನು ಕೈಗೆ ತೆಗೆದುಕೊಂಡು ತಾನೂ ಬಾಳದೆ, ತನ್ನ ನಂಬಿದವರನ್ನು ಬಾಳಿಸದೆ, ಸಮಾಜಕ್ಕೆ ದೊಡ್ಡ ಆಘಾತ ನೀಡುವ ಪಾತ್ರವಾಗಿಬಿಡುತ್ತದೆ. 

ನಾಯಕ್ ಮತ್ತು ಪಾಳೇಗಾರ್ ಇಬ್ಬರಿಗೂ ಹೆಗಲು ಕೊಟ್ಟು ಸಮಾಜಕ್ಕೆ ರಕ್ಷಣೆ ನೀಡಬೇಕಾದ ದಳವಾಯಿ, ತಪ್ಪು ನಿರ್ಧಾರಗಳಿಂದ, ತನ್ನ ತೃಷೆಯನ್ನು ತಣಿಸಿಕೊಳ್ಳಲು ಅಮಾಯಕ ಪ್ರಜೆಯ ಮೇಲೆ ದಾಳಿ ಮಾಡಿ, ಕಡೆಗೆ ರಕ್ಷಣೆ ನೀಡುತ್ತೇನೆ ಎನ್ನುವ ಭರವಸೆ ನೀಡುತ್ತಾ, ತನ್ನ  ತಪ್ಪಿನ ಬಗ್ಗೆ ಪಶ್ಚಾತಾಪ ಪಟ್ಟು, ಅದನ್ನು ಸರಿಪಡಿಸಿಕೊಂಡು,  ಕೈ ಕೈ ಹಿಡಿದು ಸಾಗುವಾಗಲೇ, ನಾಯಕ್ ಮತ್ತು ಪಾಳೇಗಾರ್ ಅವರ ತಪ್ಪು ನಡೆಗಳಿಂದ ತನ್ನ ಪ್ರಾಣವನ್ನು ನೀಗಿ, ಕಡೆಗೆ ತಾನು ನೋಡಲಾಗದ ಉತ್ತಮ ಸಮಾಜವನ್ನು ತನ್ನ ಪ್ರಜೆ ನೋಡಲಿ ಎನ್ನುವ ಆಶಾವಾದದೊಡನೆ ಪ್ರಾಣ ನೀಗುತ್ತದೆ ಆ ಪಾತ್ರ. 

ಹೀಗೆ ಸಮಾಜದ ಹುಳುಕುಗಳನ್ನು ಎತ್ತಿ ತೋರಿಸಿ, ಅದನ್ನು ಸರಿಪಡಿಸಬೇಕಾದ ಕಂಬಗಳೇ ತಮ್ಮದೇ ಆದ ತಪ್ಪು ನಡೆಗಳಿಂದ ಎಡವಿ, ಮತ್ತೆ ಅದನ್ನು ಸರಿಪಡಿಸಿಕೊಳ್ಳುವ ಹಾದಿಯಲ್ಲಿದ್ದಾಗ ಮತ್ತೆ ಅದೇ ವಿಚಿತ್ರ ನಿರ್ಧಾರಗಳನ್ನು ತೆಗೆದುಕೊಂಡು ಸಮಾಜದ ಆರೋಗ್ಯವನ್ನು ಸುಧಾರಿಸದೆ ಹಪಹಪಿಗೊಳ್ಳುವ ಹಂತಕ್ಕೆ ಚಿತ್ರ ನಿಲ್ಲುತ್ತದೆ ಮತ್ತು ಇಂದಿನ ಸಮಾಜದ ಗುಣಮಟ್ಟವನ್ನು ತೋರಿಸುತ್ತದೆ. 

ಅಚಾರವೇ ಬೇರೆ ವಿಚಾರವೇ ಬೇರೆ... ಆಚಾರ ವಿಚಾರವಾಗಿ ಬದಲಾಗಬೇಕಾದರೆ ಅಥವಾ ವಿಚಾರ ಆಚಾರವಾಗಿ ಬದಲಾಗಬೇಕಾದರೆ ಬರಿ ಅಕ್ಷರಗಳ (ಅ ಮತ್ತು ವಿ) ಬದಲಾವಣೆ ಆದರೆ ಮಾತ್ರ ಸಾಲದು ಬದಲಿಗೆ ಎಲ್ಲರೂ ಯೋಚಿಸುವ ರೀತಿಯು ಬದಲಾಗಬೇಕು. ಅದೇ ಈ ಚಿತ್ರದ ಉದ್ದೇಶ ಮತ್ತು ಅಡಗಿರುವ ಸಂದೇಶ. 

ಶ್ರೀನಾಥ್, ಜೈಜಗದೀಶ್, ಚಂದ್ರಶೇಖರ್  ತಮಗೆ ವಹಿಸಿದ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಪುಂಡು ಹುಡುಗರಾಗಿ, ನಂತರ ಬದಲಾಗುವ ಹುಡುಗರಾಗಿ, ನಂತರ ಗೊಂದಲಕ್ಕೆ ಒಳಗಾಗುವ ಯುವ ಪೀಳಿಗೆಯನ್ನು ಪ್ರತಿನಿಧಿಸುವ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಅದಕ್ಕೆ ಬೇಕಾದ ಅಭಿನಯ, ಸಂಭಾಷಣೆ ಹೇಳುವ ಧಾಟಿ ಎಲ್ಲವೂ ತಮ್ಮ ಗುರುಗಳ ಮಾರ್ಗದರ್ಶನದಲ್ಲಿ ಸೊಗಸಾಗಿ ಅರಳಿದೆ.

ಟಿ ಎನ್ ಸೀತಾರಾಂ ಕೋಪತಾಪದ, ಮೈ ಪರಚಿಕೊಳ್ಳುವಂಥಹ ಸಂಧಿಗ್ಧ ಪಾತ್ರದಲ್ಲಿ ಮೊದಲು ನಂತರ ಸೇಡು ತೀರಿಸಿಕೊಳ್ಳುವ ಪಾತ್ರದಲ್ಲಿ ನೈಜತೆಯಿಂದ ಅಭಿನಯಿಸಿದ್ದಾರೆ. ಇವರ ಪಾತ್ರ ಚಿತ್ರಕ್ಕೆ ಇನ್ನೊಂದು ತಿರುವನ್ನು ಕೊಡುತ್ತದೆ. 

ಪೋಷಕ ಪಾತ್ರದಲ್ಲಿ ಬರುವ ಪದ್ಮಾವಾಸಂತಿ, ರೇಖಾ ರಾವ್ ಗಮನ ಸೆಳೆಯುತ್ತಾರೆ. ಚಿತ್ರಕ್ಕೆ ಒಂದು ದಿಕ್ಕು ಕೊಡುವ ಪಾತ್ರದಲ್ಲಿ ವಿಜಯಲಕ್ಷ್ಮಿ ಸಿಂಗ್ ತಮ್ಮ ಚೆಲುವಿಂದ, ಚಿನಕುರುಳಿ ಅಭಿನಯದಿಂದ ಚುಟುಕಾದ ಪಾತ್ರದಲ್ಲಿ ಮಿಂಚುತ್ತಾರೆ.  

ಈ ಚಿತ್ರದಲ್ಲಿ ಹಾಡುಗಳು ಮತ್ತೊಮ್ಮೆ ಮಿಂಚುತ್ತದೆ. 

ಸಿದ್ದಲಿಂಗಯ್ಯ ಅವರ ಸಾಹಿತ್ಯದ ಮೂರು ಹಾಡುಗಳು 
ಅ) "ಕಾಸನು ಬೀಸಿ ಒಲವಿನ ಬೆಲೆಯನು" ವಾಣಿಜಯರಾಂ ಅವರ ಸುಮಧುರ ಕಂಠದಲ್ಲಿ ಉತ್ತಮವಾಗಿ ಚಿತ್ರೀಕರಿಸಿದ್ದಾರೆ. 
ಆ) "ಗೆಳತಿ ಓ ಗೆಳತಿ" ಪ್ರಣಯಗೀತೆಯಾಗಿ ಎಸ್ ಪಿ ಬಾಲಸುಬ್ರಮಣ್ಯಂ ಗಾಯನದಲ್ಲಿ ಸೊಗಸಾಗಿದೆ 
ಇ) "ಕಲಿಗಾಲವಯ್ಯ ಕಲಿಗಾಲ" ಎಂದಿನ ಇಂದಿನ ಮುಂದಿನ ಪರಿಸ್ಥಿತಿಯನ್ನು ಹೇಳುವ ಗೀತೆಯಾಗಿ ಎಸ್ ಪಿ ಬಾಲಸುಬ್ರಮಣ್ಯಂ ಚಿತ್ರಿಕೃತವಾಗಿದೆ. 

ತನ್ನ ನೆಚ್ಚಿನ ಗೆಳೆಯ ವಿಜಯನಾರಸಿಂಹ ಅವರಿಂದ ಮೂಡಿಬಂದ "ಉಯ್ಯಾಲೆ ಆಡೋಣ ಬನ್ನಿರೋ" ಜಯಚಂದ್ರನ್ ಮತ್ತು ವಾಣಿ ಜಯರಾಂ ಅವರ ಉತ್ತಮ ಯುಗಳ ಗೀತೆಯಾಗಿದೆ. ಇಡಿ ಹಾಡನ್ನು ಉಯ್ಯಾಲೆಗಳ ಮಧ್ಯೆದಲ್ಲಿ ಚಿತ್ರಿಕರಿಸಿರುವುದು ವಿಶೇಷ. 

ಇಡಿ ಚಿತ್ರಕ್ಕೆ ಸಂಗೀತ ಮೆರುಗು ನೀಡಿರುವ ವಿಜಯಭಾಸ್ಕರ್, ಹಿನ್ನೆಲೆ ಸಂಗೀತದಲ್ಲಿ ಗಮನ ಸೆಳೆಯುತ್ತಾರೆ. ಆಣೆಕಟ್ಟು ಕಟ್ಟುವ ಪ್ರದೇಶವನ್ನು ತೋರಿಸುವಾಗೆಲ್ಲ ಬರುವ ಸಂಗೀತ ಅತ್ಯುತ್ತಮ. ಒಂದು ರೀತಿಯ ಆಶಾಭಾವವನ್ನು ಹೊತ್ತು ತರುತ್ತದೆ. 

ಬಿ ಎಸ್ ಬಸವರಾಜ್ ಭಾವುಕ ಸನ್ನಿವೇಶಗಳ ಛಾಯಾಗ್ರಹಣ ಮಾಡುತ್ತಲೇ ನಿಧಾನವಾಗಿ ನಮ್ಮ ಮನದೊಳಗೆ ಹೊಕ್ಕು ಸಾಗುವ ಸೂರ್ಯಾಸ್ತ ಮತ್ತು ಸೂರ್ಯೋದಯದ ದೃಶ್ಯಗಳು, ಅಣೆಕಟ್ಟಿನ ಆಯಾತ ಪ್ರದೇಶವನ್ನು ತೋರಿಸುವ ರೀತಿ ಸೂಪರ್ ಸೂಪರ್. 

ಚಿತ್ರದ ಆರಂಭ ಪುಟ್ಟಣ್ಣ ಅವರ ಎಲ್ಲಾ ಚಿತ್ರಗಳ ವಿಶೇಷ. ಭೂಮಿ ತಿರುಗುತ್ತದೆ ಅದರ ಜೊತೆಯಲ್ಲಿಯೇ ಮನುಜ ಯೋಚಿಸುವ ಲಹರಿಯೂ ಸಹ ಎನ್ನುವ ಭಾವ ಹೊತ್ತು ತರುವ ರೀತಿಯಲ್ಲಿ ಚಿತ್ರದ ಹೆಸರು, ತಾರಾಗಣ, ತಾಂತ್ರಿಕವರ್ಗ ಎಲ್ಲವೂ ಒಂದೇ ಚೌಕಟ್ಟಿನೊಳಗೆ ಸಾಗುತ್ತಾ ಹೋಗುತ್ತದೆ. 

ಇಡಿ ಚಿತ್ರ ಒಂದು ಗುಟುಕಿಗೆ ಒಳಗೆ ಹೋದರೂ, ಅದರ ಪರಿಣಾಮ ನಿಧಾನವಾಗಿ ಮನದೊಳಗೆ ಇಳಿಯುತ್ತಾ ಹೋಗುತ್ತದೆ. 

ಒಂದು ಪೂರ್ತಿ ವಿಭಿನ್ನ ಎನ್ನಿಸುವ ಚಿತ್ರ ನೀಡಿರುವ ಪುಟ್ಟಣ್ಣ ಕಣಗಾಲ್ ಅವರು ಒಂದು ದೃಶ್ಯದಲ್ಲಿ ಬಂದು ಹೋಗುವುದು ವಿಶೇಷ. 

ಒಂದು ಮನದಾಳಕ್ಕೆ ಇಳಿಯುವ ಚಿತ್ರವನ್ನು ನೋಡಿದ,  ಅನುಭವಿಸಿದ, ಮತ್ತು ಯೋಚನಾಲಹರಿಗೆ ಕೆಲಸ ತಂದು ಕೊಟ್ಟ ತೃಪ್ತಿ ಈ ಚಿತ್ರ ನೋಡಿದ ಮೇಲೆ ನನಗೆ ದಕ್ಕಿತು. 


Sunday, September 13, 2015

ಅಂತರಂಗವನ್ನು ಗುಪ್ತಗಾಮಿನಿಯಾಗಿ ಹರಿಸುವ - ರಂಗನಾಯಕಿ (1981)

ಪುಟ್ಟಣ್ಣ ಕಣಗಾಲ್ ಹತ್ತಿರ ಕ್ಷಮೆ ಕೇಳಿ ಕೇಳಿ ಸಾಕಾಯ್ತು.. ಇರಲಿ ಅವರು ಕ್ಷಮಿಸುವಂಥಹ ಧಾರಾಳ ಮನಸ್ಸಿನವರು.. ಅವರ ಕ್ಷಮೆಯಾಚನೆಯೊಂದಿಗೆ ಮತ್ತೆ ಅವರ ಚಿತ್ರರತ್ನಗಳ ಕಡೆಗೆ ನನ್ನ ಪಯಣ.

ದೂರದರ್ಶನ ಎಂಭತ್ತರ ದಶಕದ ಆರಂಭದಲ್ಲಿ ಮಾಯಾಜಾಲವನ್ನೇ ಸೃಷ್ಠಿಸಿತ್ತು.. ಪ್ರತಿ ಶನಿವಾರ ಚಲನಚಿತ್ರಗಳಿಗೋಸ್ಕರ ಕಾದು ಕುಳಿತಿರುತ್ತಿದ್ದೆವು. ರಂಗನಾಯಕಿ ಆ ರೀತಿಯಲ್ಲಿ ಯಾರದೋ ಮನೆಯ ದೂರದರ್ಶನದಲ್ಲಿ, ಕಿಟಕಿಯ ಮೂಲಕ ಅಥವಾ ಅವರ ಧಾರಾಳ ಮನಸ್ಸಿದ್ದರೆ ಅವರ ಮನೆಯೊಳಗೇ ಕೂತು ನೋಡುವ ಅವಕಾಶ.     

ಬಾಲ್ಯದಲ್ಲಿಯೆ ಈ ಚಿತ್ರ ನಾನಾ ಕಾರಣಗಳಿಂದ ಇಷ್ಟವಾಗಿತ್ತು. 

೧) ಎಂ ಏನ್ ವ್ಯಾಸರಾವ್ ಅವರ ಪಾನಿ ಪುರಿ ಗೀತೆ ಎನ್ನುವಂತೆ ರಚಿಸಿದ "ಪ್ರೇಮದಲ್ಲಿ ಸ್ನೇಹದಲ್ಲಿ" ಹಾಡು, ಎಂ ರಂಗರಾವ್ ಅವರ ಅದ್ಭುತ ಟಪೋರಿ ವಾದ್ಯ ಮೇಳ, ಅದಕ್ಕೆ ಸಂಗೀತ ಅದರಲ್ಲಿಯೂ " ಮೈ ಡಿಯರ್" ಎಂದು ಹಾಡಿದ ಕೂಡಲೇ ಬರುವ ಡ್ರಮ್ ಸಂಗೀತ ನನ್ನನ್ನು ಹುಚ್ಚನನ್ನಾಗಿ ಮಾಡಿಸಿತ್ತು. ಎಸ್ ಪಿ ಬಾಲಸುಬ್ರಮಣ್ಯಂ ಅವರ ಅದ್ಭುತ ಗಾಯನ, ಪ್ಲೇ ಬಾಯ್ ಎನ್ನುವ ಒಂದು ಇಮೇಜ್ ಸೃಷ್ಠಿಗೆ ಕಾರಣವಾದ ರಾಮಕೃಷ್ಣ ಅವರ ಪಾತ್ರ, 

೨) " ಮಂದಾರ ಪುಷ್ಪವು ನೀನು" ವಿಜಯನಾರಸಿಂಹ ರಚಿಸಿರುವ ಈ ಹಾಡಿನ್ನು ಜಯಚಂದ್ರನ್ ಶುರುಮಾಡುವ ರೀತಿ, ಧರ್ಮಸ್ಥಳದ ಉದ್ಯಾನವನದಲ್ಲಿ ರಾಧ ಕೃಷ್ಣರ ಮೂರ್ತಿಯ ಮುಂದೆ ಶುರುವಾಗುವ ಈ ಹಾಡು, ಮದ್ಯೆ ಮದ್ಯೆ ಎಸ್ ಪಿ ಶೈಲಜಾ ಸುರಿಸುವ ಜೇನು ಹನಿ ಒಂದು ಕಡೆಯಾದರೆ, ಸರಳ ಇಂಪಾದ ಸಂಗೀತ, ಸುಂದರ ಪ್ರಕೃತಿಯ ಮಡಿಲಲ್ಲಿ ಚಿತ್ರೀಕರಿಸಿದ ರೀತಿ ಇಷ್ಟವಾಗಿತ್ತು. ನಾಯಕ ಅಶೋಕ್ ಅವರ ವೇಷಭೂಷಣ, ಅಂದಗಾರ್ತಿ ಆರತಿಯ ಸುಂದರ ಅಲಂಕಾರ ಒಂದು ರೀತಿಯಲ್ಲಿ ಈ ಹಾಡನ್ನು ಮತ್ತೆ ಮತ್ತೆ ಕೇಳಬೇಕು ಎನ್ನಿಸಿತ್ತು. 

೩) ಶಕ್ತಿ ಸ್ಥಳ ಕೊಲ್ಲೂರಿನಲ್ಲಿ ಆರತಿ ಹಾಡಿ ಕುಣಿಯುವ "ಜೈ ಜಗದಂಬೆ" , ಎಸ್ ಜಾನಕಿ ಭಕ್ತಿ ಪೂರ್ವಕವಾಗಿ ಪರವಶರಾಗಿ ಹಾಡಿದ್ದಾರೆ, ಅದ್ಭುತ ಎನ್ನಿಸುವ ಸಾಹಿತ್ಯದ ರೂವಾರಿ ವಿಜಯನಾರಸಿಂಹ. ಸಂಗೀತದಲ್ಲಿ ಉಪಯೋಗಿಸಿರುವ ವಾದ್ಯ, ಚಿತ್ರೀಕರಣದಲ್ಲಿ ಅದಕ್ಕೆ ಹತ್ತಿರವಾಗುವಂತೆ ಉಪಯೋಗಿಸಿರುವ ವಾದ್ಯ ಇಷ್ಟವಾಗುತ್ತದೆ. ಆರತಿ ಈ ಹಾಡಿನಲ್ಲಿ ಇಷ್ಟವಾಗುವ ಕಾರಣ ಅವರು ಉಟ್ಟಿರುವ ಸೀರೆಯ ಬಣ್ಣ, ಹಣೆಯಲ್ಲಿ ದೊಡ್ಡದಾದ ಕುಂಕುಮದ ಕೆಳಗೆ ಒಂದು ಚಿಕ್ಕ ಬೊಟ್ಟು. 

೪) ಅಣ್ಣ ಎಂದರೆ ಹೀಗೆಯೇ ಇರಬೇಕು ಎನ್ನಿಸುವಷ್ಟು ಇಷ್ಟವಾಗುವ ಅಂಬರೀಶ್, ಕಣಗಾಲ್ ಪ್ರಭಾಕರ್ ಶಾಸ್ತ್ರೀ ರಚಿಸಿರುವ "ಕನ್ನಡ ನಾಡಿನ ರಸಿಕರ ಮನವ" ಹಾಡು ಮತ್ತೊಮ್ಮೆ ಎಸ್ ಪಿ ಬಾಲಸುಬ್ರಮಣ್ಯಂ ನಮಗೆ ಹತ್ತಿರವಾಗುತ್ತಾರೆ. ತುಮಕೂರು ಬಳಿಯ ಶಿವಗಂಗೆಯಲ್ಲಿ ಚಿತ್ರಿಕರಿಸಿರುವ ಹಾಡು ಮತ್ತೆ ಮತ್ತೆ ಕೇಳಬೇಕು ಮತ್ತು ನೋಡಬೇಕು ಎನ್ನಿಸುತ್ತದೆ. ಅದರಲ್ಲೂ ಈ ಹಾಡಿನ ಮದ್ಯೆ ಮದ್ಯೆ ರಂಗಭೂಮಿಯ ಚಿಕ್ಕ ಚಿಕ್ಕ ತುಣುಕುಗಳನ್ನು ಹೆಣೆದಿರುವುದು ಪುಟ್ಟಣ್ಣ ಹಾಡುಗಳನ್ನು ಚಿತ್ರೀಕರಿಸುವ ಅದ್ಭುತ ಶೈಲಿಯನ್ನು ತೋರಿಸುತ್ತದೆ. ಕಡೆಯಲ್ಲಿ ಹಾಡಿನ ಸಾಲನ್ನು ನಿಧಾನಗತಿಯಲ್ಲಿ ಹಾಡಿ ರಂಗಭೂಮಿಯ ಬ್ಯಾನರ್ ಇಂದ ಆರತಿ ಹೆಸರಿಗೆ ಬಣ್ಣವನ್ನು ಬಳೆದು ಅಳಿಸುವುದು ಬಣ್ಣದ ಬದುಕು ಎಷ್ಟು ಕ್ಷಣಿಕ ಎನ್ನುವಂತೆ ಭಾವ ತೋರುತ್ತದೆ. ಆದರೆ ಈ ಹಾಡು ಶುರುವಾಗುವಾಗ ರಂಗು ರಂಗಿನ ಪರದೆ, ಬೆಳಕು ಇವುಗಳ ಮದ್ಯೆ ನಾಯಕಿಯನ್ನು ತೋರಿಸಿ ರಂಗಭೂಮಿಯ ಹೆಚ್ಚುಗಾರಿಕೆಯನ್ನು ಪ್ರದರ್ಶಿಸುತ್ತಾರೆ. 

ಶ್ರೀ ಅಶೋಕ್ ಆರ್ಟ್ಸ್ ಲಾಂಛನದಲ್ಲಿ, ಬಿ ತಿಮ್ಮಣ್ಣ ಅವರ ನಿರ್ಮಾಣದಲ್ಲಿ , ಅಶ್ವತ್ಥ ಅವರ "ರಂಗನಾಯಕಿ" ಎನ್ನುವ ಕಥೆಯನ್ನ ಚಲನಚಿತ್ರವಾಗಿಸಿದರು ಪುಟ್ಟಣ್ಣ. ಚಿತ್ರದ ತಾರಾಗಣ, ತಾಂತ್ರಿಕವರ್ಗದ ಹೆಸರನ್ನು ತೆರೆಯ ಮೇಲೆ ತೋರಿಸುವಾಗ, ರಂಗಭೂಮಿಯ ಅಂದಿನ ಕಾಲದ ಪ್ರಸಿದ್ಧ ವ್ಯಕ್ತಿಗಳ ಚಿತ್ರಗಳ ಜೊತೆಯಲ್ಲಿ ತೋರಿಸುವುದು ಪುಟ್ಟಣ್ಣ ಒಂದು ವಸ್ತು ವಿಷಯಕ್ಕೆ ಎಷ್ಟು ಒತ್ತು ನೀಡುತ್ತಿದ್ದರು ಎನ್ನುವುದಕ್ಕೆ ಸಾಕ್ಷ್ಟಿಯಾಗಿದೆ. 
ಯೋಗಣ್ಣ ಅವರ ಜೊತೆಗೂಡಿ ಈ ಕಥೆಗೆ ಚಿತ್ರಕಥೆ ಬರೆದು ಪುಟ್ಟಣ್ಣ ಕಣಗಾಲ್ ಈ ಚಿತ್ರವನ್ನು ಯಶಸ್ಸಿನ ಮಹಲಿಗೆ ಕೊಂಡೊಯ್ದರು. ಚಿತ್ರಕ್ಕೆ ತಕ್ಕ ತಾಂತ್ರಿಕ ವರ್ಗ ಎನ್ನುವ ಹಾಗೆ ಈ ಚಿತ್ರಕ್ಕೆ ಸಂಗೀತಕ್ಕೆ ಬಂದವರು ಎಂ ರಂಗರಾವ್. ಎಸ್ ಮಾರುತಿರಾವ್ ಪುಟ್ಟಣ್ಣ ಅವರ ಕಲ್ಪನೆಯನ್ನು ಹಾಗೆ ಕ್ಯಾಮೆರ ಕಣ್ಣಲ್ಲಿ ಸೆರೆ ಹಿಡಿಯಲು ನಿಂತರು. 

ಆ ಕಾಲಘಟ್ಟದ ಮುಖ್ಯ ಪ್ರತಿಭೆಗಳನ್ನು ಆಯ್ದು ಈ ಚಿತ್ರ ಮಾಡಿದ್ದರು. ಆರತಿ, ರಾಜಾನಂದ್, ಅಂಬರೀಶ್, ಅಶೋಕ್, ರಾಮಕೃಷ್ಣ, ಹಲವಾರು ರಂಗಭೂಮಿಯ ಪ್ರತಿಭೆಗಳನ್ನು ಆಯ್ಕೆ ಮಾಡಿದ್ದರು. ಇಲ್ಲಿ ಬರುವ ಪ್ರತಿ ಪಾತ್ರಗಳು ಚಿಕ್ಕದೋ ದೊಡ್ಡದೋ ಚಿತ್ರದ ಕಥೆಯ ಮೇಲೆ ಮುಖ್ಯ ಪರಿಣಾಮ ಬೀರುತ್ತಲೇ ಇರುವಂಥವು. 

ಈ ಚಿತ್ರದ ಪ್ರಮುಖ ಪಾತ್ರ ರಂಗನಾಯಕಿ ಎನ್ನುವ ರಂಗಭೂಮಿ ಕಲಾವಿದೆಯದು. ಅವಳ ಬಾಲ್ಯವನ್ನು ಒಂದೆರಡು ದೃಶ್ಯಗಳಲ್ಲಿ ತೋರಿಸಿ, ಆ ಮಗುವಿಗೆ ಬಾಲ್ಯದಿಂದಲೂ ಸಂಗೀತ, ಅಭಿನಯ, ಬಣ್ಣ ಇವುಗಳ ಮೇಲೆ ಇರುವ ಆಸಕ್ತಿಯನ್ನು ರಂಗಭೂಮಿಯ ತಾಲೀಮನ್ನು ನೋಡುವಾಗ ಆ ಮಗುವಿನ ಕಣ್ಣು, ಕಿವಿ, ಕೈ, ಕಾಲುಗಳನ್ನು ಮಾತ್ರ ತೋರಿಸಿ ದೃಶ್ಯದ ಗಾಢತೆಯನ್ನು ಹೆಚ್ಹು ಮಾಡುತ್ತಾರೆ. 

ಅನಾಥ ಮಗುವಾದ ಅಂಬರೀಶ್ ಅವರನ್ನು ಸಾಕಿ ಸಲುಹಿದ ತನ್ನ ಸಾಕು ತಂದೆಯ ಬಗ್ಗೆ ಅಭಿಮಾನದಿಂದ ಹೇಳುವಾಗ ಅಂಬರೀಶ್ ಇಷ್ಟವಾಗುತ್ತಾರೆ, ಆ ಅಭಿಮಾನ, ಹೆಮ್ಮೆ ಅವರ ಧ್ವನಿ ಆಹಾ. 

ರಾಜಾನಂದ್ ಅವರ ಸ್ನೇಹಿತ ಕಷ್ಟ ಕಾಲದಲ್ಲಿ ಇವರ ಬಳಿ ಬರುತ್ತಾರೆ, ಮೊದಲೇ ಕಷ್ಟದಲ್ಲಿದ್ದರೂ, ತನ್ನ ಸ್ನೇಹಿತನಿಗೆ ಸಹಾಯ ಮಾಡಬೇಕು ಎಂದು ತಮ್ಮ ನಾಟಕದ ಮೂರು ದಿನದಲ್ಲಿ ಬರುವ ಪೂರ್ತಿ ಹಣವನ್ನು ಅವನಿಗೆ ಕೊಡುವ ಭರವಸೆ ಕೊಡುತ್ತಾರೆ. ಆಗ ಹೇಳುವ ಮಾತು "ಒಬ್ಬ ಕಲಾವಿದ ಇನ್ನೊಬ್ಬ ಕಲಾವಿದನ ಕಷ್ಟಕ್ಕೆ ಆಗದಿದ್ದರೆ ಕಲಾವಿದನ ಜನ್ಮ ಯಾಕೋ" ಎನ್ನುತ್ತಾರೆ. ಅದ್ಭುತ ನಟನೆ.  

ಕೆಲ ಹಣವುಳ್ಳ ಕಾಮುಕ ವ್ಯಕ್ತಿ ಹಣದ ದರ್ಪದಿಂದ ರಂಗಭೂಮಿ ಕಲಾವಿದರನ್ನು ಅವಮಾನಗೊಳಿಸುವ ಯತ್ನದಲ್ಲಿದ್ದಾಗ, ಅಂಬರೀಶ್ ಚೆನ್ನಾಗಿ ಹೊಡೆದು ಕಳಿಸುತ್ತಾರೆ, ಆಗ ಸಾಕು ತಂದೆ ರಾಜಾನಂದ್ ಅಂಬರೀಶ್ ಅವರಿಗೆ ಚೆನ್ನಾಗಿ ಹೊಡೆಯುತ್ತಾರೆ, 

"ನಾ ಮಾಡಿದ್ದು ತಪ್ಪಾ ಹೇಳಿ ಅಪ್ಪಾಜಿ, ನೀವು ತಪ್ಪು ಎಂದರೆ, ಆ ಸಾಹುಕಾರನ ಕಾಲಿಗೆ ಬಿದ್ದು ತಪ್ಪಾಯ್ತು ಎಂದು ಹೇಳಿ ಕರೆದುಕೊಂಡು ಬರುವೆ" 

"ಕಲಾವಿದರಿಗೂ ಸ್ವಾಭಿಮಾನ, ಮಾರ್ಯಾದೆ ಇದೆ ಎಂದು ತೋರಿಸಲು ನಿನ್ನಂಥವರು ಲಕ್ಷ ಲಕ್ಷ ಹುಟ್ಟಬೇಕು ಕಣೋ" ಎಂದು ರಾಜಾನಂದ್ ಅಂಬರೀಶ್ ಅವರನ್ನು ಅಪ್ಪಿಕೊಳ್ಳುತ್ತಾರೆ. ಅಲ್ಲಿ ರಾಜಾನಂದ್ ಅವರ ಮುಖಾಭಿನಯ, ಧ್ವನಿ ಮತ್ತು ಆ ಗತ್ತು ಅದ್ಭುತ. 

ಈ ಚಿತ್ರದಲ್ಲಿ ಅಭಿನಯ ನೀಡಿರುವ ಕಲಾವಿದರೂ ಈ ಚಿತ್ರಕ್ಕೊಸ್ಕರವೇ ಹುಟ್ಟಿದ್ದಾರೆನೋ ಅನ್ನುವಷ್ಟು ಅದ್ಭುತವಾಗಿ ನಟಿಸಿದ್ದಾರೆ. 

ರಾಜಾನಂದ್ 
ಮೇಲೆ ಹೇಳಿದ ಎರಡು ದೃಶ್ಯಗಳು, 
ಆರತಿಯ ಏಳಿಗೆಯನ್ನು ಕಂಡು ಖುಷಿಯಾಗುವ ದೃಶ್ಯ. 
ಆರತಿಯ ಅಂದವನ್ನು ಮೆಚ್ಚಿ ಬರುವ ಅಶೋಕ್ ಅವರಿಗೆ ರಂಗಭೂಮಿಯ ರಾತ್ರಿ ಹೊತ್ತಿನ ಜಗಮಗ ಬೆಳಕಿನ ಪ್ರಪಂಚ ಮತ್ತು ಬೆಳಗಿನ ಆರ್ಥಿಕ ಪರಿಸ್ಥಿತಿ ಬಿಂಬಿಸುವ ದೃಶ್ಯವನ್ನು ವಿವರಿಸುವ ರೀತಿ. 
ಮದುವೆ ಮಾಡಿಕೊಂಡು ಗಂಡನ ಜೊತೆಯಲ್ಲಿ ಹೋಗುವಾಗ, ಆಗಾಗ ಪತ್ರ ಬರಿ ಎಂದು ಆರತಿಗೆ ಹೇಳುವ ತುಣುಕು
ಆರತಿಯನ್ನು ಚಲನಚಿತ್ರದವರು ಅಭಿನಯಿಸಿ ಎಂದು ಕೇಳಿಕೊಂಡಾಗ, ಆರತಿಯನ್ನು ಒಪ್ಪಿಸುವ ದೃಶ್ಯ 
ದಶರಥನ ಪಾತ್ರದಲ್ಲಿ ಅಂತಿಮ ದೃಶ್ಯದಲ್ಲಿ ನೀಡಿರುವ ಅಭಿನಯ

ಅಂಬರೀಶ್
ಇಡಿ ಚಿತ್ರದಲ್ಲಿ ಆರತಿ ಪಾತ್ರಕ್ಕೆ ನೆರಳಂತೆ ರಕ್ಷಣೆ ನೀಡುವ ಪಾತ್ರ. ತಾನು ಚಿಕ್ಕ ವಯಸ್ಸಿನಲ್ಲಿ ಆಕೆಯನ್ನು ಇಷ್ಟಪಟ್ಟಿದ್ದರೂ, ರಂಗನಾಯಕಿ ಹೇಳುವ ನೀ ನನ್ನ ಅಣ್ಣ ಕಣೋ ಎಂದಾಗ ಒಂದು ಕಡೆ ನಿರಾಸೆ ಇನ್ನೊಂದು ಕಡೆ ಅಣ್ಣನಾದೆ ಎನ್ನುವ ಹೆಮ್ಮೆಯ ಅಭಿನಯ ಅದ್ಭುತ ಎನ್ನಿಸುತ್ತದೆ. ಈ ಕಲಾವಿದ ಎಲ್ಲೋ ಸಿದ್ಧ ಸೂತ್ರಗಳ ಚಿತ್ರಗಳಲ್ಲಿ ಕಳೆದು ಹೋದರೆನೋ ಅನ್ನಿಸುತ್ತದೆ. 

ಅಶೋಕ್
ಪ್ರೀತಿ, ಪ್ರೇಮಗಳು ನಿಜ ಜೀವನದ ಕಷ್ಟ ನಷ್ಟಗಳಲ್ಲಿ ಹೇಗೆ ಕರಗಿ ಹೋಗುತ್ತದೆ ಎನ್ನುವುದನ್ನು ಮುಖಭಾವ ಹಾಗೂ ಮಾತುಗಳ ಭರದಲ್ಲಿ ತೋರಿದ್ದಾರೆ
ನಟಿಮಣಿಯನ್ನು ಸತಿಮಣಿಯನ್ನಾಗಿ ಮಾಡಿ ಮೆರೆಸಲು ಹೊರಟ ನನ್ನ ಬುದ್ಧಿಗೆ ಚಪ್ಪಲಿಲಿ ಹೊಡೆದುಕೊಳ್ಳಬೇಕು ಎನ್ನುವ ದೃಶ್ಯ ಸೂಪರ್ 
ಕಡೆಯಲ್ಲಿ ಆರತಿಗೆ "ಈ ಮಗನಿಗೆ ಜನ್ಮ ಕೊಟ್ಟವಳು ಒಬ್ಬ ದೇವತೆ ಅನ್ನೋ ವಿಷಯವನ್ನು ಮುಚ್ಚಿಟ್ಟುಬಿಟ್ಟಿದ್ದೇನೆ" ಎನ್ನುವಾಗ ಅವರ ತಳಮಳದ ಅಭಿನಯ ಇಷ್ಟವಾಗುತ್ತದೆ. 
ಒರಟು, ಒಂದು ರೀತಿಯ ಪ್ರೀತಿ ಪ್ರೇಮ ಅನುಕಂಪ ಇವುಗಳನ್ನೆಲ್ಲ ಒಂದು ಲಾಭಕ್ಕಾಗಿ ಬಳಸುವ ಮನೋಭಾವದ ಪಾತ್ರವನ್ನು ಅಚ್ಚುಕಟ್ಟಾಗಿ ಅಭಿನಯಿಸಿದ್ದಾರೆ. 

ರಾಮಕೃಷ್ಣ
ಕನ್ನಡ ಚಿತ್ರಜಗತ್ತಿಗೆ ಟಪೋರಿ, ಪ್ಲೇ ಬಾಯ್, ಚಲ್ಲುಚಲ್ಲಾಗಿ ಆಡುವ ಪಾತ್ರದ ರೂಪನ್ನು ತಂದು ಕೊಟ್ಟವರು ಇವರು. ಪುಟ್ಟಣ್ಣ ಅವರ ಅದ್ಭುತ ಮಾರ್ಗದರ್ಶನದಲ್ಲಿ ಆ ರೀತಿಯ ಪಾತ್ರಗಳನ್ನೂ ತೆರೆಯ ಮೇಲೆ ಜೀವಂತ ಮಾಡಿದವರು ಇವರು. ಬೆಲ್ ಬಾಟಮ್ ಪ್ಯಾಂಟ್, ಕಪ್ಪು ಕನ್ನಡಕ, ಕುರುಚಲು ಗಡ್ಡ, ದೊಡ್ಡದಾದ ಬೆಲ್ಟ್, ಯಾವಾಗಲೂ ಒಂದು ರೀತಿಯಲ್ಲಿ ತೂಗಾಡುತ್ತಾ, ಪ್ರಪಂಚವನ್ನು ಉಡಾಫೆಯಿಂದ ನೋಡುವ ಪಾತ್ರದಲ್ಲಿ ಅಪ್ಪಟ ಪರಕಾಯ ಪ್ರವೇಶ ಮಾಡಿದ್ದಾರೆ. 
ಮೊದಲು ನೀವು ಅಭಿನಯ ಮಾಡೋದು ಕಲೀರಿ, ನಿಮ್ಮ ಕಣ್ಣಲ್ಲಿ ಕಾಮ ಎಲ್ಲ್ರಿ ಇದೆ, ತನ್ನ ಮಗುವನ್ನು ನೋಡುವ ತಾಯಿ ಪ್ರೇಮ ಇದೆ.. ನಿಮಗೆ ಕಾಮದ ಕಣ್ಣಲ್ಲಿ ನೋಡೋಕೆ ಬರೋಲ್ಲ.. ನನಗೆ ನಿಮ್ಮನ್ನು ತಾಯಿಯ ರೂಪದಲ್ಲಿ ನೋಡೋಕೆ ಬರೋಲ್ಲ ಎಂದು ಅಳುತ್ತಾ ಹೋಗುವಾಗ ಶಭಾಶ್ ಎನ್ನಿಸುತ್ತದೆ. 
ಆರತಿ 
ಈ ಪಾತ್ರ ಮಾಡೋಕೆ ಹುಟ್ಟಿದ್ದಾರೆನೋ ಅನ್ನುವಷ್ಟು  ಅದ್ಭುತ ಅಭಿನಯ ನೀಡಿದ್ದಾರೆ. ಹಲವಾರು ದೃಶ್ಯಗಳಲ್ಲಿ ಬರಿ ಕಣ್ಣು, ಮುಖಭಾವಗಳಲ್ಲೇ ದೃಶ್ಯವನ್ನು ಉತ್ತುಂಗಕ್ಕೆ ಕರೆದೊಯ್ದಿದ್ದಾರೆ. 
ಮದುವೆ ಆದನಂತರ ಪ್ರೀತಿ ಪ್ರೇಮಗಳು ಬದುಕಿನ ನಿಜ ರೂಪದ ಮುಂದೆ ನಿಲ್ಲೋಲ್ಲ ಎನ್ನುವಂತಹ ದೃಶ್ಯಗಳಲ್ಲಿ ಆರತಿ ಪ್ರಪಂಚದಲ್ಲಿ ಪ್ರೀತಿ, ಪ್ರೇಮ ಇದೆ ಎನ್ನುವ ವಾದ ಒಪ್ಪಿಕೊಂಡರೆ, ಅಶೋಕ್ ವಸ್ತುಗಳು, ಅಂತಸ್ತು, ಹಣ,ಇವುಗಳು ಮಾತ್ರ ಖುಷಿ ನೀಡುತ್ತವೆ ಎನ್ನುವ ವಾದವನ್ನು ಒಪ್ಪಿಕೊಂಡವರು, ಇವುಗಳ ನಡುವೆ ಸಮರವಾದಗೆಲ್ಲ ಆರತಿ ಸಂಭಾಷಣೆ, ಕಣ್ಣಲ್ಲಿ ಕೊಡುವ  ಅಭಿನಯ ಇಷ್ಟವಾಗುತ್ತದೆ. 
ಅಭಿನಯ, ರಂಗ ಭೂಮಿ, ಕಲೆ ಸಾಧನೆ ಇದನ್ನೆಲ್ಲಾ ಅಶೋಕ್ ಅವರಿಗೆ ವಿವರಿಸುವಾಗ ಅವರ ಕಣ್ಣಲ್ಲೇ ಮಾತಾಡುತ್ತಾರೆ. 
ಸಾರಂಗಧರ ನಾಟಕದ ತಾಲೀಮಿನಲ್ಲಿ ಸಾರಂಗಧರ ಪಾತ್ರವನ್ನು ರಾಮಕೃಷ್ಣ ಅವರಿಗೆ ಹೇಳಿಕೊಡುವಾಗ ಮಸ್ತ್ ಮಸ್ತ್ ಅಭಿನಯ. 
ತಾನು ನಂಬಿಕೊಂಡಿರುವ ಕಲೆ ತನ್ನನ್ನು ಬೆಳೆಸಿದೆ ಎನ್ನುವ ಅರಿವು ಇಡಿ ಚಿತ್ರದ ತುಂಬಾ ಹರಿದಾಡಿದೆ. 
ಭಾವುಕ ಸನ್ನಿವೇಶಗಳಲ್ಲಿ, ಮಮತೆಯ ನಟಿಯಾಗಿ, ಮಗನಿಗೆ ಪರಿತಪಿಸುವ ತಾಯಿಯಾಗಿ, ಹತಾಶೆಗೊಳ್ಳುವ ಹೆಂಡತಿಯಾಗಿ ಪ್ರತಿ ಸನ್ನಿವೇಶಗಳಲ್ಲೂ ಆರತಿ ಅದ್ಭುತ ಅಭಿನಯ ನೀಡಿದ್ದಾರೆ. 


ತಾ ನಂಬಿದ ಸಿದ್ಧ ಸೂತ್ರಗಳ ಮೇಲೆ ನಂಬಿಕೆ ಸದಾ ಇರಬೇಕು ಎನ್ನುವ ಮಾತು ಆರತಿಯವರ ಪಾತ್ರದ ಮೂಲಕ ತಿಳಿದು ಬಂದರೆ, ಮಾಡುವ ಕೆಲಸದಲ್ಲಿ ಶ್ರಧ್ಹೆ, ಅಭಿಮಾನ ಇರಬೇಕು ಎನ್ನುವ ಮಾತು ರಾಜಾನಂದ್, ಅಂಬರೀಶ್ ಅವರ ಪಾತ್ರಗಳ ಮೂಲಕ ಅರಿವಾಗುತ್ತದೆ. 
ವಸ್ತು ಸುಖದ ಹಿಂದೆ ಹೋಗುವವರು ಪ್ರಪಂಚದಲ್ಲಿ ಬದುಕಿರುತ್ತಾರೆ ಹೊರತು ಜೀವಿಸಲು ಆಗೋಲ್ಲ ಎನ್ನುವ ನೀತಿ ಅಶೋಕ್ ಪಾತ್ರಧಾರಿ ಹೇಳುತ್ತಾರೆ. 
ಚೆಲ್ಲು ಚೆಲ್ಲು ಅಥವಾ ಉಡಾಫೆ ಇದೆ ಜೀವನವಲ್ಲ, ಸತ್ಯದ ಅರಿವಾಗಬೇಕು, ತಾಳ್ಮೆ ಇರಬೇಕು, ಯೋಚಿಸಬೇಕು ಎನ್ನುವ ಮಾತನ್ನು ರಾಮಕೃಷ್ಣ ಪಾತ್ರ ತೋರುತ್ತದೆ.. 

ಈ ಚಿತ್ರ ಹಲವಾರು ಮುತ್ತು ರತ್ನಗಳನ್ನು ಸುಂದರವಾಗಿ ಪೋಣಿಸಿ ಕನ್ನಡಾಂಬೆಗೆ ತೊಡಿಸಿದ ಅಮೂಲ್ಯ ರತ್ನ ಹಾರ. ಪ್ರತಿಯೊಂದು ದೃಶ್ಯವೂ ಕಲಾತ್ಮಕತೆಯಿಂದ ಕೂಡಿದೆ, ಯಾವುದು ಅತಿ ಎನ್ನಿಸುವುದಿಲ್ಲ. ಕೆಲವು ನಾಟಕದ ತುಣುಕುಗಳನ್ನು ಚಿತ್ರದ ಪರಿಣಾಮ ಹೆಚ್ಚು ಮಾಡುವುದಕ್ಕೆ ಉಪಯೋಗಿಸಿರುವ ಪರಿ ಇಷ್ಟವಾಗುತ್ತದೆ. ಪುಟ್ಟಣ್ಣ ಒಬ್ಬ ಮಾಂತ್ರಿಕ ಕಥೆಯನ್ನು ಹೇಗೆ ಬೆಳ್ಳಿ ಪರದೆಯ ಮೇಲೆ ಎಲ್ಲರಿಗೂ ಇಷ್ಟವಾಗುವ ರೀತಿಯಲ್ಲಿ ತರಬೇಕು ಎನ್ನುವ ಅದ್ಭುತ ಕಲ್ಪನೆ ಯಾವಾಗೂ ಅವರ ಬಳಿ ಚಿತ್ರದ ತಯಾರಿಕ ಹಂತಗಳಲ್ಲೇ ಇರುತ್ತಿತ್ತು ಮತ್ತು ಅದನ್ನು ಹಾಗೆ ಸಾಕ್ಷಾತ್ಕರಿಸಲು ತಮ್ಮ ಪ್ರತಿಭೆಯನ್ನು ಧಾರೆ ಎರೆಯುತ್ತಿದ್ದರು ಎನ್ನುವುದಕ್ಕೆ ರಂಗನಾಯಕಿ ಚಿತ್ರ ಅತ್ಯುತ್ತಮ ಉದಾಹರಣೆ. 

ಪುಟ್ಟಣ್ಣ ಗುರುಗಳೇ... ನಿಮ್ಮ ಮುಂದಿನ ಚಿತ್ರವನ್ನು ನೋಡಿ ಬಂದು ಮತ್ತೊಮ್ಮೆ ನಿಮ್ಮ ಚರಣಕಮಲಗಳಿಗೆ ಅರ್ಪಿಸುವೆ. 

Saturday, January 3, 2015

ಅಚ್ಹ ಬಿಳುಪಿನ ಮನದ ಬಿಳಿ ಹೆಂಡ್ತಿ (1975)

ಪುಟ್ಟಣ್ಣ ಕಣಗಾಲ್ ಎಂಬ ಮಾಂತ್ರಿಕ ತಾ ಮುಟ್ಟಿದ್ದೆಲ್ಲ ರತ್ನವಾಗಲೇ  ಎನ್ನುವ ಮನಶಕ್ತಿಉಳ್ಳವರಾಗಿದ್ದರು.  ಎಲ್ಲರ ಮನೆಯಲ್ಲೂ ನಡೆಯಬಹುದಾದ ಒಂದು ಸಂಗತಿ ಹೊಂದಿದ್ದ ಕಥೆಯನ್ನು ಅಸಾಧಾರಣ ರೀತಿಯಲ್ಲಿ ತೆರೆಗೆ ಅಳವಡಿಸಿ, ಅದಕ್ಕೆ ಹೊನ್ನಿನಂಥಹ ಗೀತೆ, ಸಂಭಾಷಣೆಗಳನ್ನು ತೊಡಿಸಿ ಒಂದು ಹೊಳೆಯುವ ರತ್ನವನ್ನಾಗಿ ಮಾಡಿದ್ದು ಅವರ ಶಕ್ತಿ. 

ಮ ನ ಮೂರ್ತಿಯವರ ಕಥಾ ಆಧಾರಿತ ಈ ಚಿತ್ರವನ್ನು ಎಂ ಜೆ ಎಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮುದ್ದುಕೃಷ್ಣ, ಜಯಸಿಂಹ, ಮಾರುತಿ ನಿರ್ಮಾಣ ಮಾಡಿದ್ದರು. 

ಈ ಚಿತ್ರದ ಒಂದು ಮುಖ್ಯ ಅಂಶ ಎಂದರೆ, ಇಡಿ ಕಥೆಗೆ ತಿರುವು ಕೊಡುವುದು ನಾಯಕನ ಪಾತ್ರ ಆದರೆ ಇಡಿ ಚಿತ್ರದಲ್ಲಿ ನಾಯಕನ ಪಾತ್ರವನ್ನು ಗುಪ್ತಗಾಮಿನಿಯಂತೆ ಮಾಡಿ, ಬರಿ ಹೆಣ್ಣು ಪಾತ್ರಗಳೇ ಮೆರೆದಾಡುವಂತೆ ಚಿತ್ರವನ್ನು ತೆರೆಗೆ ತಂದಿರುವುದು ವಿಶೇಷ. 

ಯಾವ ಮನೆಯಾದರೂ, ಮನವಾದರೂ ಎರಡು ಜಡೆಗಳು ಒಂದಾದಾಗ ಸುಖಃ ನೆಮ್ಮದಿ ಶಾಂತಿ ಅಲ್ಲಿ ನೆಲೆಸುತ್ತದೆ ಎನ್ನುವು ಸಂದೇಶವನ್ನು ಸಾರಿ ಸಾರಿ ಹೇಳಲು ಈ ರೀತಿಯಲ್ಲಿ ವಿಭಿನ್ನ ಬಗೆಯ ನಿರೂಪಣೆಯ ಮೊರೆ ಹೊಕ್ಕಿದ್ದಾರೆ ಅನ್ನಿಸುತ್ತದೆ. ಈ ಮಾತಿಗೆ ಪುಷ್ಟಿ ನೀಡುವಂತೆ ಮನೆಯ ಆಳಿನ ಪಾತ್ರ "ಮಲ್ಲ" ಹೇಳುವ ಮಾತು.. ಕಾರಿನಲ್ಲಿ ಕೂತು ಬರುವಾಗ ಇರುವ ಒಗ್ಗಟ್ಟು ಸಂಸಾರದಲ್ಲಿಯೂ ಇದ್ದಾರೆ ನಮ್ಮ ಪರ್ಪಂಚ ಸುಂದರ ಅತಿ ಸುಂದರ (ಸುಮಾರು ಹತ್ತು ಹೆಂಗಸರು ಅಂಬಾಸಡರ್ ಕಾರಿನಲ್ಲಿ ಬಿಳಿ ಹೆಂಡ್ತಿಯನ್ನು ನೋಡಲು ಬರುತ್ತಾರೆ.. ಆಗ ಮಲ್ಲ ಹೇಳುವ ಮಾತು)

ಇಡಿ ಚಿತ್ರದಲ್ಲಿ ನಾಯಕನಿಗೆ ಹಾಡು ಇರುವುದಿಲ್ಲ. ಹಿನ್ನೆಲೆ ಗಾಯನವನ್ನು ತಮ್ಮ ವಶಕ್ಕೆ ತೆಗೆದುಕೊಂಡಿರುವವರು ಅದ್ಭುತ ಗಾಯಕಿ ಶ್ರೀಮತಿ ವಾಣಿಜಯರಾಂ, ಮತ್ತು ಕೋಮಲ ಕಂಠದ ಕಸ್ತೂರಿ ಶಂಕರ್.  ಸಂಗೀತ ಸಂಯೋಜನೆ ಮಾಂತ್ರಿಕ ವಿಜಯಭಾಸ್ಕರ್. 

"ಆ ದೇವರೇ ನುಡಿದ ಮೊದಲ ನುಡಿ" ಪ್ರೇಮವನ್ನು, ಪ್ರೇಮದ ಹುಟ್ಟನ್ನು ಹಾಡಿನಲ್ಲಿ ವಿಜಯನಾರಸಿಂಹ ಅದ್ಭುತವಾಗಿ ಜೋಡಿಸಿದ್ದಾರೆ. ಆರತಿಯವರಿಗೆ ಸರಿಯಾದ ಕಂಠ ಎನ್ನುವಷ್ಟರ ಮಟ್ಟಿಗೆ ವಾಣಿಯಮ್ಮ ದನಿಯಾಗುತ್ತಾರೆ. ಪದಗಳ ಉಳಿತ, ಅದಕ್ಕೆ ಆರತಿಯವರ ಅಭಿನಯ ಸೊಗಸು. 

"ಯಾವ ತಾಯಿಯು ಹಡೆದ ಮಗಳಾದರೇನು" ಕಸ್ತೂರಿ ಕಂಠದಲ್ಲಿ ಕಸ್ತೂರಿ ಶಂಕರ್ ಮನ ಗೆಲ್ಲುತ್ತಾರೆ. ಕೋಮಲ ಕಂಠದಲ್ಲಿ ಮೂಡಿ ಬರುವ ಹಾಡು ನಮ್ಮ ಧರ್ಮ ಹೇಗೆ ಇತರರನ್ನು ತನ್ನ ಮಡಿಲಲ್ಲಿ ಸಾಂತ್ವನವನ್ನು ನೀಡಿ ತಮ್ಮ ಮನದಲ್ಲಿ ಕೂರಿಸಿಕೊಳ್ಳುತ್ತಾರೆ ಎನ್ನುವ ಸಂದೇಶ ಕೊಡುತ್ತದೆ. ಜೊತೆಯಲ್ಲಿ ಕನ್ನಡ ನಾಡಿನ ಬಗ್ಗೆ ಪುಟ್ಟಣ್ಣ ಅವರ ಅಭಿಮಾನ "ಕನ್ನಡಾಂಬೆಯ ಮಡಿಲ ಮಗುವಾದೆ ನೀನು" ಎನ್ನುವ ಸಾಲುಗಳಲ್ಲಿ ನುಗ್ಗಿ ಬರುತ್ತದೆ. 

ಇಡಿ ಚಿತ್ರಕಥೆಯನ್ನು ಹಾಡಿನಲ್ಲಿ ಪೋಣಿಸಿ, ಐದೇ ನಿಮಿಷದಲ್ಲಿ ಇಡಿ ಚಿತ್ರದ ಸಾರವನ್ನು ಬಡಿಸಿರುವ "ರಂಗೇನಹಳ್ಳಿಯಾಗೆ"  ಹಾಡು ನೊಂದ ಮನ ಮತ್ತು ಉಲ್ಲಾಸದ ಮನ ಎರಡರ ಅದ್ಭುತ ಸಂಗಮವಾಗಿ ಮೂಡಿ ಬರುತ್ತದೆ. ಕಸ್ತೂರಿ ಶಂಕರ್ ಎತ್ತಿ ಕೊಡುವ ಹಾಡನ್ನು ವಾಣಿ ಜಯರಾಂ ಅಂಗ್ಲ ಶೈಲಿಯಲ್ಲಿ ಸುಲಲಿತವಾಗಿ ಹಾಡಿರುವುದು ಸೂಪರ್ ಎನ್ನಿಸುತ್ತದೆ. 

ಮತ್ತೊಮ್ಮೆ ಪೂರ್ಣ ಆಂಗ್ಲಶೈಲಿಯಲ್ಲಿಯೇ "ರಂಗೇನ ಹಳ್ಳಿಯಾಗೆ" ಹಾಡು ವಾಣಿ ಜಯರಾಂ ಅವರ ಸಿರಿಕಂಠ ಗಮನಸೆಳೆಯುತ್ತದೆ. ಅಂಬರೀಶ್ ಚಿಕ್ಕ ಚೊಕ್ಕ ಪಾತ್ರದಲ್ಲಿ ಬಂದು ಹೋಗುತ್ತಾರೆ. 

ಇಡಿ ಚಿತ್ರದಲ್ಲಿ ಎದ್ದು ನಿಲ್ಲುವುದು ಇಂಗ್ಲಿಷ್ ಹಾಡು "ಹಾಪ್ಯೆಸ್ಟ್ ಮೊಮೆಂಟ್... ಎವ್ರಿ ಇವೆಂಟ್ ಬಿಳಿ ಹೆಂಡ್ತಿ ಸಿಂಗ್ಸ್ ಇನ್ ಎಗ್ಸೈಟ್ಮೆಂಟ್" ಇದನ್ನು ಪಕ್ಕಾ ಪಾಶ್ಚಿಮಾತ್ಯ ಶೈಲಿಯಲ್ಲಿ ಹಾಡಿರುವುದು, ನೃತ್ಯ ಸಂಯೋಜಿಸಿರುವುದು, ಸಂಗೀತವನ್ನು ಆಯೋಜಿಸಿರುವುದು  ಪುಟ್ಟಣ್ಣ ಅವರ ಮಾಧ್ಯಮದ ಮೇಲಿನ ಹಿಡಿತವನ್ನು ತೋರುತ್ತದೆ. ವಾಣಿಜಯರಾಂ ಅಕ್ಷರಶಃ ಈ ಹಾಡಿನಲ್ಲಿ ನಮ್ಮ ಮನವನ್ನು ಕಲಕುತ್ತಾರೆ.  

ಇಡಿ ಚಿತ್ರವನ್ನು ಕಣ್ಣಲ್ಲಿ ಕಣ್ಣಿಟ್ಟು ಚಿತ್ರಿಸಿರುವ ಬಿ ಏನ್ ಹರಿದಾಸ್ ಪುಟ್ಟಣ್ಣ ಅವರ ಭಾವವನ್ನು ಹಾಗೆ ಬರೆದಿದ್ದಾರೆ ನೆರಳು ಬೆಳಕಿನಲ್ಲಿ. 

ಚುರುಕಾದ ಸಂಭಾಷಣೆ ಕೆಲವೊಮ್ಮೆ ನಗೆ ಉಕ್ಕಿಸಿದರೆ, ಹಾಗೆಯೇ ಕೆಲವು ಸಂಭಾಷಣೆಗಳು ಮನಕ್ಕೆ ಮುಟ್ಟುತ್ತವೆ. ಇದರ ರೂವಾರಿ ಹೆಚ್ ಎಸ್ ಸುಬ್ಬರಾವ್. 

ನಗೆ ಉಕ್ಕಿಸುವ ದೃಶ್ಯಗಳು 
  • ಉಮಾ ಶಿವಕುಮಾರ್ ಅವರ ಏರೋಪ್ಲೇನ್ ಮೇಲಿನ ಪ್ರೀತಿ 
  • ಎಲ್ಲಿ ಸ್ವಾಮೀ ನಾಲಿಗೆ ತೋರಿಸಿ.. ಆವಾಗ ಅಂಗನ್ದಿರಿ, ಇವಾಗ ಇಂಗನ್ದಿರಿ  ಅದು ಎಂಗೆ.. (ಹಳ್ಳಿಯ ಮನೆಯ ಉಸ್ತುವಾರಿ ಹೊತ್ತಿದ್ದವ ಬಿಳಿ ಹೆಂಡ್ತಿ ಜೊತೆಯಲ್ಲಿ ಚಿಕ್ಕ ದಣಿಗಳು ಬರುತ್ತಿದ್ದಾರೆಂದು ತಿಳಿದಾಗ.. ಹೀನ ಮಾನವಾಗಿ ಮಾತಾಡುವ.. ಅವರು ಬಂದ ಕೂಡಲೇ ಮಾತನ್ನೇ ತಿರುಗಿಸಿ ಹೋಗಲು ಭಟ್ಟನಾಗುವ ದೃಶ್ಯಕ್ಕೆ ಮನೆಯ ಆಳುಗಳು ಹೇಳುವ ಸಂಭಾಷಣೆ)
  • ಮನೆಯ ಆಳು "ಮಲ್ಲ" ತಮಾಷೆ ಮಾತುಗಳನ್ನು ಆಡುತ್ತಲೇ.. ಮನ ಮುಟ್ಟುವ ಸಂದೇಶಾತ್ಮಕ ಮಾತುಗಳನ್ನು ನಗೆ ಉಕ್ಕಿಸುತ್ತವೆ ಹಾಗೆಯೇ ಮನಕ್ಕೆ ತಾಕುತ್ತವೆ. 
ಅದ್ಭುತ ದೃಶ್ಯಗಳು 
  • ಮಗ ಬಿಳಿ ಹುಡುಗಿಯನ್ನು ಮದುವೆ ಮಾಡಿಕೊಂಡು ಬಂದಿದ್ದಾನೆ ಎಂದು ತಿಳಿದು ಆಕೆಯನ್ನು ದೆಹಲಿಯಿಂದ ಹಾಗೆಯೇ ಅಲ್ಪ ಸ್ವಲ್ಪ ದುಡ್ಡು ಕೊಟ್ಟು ಸಾಗು ಹಾಕಬೇಕೆಂಬ ನಿರ್ಧಾರದಿಂದ ಬರುವ ಸೀತಾರಂ.. ಆಕೆಯನ್ನು ನೋಡಿ, ಆಕೆ ಕನ್ನಡ ಭಾಷೆಯಲ್ಲಿ ಮಾತಾಡುವುದು, "ಮಾವ" ಎಂದು ಸಂಭೋಧಿಸುವುದನ್ನು ನೋಡಿ, ಹಣದ ಪೆಟ್ಟಿಗೆಯನ್ನು ಹಾಗೆ ಪಕ್ಕದಲ್ಲಿಟ್ಟುಕೊಂಡು ಆಶೀರ್ವಾದ ಮಾಡುತ್ತಾರೆ. ಸಂಸ್ಕಾರ ಇದ್ದಾಗ ಸಂಪತ್ತು ಮುಖ್ಯ ಅಲ್ಲಾ ಎನ್ನುವ ಅದ್ಭುತ ಸಂದೇಶ ಕಾಣ ಸಿಗುತ್ತದೆ. 
  • ಹಣದ ಪೆಟ್ಟಿಗೆಯನ್ನು ಸೀತಾರಾಮ್ ತೆಗೆಯಲು ಹೋದಾಗ.. ಎಲಿಸಾ ಮಾವ ಎಂದು ಬಗ್ಗಿ ನಮಸ್ಕರಿಸಿ ನಿಮ್ಮನ್ನು ನೋಡಿದಾಗ ಸ್ವಾಮೀ ವಿವೇಕಾನಂದರನ್ನು ನೋಡಿದ ಹಾಗೆ ಆಯಿತು ಎನ್ನುತ್ತಾಳೆ.
  • ಸೊಸೆಯನ್ನು ಮನೆಗೆ ಕರೆ ತಂದಾಗ, ಆರತಿ, ಲೀಲಾವತಿ, ಸೀತಾರಾಮ್ ಇವರುಗಳ ನಡುವೆ ನಡೆಯುವ ಭಾವೋದ್ವೇಗದ ತೊಳಲಾಟ  
  • ಗುರುಗಳೇ ನನಗೆ ವೇದ, ಉಪನಿಷತ್ತು ಇವುಗಳ ಬಗ್ಗೆ ಹೇಳಿರಿ ಎಂದು ಎಲಿಸಾ ಕೇಳಿಕೊಂಡಾಗ ಉದಯಕುಮಾರ್ ಮುಖದಲ್ಲಿ ತೋರುವ ಅಭಿನಯ, ಆನಂದಭಾಷ್ಪದಿಂದ ತೋಯ್ದು ಹೋಗುತ್ತಾ... ಸಮಯ ಆದಗೆಲ್ಲಾ ಹೇಳಿ ಕೊಡುತ್ತೇನೆ ಎಂದಾಗ ಎಲಿಸಾಳ ಮೊಗದಲ್ಲಿ ತೋರುವ ಭಾವನೆಗಳು 
  • ಎರಡು ಆಯಾಮದಲ್ಲಿ ಬರುವ ಒಂದು ದೃಶ್ಯ, ಆರತಿಯನ್ನು ಬಹುವಾಗಿ ಮೆಚ್ಚಿಕೊಳ್ಳುವ ಎಲಿಸಾ ಅವಳನ್ನು ತನ್ನ ಗಂಡನ ಬಳಿ ಹೊಗಳುತ್ತಿದ್ದಾರೆ, ಅದೇ ದೃಶ್ಯದಲ್ಲಿ ಲೀಲಾವತಿ ಆರತಿಯನ್ನು ಎಲಿಸಾಳ ಜೊತೆಯಲ್ಲಿ ಓಡಾಡುವುದನ್ನು ಕಂಡು ತರಾಟೆಗೆ ತೆಗೆದುಕೊಳ್ಳುತ್ತಾಳೆ. ಒಂದು ಕಡೆ ಬರಿ ಸಂಭಾಷಣೆ ಕೇಳಿಸುತ್ತಾ.. ದೃಶ್ಯದಲ್ಲಿ ಆರತಿ ಲೀಲಾವತಿಯ ನಡುವೆ ಜುಗಳಬಂಧಿ.. ಒಂದು ಅತ್ಯುತ್ತಮ ದೃಶ್ಯ ಸಂಯೋಜನೆ. 
  • ಆರತಿ ತಮ್ಮಿಬ್ಬರ ನಡುವೆ ಅಡ್ಡ ಬರುತ್ತಿದ್ದಾರೆ ಎನ್ನುವ ತಪ್ಪು ಕಲ್ಪನೆಯಿಂದ ತನ್ನ ಹೆಂಡತಿಯ ಜೊತೆಯಲ್ಲಿ ಹಳ್ಳಿಗೆ ಬರುವ ನಾಯಕ, ತನ್ನ ಹೆಂಡತಿಯ ಮೇಲೆ ಮಮತೆ, ಪ್ರೀತಿ ತೋರಿಸುವ ದೃಶ್ಯವನ್ನು ಕ್ಯಾಮೆರಾದ ಚಲನೆಯ ಮೂಲಕ ತೋರಿರುವುದು ಇಷ್ಟವಾಗುತ್ತದೆ.. ದೂರ ದೂರ ಸಾಗುವ ಕ್ಯಾಮೆರ... ನಿಧಾನವಾಗಿ ಅವರಿಬ್ಬರ ಹತ್ತಿರಕ್ಕೆ ಬರುತ್ತದೆ. ಕೆಲ ಕಾರಣಗಳಿಂದ ಪ್ರೀತಿಯನ್ನು ವ್ಯಕ್ತ ಪಡಿಸಲಾಗದ ಸನ್ನಿವೇಶಗಳಿಂದ ನಿಧಾನವಾಗಿ ಹೊರಬಂದು ಗಂಡ ಹೆಂಡತಿಯ ಪ್ರೀತಿ ಬೆಸುಗೆಯಾಗುತ್ತಿದೆ ಎನ್ನುವ ಸಾಂಕೇತಿಕ ದೃಶ್ಯ ಸಂಯೋಜನೆ ಇಷ್ಟವಾಗುತ್ತದೆ.
  • ನಾಯಕ, ಆರತಿ ತನ್ನ ಮೇಲೆ ಸೇಡು ತೀರಿಸಿಕೊಳ್ಳಲು ತನ್ನ ಹೆಂಡತಿಯ ಜೊತೆಯಲ್ಲಿ ಸ್ನೇಹ ಬೆಳೆಸುತ್ತಿದ್ದಾಳೆ ಎನ್ನುವ ತಪ್ಪು ಕಲ್ಪನೆಯಿಂದ.. ಅವಳ ಮೇಲೆ ಹೆರುವ ಆರೋಪಗಳಿಗೆಲ್ಲಾ ಆರತಿ ಕೊಡುವುದು ಒಂದೇ ಉತ್ತರ "ನಂದು ತಪ್ಪೇ ಗೋಪಿ". ಕೆಲವೊಮ್ಮೆಎಲ್ಲಾ ಸಮಸ್ಯೆಗಳಿಗೂ ಒಂದೇ ಪರಿಹಾರ ಇರುತ್ತದೆ.. ಅಥವಾ ಎಲ್ಲಾ ಪರಿಹಾರಗಳಿಗೂ ಅನೇಕ ಸಮಸ್ಯೆಗಳ ಸಂಗಮ ಇರುತ್ತದೆ ಎನ್ನುವಂಥಹ ಉತ್ತಮ ಸಂಭಾಷಣೆ ಈ ದೃಶ್ಯದಲ್ಲಿದೆ. 
  • ನಿಜ ಸ್ಥಿತಿ ಅರಿವಾದಾಗ ಎಲಿಸಾ ಆರತಿಯ ಹತ್ತಿರ ಬಂದು "ತಂದ ಬೇರೊಂದು ಹೆಣ್ಣಾ, ಮದುವೆನಾ ನೋಡಿ ರಂಗಿ ಮನದಾಗೆ ದುಖಃ ನುಂಗಿ" ಎನ್ನುತ್ತಾ ಕಣ್ಣೀರಾಗಿ.. "ಆಮ್ ಸರಿ" ಎಂದು ಓಡಿ ಹೋಗುತ್ತಾಳೆ.. ಸೂಪರ್ ದೃಶ್ಯ ಕಲ್ಪನೆ.,.. ಆದ್ರೆ ರೀತಿಯಲ್ಲಿ ಎಲಿಸಾ ಹೊರತು ನಿಂತಾಗ ಆರತಿ "ಹಸ್ಬೆಂಡ್, ಮಾವ, ಅತ್ತೆ ಶಾರದ ಎವ್ರಿ ಒನ್ ಮೇಕ್ ಮಿ ಸ್ಮೈಲ್" ಎಂದು ಹೇಳುತ್ತಾ ಕಣ್ಣೀರಾಗುತ್ತಾರೆ.. ದೊಡ್ಡ ದೊಡ್ಡ ಭಾಷಣದ ಮಾತುಗಳು ಬರಬಹುದಾದ ದೃಶ್ಯವನ್ನು ಚುಟುಕು ಮಾತುಗಳಿಂದ ಅಲಂಕರಿಸಿ ಭಾವನಾತ್ಮಕ ದೃಶ್ಯವನ್ನಾಗಿಮಾಡಿದ್ದಾರೆ . ಹಾಟ್ಸ್ ಆಫ್ ಟು ಪುಟ್ಟಣ್ಣ ಮತ್ತು ಸಂಭಾಷಣಕಾರ ಎಚ್ ವಿ ಸುಬ್ಬರಾವ್. 

ಪ್ರಾಯಶಃ ಮೊತ್ತ ಮೊದಲ ಬಾರಿಗೆ ಆರತಿಯವರ ಚಿತ್ರದಲ್ಲಿ ಇನ್ನೊಂದು ಹೆಣ್ಣು ಪಾತ್ರ ಅವರನ್ನು ಹಿಂದಕ್ಕೆ ಹಾಕಿರುವುದು. ಮಾರ್ಗರೆಟ್ ಥಾಮ್ಸನ್ ಎನ್ನುವ ಅಮೇರಿಕಾದ ಕಲಾವಿದೆ ಇಡಿ ಚಿತ್ರವನ್ನು ಆವರಿಸಿಬಿಟ್ಟಿದ್ದಾರೆ.  ಕನ್ನಡದಲ್ಲಿಯೇ ನಿಧಾನವಾಗಿ ಮಾತಾಡುತ್ತಾ, ಭಾವಾಭಿನಯ, ಕಣ್ಣಿನಲ್ಲಿಯೇ ಭಾವವನ್ನು ಹೊರಗೆಡುಹುವುದು ಇಷ್ಟವಾಗುತ್ತದೆ. ರಂಗೇನ ಹಳ್ಳಿಯಾಗೆ ಹಾಡಿನಲ್ಲಿ ಪಕ್ಕ ಹಳ್ಳಿ ಕುಣಿತ ಕುಣಿವ ಇವರು, ಹ್ಯಾಪಿಯೇಸ್ಟ್ ಮೊಮೆಂಟ್ ಹಾಡಿನಲ್ಲಿ ಪಾಶ್ಚಾತ್ಯ ಮತ್ತು ನಮ್ಮ ದೇಶದ ಎರಡು ತರಹದ ನೃತ್ಯ ಮಾಡುತ್ತಾ ಹಾಡಿರುವುದು ಸೂಪರ್ ಎನ್ನಿಸುತ್ತದೆ. ಜೊತೆಯಲ್ಲಿಯೇ ಮುಖ ಭಾವ ಬೇಕಾದ ದೃಶ್ಯಗಳಲ್ಲಿ ಮಾತ್ರ ಅವರ ಮುಖವನ್ನು ಹತ್ತಿರದಿಂದ ತೋರಿಸಿ, ತುಟಿ ಚಾಲನೆಗೆ ಸರಿಯಾದ ಸಂಭಾಷಣೆಗಳನ್ನು ಕೊಟ್ಟು.. ಉದ್ದುದ್ದ ಮಾತುಗಳಿಗೆ ದೂರದಿಂದ ದೃಶ್ಯವನ್ನು ಚಿತ್ರಿಕರಿಸಿರುವುದು ಜಾಣ್ಮೆಯ ನಡೆಯಾಗಿದೆ. ಮಾತುಗಳಿಗೆ.. ಹಾಡುಗಳಿಗೆ  ಸರಿಯಾದ ತುಟಿ ಚಾಲನೆ ನೀಡಿರುವ ಈ ಕಲಾವಿದೆಗೆ ಸಹಸ್ರ ಅಭಿನಂದನೆಗಳು. "ಅತ್ತೆ ನಿಮಗೆ ಬಾಯ್ ಬೇಬಿ ಬೇಕೋ ಗರ್ಲ್ ಬೇಬಿ ಬೇಕೋ... ನಾ ಬೇಬಿ ಕೊಟ್ಟರೆ ನನ್ನ ಮೇಲಿನ ಕೋಪ ಒಂಟೋಯ್ತದೆ ಅಲ್ಲವಾ ಅತ್ತೆ" ಅತ್ತ್ಯುತ್ತಮ ದೃಶ್ಯ ಮತ್ತು ಸಂಭಾಷಣೆ. 

ಆರತಿ ಈ ಕಲಾವಿದೆಯ ಬಗ್ಗೆ ಏನು ಹೇಳಲಿ.. ಇವರು ನೀರಿನ ತರಹ ಯಾವ ಪಾತ್ರ ಕೊಟ್ಟರೂ ಅದಕ್ಕೆ ಪ್ರವೇಶ ಮಾಡಿಯೇ ಬಿಡುತ್ತಾರೆ.. ಇಡಿ ಚಿತ್ರದಲ್ಲಿ ತಮ್ಮ ಹತಾಶೆ, ಪ್ರೀತಿ, ಪ್ರೇಮ, ನೋವು, ನಲಿವು, ಸಂತಸ ಎಲ್ಲವನ್ನು ಅದುಮಿಟ್ಟುಕೊಂಡು ಹದವಾಗಿ ಕೊಡುವ ಅಭಿನಯ ಇಷ್ಟವಾಗುತ್ತದೆ. ಅತ್ತೆ ಮಾವನ ಮನೆಯಲ್ಲದ್ದಿದ್ದರೂ ಅವರನ್ನು ಅತ್ತೆ ಮಾವ ಎಂದು ಕರೆಯುತ್ತಾ ಅಕ್ಷರಶಃ ಆ ಮನೆಯಲ್ಲಿಯೇ ಕಳೆಯುವ, ಹಾಗೆಯೇ ತನ್ನ ಅಪ್ಪ ಅಮ್ಮನ ಗೊಂದಲಗಳು, ನೋವುಗಳು ಇವಕ್ಕೆ ತಕ್ಕ ಉತ್ತರ ಕೊಡುತ್ತಾ ಎರಡನ್ನು ಸಂಭಾಳಿಸುವಂಥಹ ಅಭಿನಯ ನೀಡಿ ಗೆದ್ದಿದ್ದಾರೆ. ಎಲಿಸಾಳನ್ನು ತನ್ನ ಅತ್ತೆ ಮಾವನ ಮನದಲ್ಲಿ ಭದ್ರವಾಗಿ ಕೂರಿಸುವ ಅವರ ಪ್ರಯತ್ನ ಮತ್ತು ಅದರಲ್ಲಿ ಯಶಸ್ವೀ ಆಗುವ ಅಭಿನಯ ಗಮನ ಸೆಳೆಯುತ್ತದೆ. ಪ್ರೀತಿ ತ್ಯಾಗ ಮಮತೆ ಎಲ್ಲವನ್ನು ಹದವಾದ ಪಾಕದಲ್ಲಿ ಬೆರೆಸಿ ಅಭಿನಯದ ಮೂಲಕ ನಮಗೆ ಹಂಚಿದ್ದಾರೆ. ಆರತಿ ನಿಮಗೆ ಒಂದು ಸಲಾಂ. 

ಬೇಡದ ಸೊಸೆಯನ್ನು ನೋಡಿಕೊಳ್ಳುವ ಬೇಡ ಕೆಲಸವನ್ನು ಸಿಟ್ಟು ಸೆಡವುಗಳಲ್ಲಿ ತೋರಿಸುವ ಲೀಲಾವತಿ, ತನ್ನ ಆಂಗ್ಲ ಸೊಸೆ ತುಳಸಿ ಕಟ್ಟೆಯನ್ನು ಸುತ್ತುವುದನ್ನು ಕಂಡು ಅಭಿಮಾನ ಉಕ್ಕಿದರೂ, ಅತ್ತೆ ಎನ್ನುವ ಅಹಂ ಅಡ್ಡಿ ಬರುವ ಅಭಿನಯ, ತನ್ನ ಸೊಸೆ ಗರ್ಭಿಣಿ ಎಂದು ಗೊತ್ತಾದಾಗ ತಡೆದು ತಡೆದು ಬಂದು ಪ್ರೀತಿ ವ್ಯಕ್ತ ಪಡಿಸುವ ರೀತಿ.. ಸೂಪರ್.. ಲೀಲಾವತಿ ಇಲ್ಲಿ ಎಂದಿನಂತೆ ಕಲಾವತಿಯಾಗಿ ಬಿಟ್ಟಿದ್ದಾರೆ. 

ಮೃದು ಮಾತು, ಮೃದು ಅಭಿನಯ, ಸರಳ ವ್ಯಕ್ತಿತ್ವ ಇದರ ಸಮಾಗಮ ಸೀತಾರಾಮ್. ಸೊಸೆಯನ್ನು ಕರೆದು ತರುವ ಇವರು ಅವಳ ಗುಣಕ್ಕೆ ಮಾರು ಹೋಗಿ ತನ್ನ ಸ್ನೇಹಿತನಿಗೆ ಕೊಟ್ಟ ಮಾತನ್ನು ಮುರಿಯುತ್ತಾರೆ. ಆದರೆ ಅದಕ್ಕೆ ಅವರು ಕೊಡುವ ಕಾರಣ "ದುಡ್ಡು ಕೊಟ್ಟು ಅವಳ ಕಾಲಿಗೆ ಬಿದ್ದು ನನ್ನ ಮಗನ ಜೀವನದಿಂದ ಹೊರಗೆ ಕಲಿಸಬೇಕು ಎಂದು ಹೋದೆ.. ಅವಳ ಗುಣ ನಡತೆಯನ್ನು ನೋಡಿ.. ನಮ್ಮ ದೇಶದ ಸಂಸ್ಕೃತಿ ಗುಣವನ್ನು ಆದರಿಸುತ್ತದೆಯೇ ಹೊರತು ಹಣವನ್ನಲ್ಲ ಎನ್ನುವಂಥಹ ತರ್ಕ ಬದ್ಧ ಮಾತುಗಳನ್ನು ಆಡುವಾಗ ಅವರ ತೊಳಲಾಟ ಇಷ್ಟವಾಗುತ್ತದೆ. 

ವ್ಯಂಗ್ಯ, ಕುಹಕ, ಚುಚ್ಚುವ ಮಾತುಗಳು, ಜೊತೆಯಲ್ಲಿಯೇ ಸ್ನೇಹಿತನ ಮೇಲಿನ ಅಭಿಮಾನ ಇವುಗಳ ಮಿಲನ ಲೋಕನಾಥ್ ಅವರ ಅಭಿನಯ. ಮಗಳ ಮೇಲಿನ ವ್ಯಾಮೋಹ, ಅವಳ ಬಾಳಿಗೆ ಫ್ರೇಮ್ ಹಾಕಿಕೊಡಬೇಕು ಎನ್ನುವ ತವಕ ಎಲ್ಲ ದೃಶ್ಯಗಳಲ್ಲಿ ಇಷ್ಟವಾಗುತ್ತಾರೆ. ಅವರಿಗೆ ಸರಿಸಾಟಿಯಾಗಿ ಉಮ ಶಿವಕುಮಾರ್ ಅಭಿನಯ. 

ಇವರ ಜೊತೆಯಲ್ಲಿ ಬರುವ ದಿನೇಶ್ ಪುಟ್ಟ ಪಾತ್ರದಲ್ಲಿ ಮಿನುಗಿ ಹೋಗುತ್ತಾರೆ, ಅಂಬರೀಶ್ ಹಾಡಿನಲ್ಲಿ ಬರುತ್ತಾರೆ. ಆದರೆ ಉದಯಕುಮಾರ್ ಶಾಸ್ತ್ರಿಗಳ ಪಾತ್ರದಲ್ಲಿ ಕಾಡುತ್ತಾರೆ..

ಪುಟ್ಟಣ್ಣ ಕಣಗಾಲ್ ಅವರಿಗೆ ಒಂದು ಅದ್ಭುತ ಶಕ್ತಿ ಇತ್ತು, ಪಾತ್ರಕ್ಕೆ ತಕ್ಕ ಕಲಾವಿದರು. ಆ ಪಾತ್ರದ ಅಭಿನಯ ನೋಡಿದ ಮೇಲೆ ಅರೆ ಇವರು ಈ ಪಾತ್ರ ಮಾಡಲೆಂದೇ ಜನಿಸಿದ್ದಾರೆನೋ ಅನ್ನಿಸುವಷ್ಟು ಸಹಜವಾಗಿರುತ್ತೆ. ಜೊತೆಯಲ್ಲಿಯೇ ಒಂದು ಗೆರೆಯನ್ನು ಉದ್ದ ಮಾಡಬೇಕೆಂದು ಅಂದುಕೊಂಡಾಗ ಆ ಗೆರೆಯನ್ನು ಅಳಿಸದೆ ಪಕ್ಕದಲ್ಲಿಯೇ ಇನ್ನೊಂದು ಚಿಕ್ಕ ಗೆರೆಯನ್ನು ಎಳೆಯುವ ಅತ್ಯುತ್ತಮ ಜಾಣ್ಮೆ ಅವರಲ್ಲಿ ಇತ್ತು.  ಇಲ್ಲಿ ನಾಯಕನ ಪಾತ್ರ ಮುಖ್ಯ ಆದರೆ ಅದು ಕಥೆಗೆ ತಿರುವು ಕೊಡುವಲ್ಲಿ ಮಾತ್ರ.. ಅದಕ್ಕೆಂದೇ ಹೊಸ ಪರಿಚಯವಾದ ಅನಿಲ್ ಕುಮಾರ್ ಎನ್ನುವ ನಟನನ್ನು ಹುಡುಕಿ ತಂದರು. ಕಥೆಗೆ ಬೇಕಾದಂಥಹ ಅಭಿನಯ ಕೊಟ್ಟಿದ್ದಾರೆ.. ಆದರೆ ಅವರ ಮುಂದೆ ಉದ್ದವಾಗಿ ನಿಲ್ಲುವುದು ಬಿಳಿ ಹೆಂಡ್ತಿ ಪಾತ್ರಧಾರಿ.  ಇದು ನಿರ್ದೇಶಕನ ಚಾತುರ್ಯ. 

ಚಿತ್ರದ ಬಹುತೇಕ ಭಾಗ ಸ್ಟುಡಿಯೋ ಒಳಗೆ ನಡೆದರೂ ಪುಟ್ಟಣ್ಣ ಅವರ ಸುಂದರ ತಾಣಗಳ ಹುಡುಕಾಟ ಮೇಲುಕೋಟೆ, ತೊಣ್ಣುರ್ ಕೆರೆ, ದೊಡ್ಡ ಆಳದ ಮರ ಇವುಗಳ ಸುತ್ತಮುತ್ತಲಿನ ವಿಹಂಗಮ ದೃಶ್ಯಗಳನ್ನು ಕಣ್ಣ ಮುಂದೆ ಬಿಡಿಸಿದ್ದಾರೆ.  

ಮನದ ಕಡಲಲ್ಲಿ ಬರುವ ಅಸಮಾಧಾನದ ತರಂಗಗಳನ್ನು ಜೋಪಾನವಾಗಿ ತಡೆದು ಅದನ್ನು ಸರಿಯಾಗಿ ಬಳಕೆ ಮಾಡಿ ಅದನ್ನು ಏರಿ ಸಾಗಿ ನಮ್ಮ ಸಮಾಧಾನ ಎನ್ನುವ ಗುರಿಯನ್ನು, ಸಂಬಂಧ ಎನ್ನುವ ಗುಡಿಯನ್ನು ಮುಟ್ಟಲೇಬೇಕು ಎನ್ನುವ ಸುಂದರ ಸಂದೇಶವನ್ನು ಹೊತ್ತು ತಂದ  ಬಿಳಿ ಹೆಂಡ್ತಿ ಚಿತ್ರ ಪುಟ್ಟಣ್ಣ ಕಣಗಾಲ್ ಅವರ ಬತ್ತಳಿಕೆಯಿಂದ ಹೊರ ಬಂದ ಇನ್ನೊಂದು ಚಿತ್ರ ರತ್ನ. 

ಗುರುಗಳೇ ಸಲಾಂ ನಿಮಗೆ!!!

Friday, December 12, 2014

ವಾಣಿಯ ಝೇಂಕಾರ.. "ತಣ್ಣನೆ"ಯ ಧ್ವನಿ ಅದೇ ಅದೇ ಉಪಾಸನೆ (1974)

ನನಗೆ ಮೊದಲಿಂದಲೂ ಕೆಲವು (ಅಲ್ಲ ಅಲ್ಲ ಅಲ್ಲ ಹಲವು ಎಂದರೆ ಸರಿ) ವಿಷಯಗಳ ಬಗ್ಗೆ ಹುಚ್ಚು.. ಕೆಲವು ಧ್ವನಿಗಳು, ಸ್ಥಳಗಳು, ಚಿತ್ರಗಳು, ಹಾಡುಗಳು ಹೀಗೆ.. ಯಾಕೆ ಇಷ್ಟ ಎಂದರೆ ಹೇಳೋಕೆ ಆಗೋಲ್ಲ.. ಆದರೆ ಅದರ ಬಗ್ಗೆ ಒಂದು ರೀತಿಯ ಹುಚ್ಚು ಮನಸಲ್ಲೇ ಆಲದ ಮರವಾಗಿ ಬೇರೂರಿಬಿಡುತ್ತವೆ..

ನನ್ನ ಬಾಲ್ಯದ ದಿನಗಳಲ್ಲಿ ಎಂಭತ್ತರ ದಶಕದ ಆರಂಭದಲ್ಲಿ ದೂರದರ್ಶನದಲ್ಲಿ ಪ್ರಸಾರವಾಗಿದ್ದ "ಉಪಾಸನೆ" ಚಿತ್ರ ನೋಡಿ ಬೆಕ್ಕಸ ಬೆರಗಾಗಿದ್ದೆ. ಯಾಕೋ ಅರಿಯದೆ ನಾ ಪುಟ್ಟಣ್ಣ ಅವರ ಚಿತ್ರಗಳ ಹುಚ್ಚನ್ನು ಆಗಲೇ ಹತ್ತಿಸಿಕೊಂಡಿದ್ದೆ. 

ಹಾಗೆಯೇ.. ಈ ಚಿತ್ರದಲ್ಲಿ ಬರುವ ಕನ್ಯಾಕುಮಾರಿ ಸ್ಥಳದ  ಬಗ್ಗೆಯೂ ಕೂಡ.. ಆ ಜಾಗ ನೋಡಲೇ ಬೇಕು.. ಮತ್ತೆ ಹೋದಾಗ ಅಲ್ಲಿ ನನ್ನ ಮಡದಿ ಮತ್ತು ಮಗು ಇರಲೇ ಬೇಕು ಎನ್ನುವ ಹಠ ನನಗೆ ಸುಮಾರು ಹತ್ತು ವರ್ಷದ ಹುಡುಗನಾಗಿದ್ದಾಗಲೇ ಬಂದಿತ್ತು. (ಉತ್ಪ್ರೇಕ್ಷೆ ಖಂಡಿತ ಅಲ್ಲಾ.. ನನ್ನ ಆಸೆಗಳು....  ಹುಚ್ಚುಗಳು ಹೀಗೆಯೇ ಇರುತ್ತವೆ). 

ಈ ಚಿತ್ರ ಹಲವಾರು ಕಾರಣಗಳಿಗೆ ಮನಸ್ಸಿಗೆ ನುಗ್ಗುತ್ತದೆ. 


ಉಪಾಸನೆ ಸೀತಾರಾಮ್ ಎಂದೇ ಹೆಸರಾದ ಸೀತಾರಾಮ್ ಅವರ ಮೃದು ಮಾತು ಚಿತ್ರದ್ದುದ್ದಕ್ಕು ಕಾಡುತ್ತದೆ. ತಾಯಿ, ಮಗು, ಶಾರದೆ ಎನ್ನುವಾಗ ಅವರ ಧ್ವನಿಯಲ್ಲಿ ಬರುವ ಕಂಪನ, ಮಧುರ ಮಿಡಿತ, ತುಡಿತ ಬಹಳ ಕಾಡುತ್ತದೆ. ಅತ್ಯಮೋಘ ಅಭಿನಯ ನೀಡಿರುವ ಅವರು ಚಿತ್ರದ ಯಶಸ್ಸಿನ ಬಹು ಪಾಲನ್ನು ಆಕ್ರಮಿಸಿಕೊಳ್ಳುತ್ತಾರೆ. ಶರೀರ ಶಾರೀರ ಎರಡರ ಅಭಿನಯ ಸೊಗಸಾಗಿದೆ. ಅವರ ಮತ್ತು ಆರತಿಯ ಜುಗಲಬಂದಿ ಬಹುವಾಗಿ ಇಷ್ಟಪಡುವ ಹಾಗೆ ಅಭಿನಯಿಸಿದ್ದಾರೆ.
"ವಾಣಿ"ಜಯರಾಂ ಅವರ ತುಂಟ ಧ್ವನಿ ಇನ್ನೊಂದು ರೀತಿಯಲ್ಲಿ ಕಾಡುತ್ತದೆ. "ಭಾವವೆಂಬ ಹೂವು ಅರಳಿ" ಈ ಹಾಡಿನಲ್ಲಿ ಅವರು "ಅರಳಿ" ಎನ್ನುವಾಗ ಅವರ ಧ್ವನಿ ಕೇಳಲೇ ಒಂದು ಹಿತ. ಚಿ ಉದಯಶಂಕರ್ ಅವರ ಸರಳ ಸಾಹಿತ್ಯಕ್ಕೆ ಚಂದದ ಮೆರುಗು ವಾಣಿಯಮ್ಮ ಅವರ ಗಾಯನ.   "ಭಾವಯ್ಯ ಭಾವಯ್ಯ"   ಎನ್ನುವ ಎರಡು ಬಗೆಯ ಭಿನ್ನ ಹಾಡುಗಳಲ್ಲಿ ಬರುವ ತುಂಟತನದ ಧ್ವನಿ, ಆ ತಮಾಷೆ ಬೀರುವ ಪದಗಳ ಜೋಡಣೆ, ಅದಕ್ಕೆ ಜೀವ ತುಂಬಿರುವ ಇವರ ಗಾಯನ ಸೊಗಸಾಗಿದೆ. ಎರಡು ಹಾಡನ್ನು ರಚಿಸಿರುವ ಆರ್ ಏನ್ ಜಯಗೋಪಾಲ್ ಅವರ ಸಾಹಿತ್ಯ ಮನಸ್ಸೆಳೆಯುವುದು ಹಾಸ್ಯ ಮಿಶ್ರಿತ ಪದಗಳ ಪುಂಜಗಳಿಂದ. 

ನೀವು ಹಾಡುತ್ತಾ ಇರಿ ನಾ ಬರುತ್ತೇನೆ ಎಂದು ಕಾದು ಹೇಳಿ..  ನಂತರ ಬಂದು..  ಮೂರು ಹಾಡುಗಳಲ್ಲಿ ಇಡಿ ಚಿತ್ರವನ್ನೇ ನುಂಗಿ ಬಿಡುವ ಅತ್ಯುತ್ತಮ ಗಾಯಕಿ ಜಾನಕಿಯಮ್ಮ ಮನಸ್ಸನ್ನೇ ಕದ್ದು ಬಿಡುತ್ತಾರೆ. "ಆಚಾರವಿಲ್ಲದ ನಾಲಿಗೆ" ಪುರಂದರದಾಸರ ಸಾಹಿತ್ಯವನ್ನು ಅಚ್ಚುಕಟ್ಟಾಗಿ ಹಾಡುವ ಇವರು.. ಭಾರತದ ತುತ್ತ ತುದಿ ಕನ್ಯಾಕುಮಾರಿಯ ಬಗ್ಗೆ ವಿಜಯನಾರಸಿಂಹ ಅವರ "ಭಾರತ ಭೂಶಿರ ಮಂದಿರ ಸುಂದರಿ" ಸುಮಧುರ ಸಾಹಿತ್ಯವನ್ನು ಹಾಡುವಾಗ ಸಾಕ್ಷಾತ್ ಶಾರದೆಯೇ ಆಗಿ ಬಿಟ್ಟಿದ್ದಾರೆ. ಎರಡು ಹಾಡನ್ನು ಉಚ್ಹ ಸ್ಥಾಯಿಯಲ್ಲಿ ಹಾಡಿರುವ ಜಾನಕಿಯಮ್ಮ ಅಬ್ಬಬ್ಬ ಎನ್ನಿಸಿಬಿಡುತ್ತಾರೆ.  ಅಮೋಘ ಗಾಯನದ ಪ್ರತಿಭೆ ಜಾನಕಿಯಮ್ಮ ಅವರ ಧ್ವನಿಯಲ್ಲಿ ಜೋಗದ ಜಲಪಾತದ ರಭಸ, ಲಾಲಿತ್ಯ, ಮಧುರತೆ ಎಲ್ಲವೂ ಬಂದಿಯಾಗಿಬಿಟ್ಟಿವೆ. 

ಸುಗಮ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಬಿ ಕೆ ಸುಮಿತ್ರ ಅವರ "ಸಂಪಿಗೆ ಮರದ ಹಸಿರೆಲೆ ನಡುವೆ" ಗೀತೆ ಸರಳ ಸಾಹಿತ್ಯದಿಂದ ಗಮನ ಸೆಳೆಯುತ್ತದೆ. ಜೊತೆಯಲ್ಲಿ ಆರ್ ಏನ್ ಜಯಗೋಪಾಲ್ ಅವರು ಚಿಕ್ಕ ಚಿಕ್ಕ ಮಕ್ಕಳು ಉಲಿಯುವ ಪದಗಳನ್ನು ತಂದು ಜೋಡಿಸಿ ಹೆಣೆದಿರುವ ಈ ಹಾಡು ಇಷ್ಟವಾಗುತ್ತದೆ. 

ಆರತಿ ಗಂಧದ ಕೊರಡಿನ ಹಾಗೆ ಅಭಿನಯವನ್ನು ತೇಯ್ದು .. ಈ ಚಿತ್ರ ಗೆದ್ದರೆ ನಾ ಗೆಲ್ಲುವೆ ಎನ್ನುವಂತೆ ತಮ್ಮ ಅಭಿನಯದ  ಶಕ್ತಿಯನ್ನು ತೇಯ್ದು .. ಈ ಪಾತ್ರಕ್ಕೆ ಅಭಿನಯಿಸಲೆಂದೇ ನಾ ಹುಟ್ಟಿದ್ದೇನೆ ಎನ್ನುವಂತೆ ಛಲ ತುಂಬಿಕೊಂಡು ನಟಿಸಿದ್ದಾರೆ ,  ಅಲ್ಲ ಅಲ್ಲ ಆ ಪಾತ್ರವೇ ಆಗಿ ಹೋಗಿದ್ದಾರೆ. ಹಾಡುಗಳಲ್ಲಿ ಅವರು ತೋರುವ ಶ್ರದ್ಧೆ, ಸಂಭಾಷಣೆ ಹೇಳುವಾಗ ಅವರು ತೋರುವ ಚೈತನ್ಯ, ಕೆಲವೊಮ್ಮೆ ಮಾತೆ ಬೇಡ ಎನ್ನಿಸುವ ದೃಶ್ಯಗಳಲ್ಲಿ ಕಣ್ಣಲ್ಲೇ ತೋರುವ ಭಾವ (ತಂಗಿ ಮತ್ತು ಗಂಡನನ್ನು ಕೋಣೆಯ ಒಳಗೆ ಸೇರಿಸಿ.. ಬಾಗಿಲನ್ನು ಹಾಕಿ ಹೊರ ಬರುವ ದೃಶ್ಯದಲ್ಲಿ) ಆಹಾ ಆಹಾ ಹೇಳಿದಷ್ಟು ಸೊಗಸು. ಸಮುದ್ರದ ಅಲೆಗಳನ್ನು ನೋಡುವಾಗ ಒಂದು ಅಲೆ ಹೋದರೆ ಇನ್ನೊಂದು ಬರುವಂತೆ, ಒಂದು ದೃಶ್ಯದಲ್ಲಿ ಅಬ್ಬಾ ಎನ್ನಿಸುತ್ತ ಮುಂದಿನ ದೃಶ್ಯ ನೋಡಿದಾಗ ಅರೆ ಅರೆ ಇದು ಇನ್ನು ಸೊಗಸು ಅನ್ನಿಸುತ್ತದೆ. ಇಡಿ ಚಿತ್ರದಲ್ಲಿ ಸರಿ ಸುಮಾರು ಪ್ರತಿಯೊಂದು ದೃಶ್ಯದಲ್ಲಿ ಕಾಣಿಸಿಕೊಳ್ಳುವ ಆರತಿ ಅಭಿನಯ ಅವರ ಚಿತ್ರ ಜೀವನದಲ್ಲಿನ ಅತ್ಯುತ್ತಮ ಅಭಿನಯ ಎನ್ನುತ್ತೇನೆ.  (ರಂಗನಾಯಕಿ ಚಿತ್ರವಿದೆ!!!!)

ಚಿತ್ರಜ್ಯೋತಿ ಲಾಂಛನದಲ್ಲಿ ರಾಶಿ ಸಹೋದರ ನಿರ್ಮಾಣದಲ್ಲಿ ತಯಾರಾದ ಈ ಚಿತ್ರ ದೇವಕಿ ಮೂರ್ತಿ ಎನ್ನುವವರ ಅದೇ ಹೆಸರಿನ ಕಥೆಯನ್ನು ಆಧರಿಸಿತ್ತು.  ಈ ಕಥೆಗೆ ಸಂಭಾಷಣೆಯ ಪೋಷಾಕು ತೊಡಿಸಿದವರು ನವರತ್ನರಾಂ ಅವರು. ಎಸ್ ವಿ ಶ್ರೀಕಾಂತ್ ಸುಂದರ ಭಾವುಕ ದೃಶ್ಯಗಳನ್ನು ಜೊತೆಯಲ್ಲಿ ಅದ್ಭುತ ಸ್ಥಳ ಕನ್ಯಾಕುಮಾರಿಯನ್ನು ಅಚ್ಚುಕಟ್ಟಾಗಿ ಚಿತ್ರೀಕರಿಸಿದ್ದಾರೆ. ಭಾರತ ಭೂಶಿರ ಹಾಡನ್ನು ಒಳಾಂಗಣದಲ್ಲಿ ಚಿತ್ರೀಕರಿಸಿ ಆರತಿಯವರ ಮುಖವನ್ನು ಹೊಳೆಯುವ ಪಾದರಸದಂತೆ, ಜೊತೆಯಲ್ಲಿ ಕ್ಯಾಮೆರ ಒಂದು ಚೂರು ಕದಲದೆ ಬರಿ ಮುಖವನ್ನು ತೋರಿಸುವ ಅದ್ಭುತ ಛಾಯಾಗ್ರಹಣ ಇವರದು. ಮತ್ತೆ ಭಾವುಕ ಸನ್ನಿವೇಶಗಳಿಗೆ ತಕ್ಕಂತೆ ಕ್ಯಾಮೆರ ಓಡಾಡುವ, ಇಲ್ಲವೇ ಸುತ್ತವ, ಇಲ್ಲವೇ ಜೋಕಾಲಿಯಂತೆ  ತೂಗುವ ವಿಭಿನ್ನ ತಂತ್ರ ಈ ಚಿತ್ರದಲ್ಲಿ ಮಾಡಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ಕ್ರಿಯಾಶೀಲತೆಗೆ ಸಾಕ್ಷಿ. 

ಪುಟ್ಟಣ್ಣ ಅವರ ಜೀವದ ಗೆಳೆಯ ವಿಜಯಭಾಸ್ಕರ್ ಈ ಚಿತ್ರದ ಆತ್ಮ ಎನ್ನಲೇ ಬೇಕು. ಪ್ರತಿ ಹಾಡಿಗೂ ವಿಭಿನ್ನ ಸಂಗೀತ, ಜೊತೆಯಲ್ಲಿ ಚಿತ್ರದುದ್ದಕ್ಕೂ ಬರುವ ಹಿನ್ನೆಲೆ ವೀಣೆಯ ನಾದ ಶ್ಯಾಮಲಾ ಸ್ವಾಮೀ ಅವರದು. ವಿಜಯಭಾಸ್ಕರ ಅವರ ರಾಗ ಸಂಯೋಜನೆ ಅಮೋಘ ಅದ್ಭುತ ಎನ್ನಲೇ ಬೇಕು. ಭಾರತ ಭೂಶಿರ ಎಷ್ಟು ಬಾರಿ ಕೇಳಿದರೂ ಹೊಸದು ಎನ್ನಿಸಲು ಅವರ ಸಂಗೀತವೆ ಕಾರಣ. 

ಹೊಟ್ಟೆಕಿಚ್ಚಿನ ಗುರುವಾಗಿ ಮುಸುರಿ ನಗೆ ಮೀಟುತ್ತಾರೆ. ಅವರು ಬಂದು ಹೋಗುವ  ಐದಾರು ದೃಶ್ಯಗಳಲ್ಲಿ ತಮ್ಮ ಪ್ರತಿಭೆಯನ್ನು ಹೊರತಂದಿದ್ದಾರೆ.
 "ಗೊತ್ರಿ ನನಗೆ ಗೊತ್ರಿ ನೀವು ಹೀಗೆ ಹೇಳ್ತೀರಾ ಅಂತ ನನಗೆ ಗೊತ್ರಿ" 
"ಭಾರತದ ತಮಟೆ ವಾದ್ಯದಿಂದ ಹಿಡಿದು ಪರದೇಶದ ಪಿಯಾನೋ ತನಕ ಬರುತ್ತೆ ಕಣಯ್ಯಾ"
"ತಂಬೂರಿಗೆ ಕಮಾನ್ ಹಾಕೋದು ಇದ್ದೆ ಇದೆ ಕಣಯ್ಯಾ.. ಮೊದಲು ಪಿಟೀಲಿಗೆ ಕಮಾನು ಹಾಕು.. ಆಮೇಲೆ ತಂಬೂರಿಗೆ  ಕಮಾನು ಹಾಕಿ ಕಮಾಲ್ ನೋಡೋಣ"
ಹೀಗೆ ಚಿಕ್ಕ ಚಿಕ್ಕ ಮಾತುಗಳು ಅಂಗೀಕ ಅಭಿನಯದಿಂದ ಮನಸ್ಸು ಗೆಲ್ಲುತ್ತಾರೆ ಮುಸುರಿ ಕೃಷ್ಣಮೂರ್ತಿ. 

ಸದಾ ಒಲಾಡುತ್ತಲೇ, ಹಿಪ್ಪಿ ಕೂದಲು ಬಿಟ್ಟು ವಿಚಿತ್ರ ಅಭಿನಯ ಕೊಡುವ ಶಿವಾರಂ, ನಗೆ ಮೀಟುತ್ತಾರೆ.  ಪುಟ್ಟಣ್ಣ ಅವರ ಹಲವಾರು ಚಿತ್ರದಲ್ಲಿ  ಪಾತ್ರ ಮಾಡಿರುವ ಶಿವರಾಂ, ಪ್ರತಿ ಚಿತ್ರದಲ್ಲೂ ಏನಾದರೂ ಹೊಸ ತರಹ ಅಂಗೀಕ ಅಭಿನಯ, ಒಂದು ಪಂಚಿಂಗ್ ಸಂಭಾಷಣೆ ತರುತ್ತಾರೆ. ಅವರ ಹಾಸ್ಯಭರಿತ ಸಂಭಾಷಣೆ ಕೇಳುವುದೇ ಒಂದು ಮಜಾ.  ಇದರ ಒಂದು ಒಂದು ಝಲಕ್ "ಸಂಗೀತದಲ್ಲಿರುವ ಉತ್ತರಾದಿ, ದಕ್ಷಿಣಾದಿ, ಪೂರ್ವಾದಿ, ಪಶ್ಚಿಮಾದಿ, ಪಾಶ್ಚಾತ್ಯಾದಿ ಸಂಗೀತ ಪ್ರಕಾರಗಳನ್ನು ಕಲಸಿ, ಬೆರೆಸಿ, ಪ್ರೇಕ್ಷಕರನ್ನು ನಲಿಸಿ, ಕುಣಿಸಿ, ತಣಿಸಿ,ಬೆದರಿಸಿ ಸ್ಟನ್ ಮಾಡಬೇಕೆಂಬುದೇ ಈ ಶಂಕರಾಭರಣನ ಲೈಫ್ ಆಂಬಿಶನ್ "

ಸಂಗೀತದ ಎಲ್ಲಾ ಸಿದ್ಧ ಸೂತ್ರಗಳು ಗೊತ್ತು ಎಂದು ಜಂಬ ಕೊಚ್ಚುತ್ತಾ ಪೇಚಿಗೆ ಸಿಕ್ಕಿ ಹಾಕಿಕೊಳ್ಳುವ ಅಶ್ವಥ್ ಅವರ ಅಭಿನಯ ಚಿತ್ರದ ಹೈ ಲೈಟ್.  ತುಂಬಾ ಗಂಭೀರ ಪಾತ್ರ ಮಾಡುವ ಅಶ್ವಥ್ ಹಾಸ್ಯ ಪಾತ್ರಗಳಲ್ಲೂ ನಾ ಗೆಲ್ಲಬಲ್ಲೆ ಎಂದು ತೋರುತ್ತಾರೆ. ನಾಗರಹಾವಿನ ಚಾಮಯ್ಯ ಮೇಷ್ಟ್ರು, ಶುಭಮಂಗಳದ ಉಬ್ಬಸದ ವೈದ್ಯರು, ಇಲ್ಲಿ ತಮಾಷೆ ಬೀರುವ ಸಂಗೀತದ ಆರಾಧಕ.... ಆಶಾ ಎಷ್ಟು ವಿಭಿನ್ನ ಅಭಿನಯದ ನಟರು ಇವರು.  ಪ್ರತಿಯೊಂದು ಸಂಭಾಷಣೆಯಲ್ಲೂ "ಬೇಕಾದ್ರೆ ನನ್ನ ಹೆಂಡತೀನ ಕೇಳಿ" ಮಾತು ಇಷ್ಟವಾಗುತ್ತದೆ. ಅಂತಿಮ ದೃಶ್ಯಗಳಲ್ಲಿ ತೊಳಲಾಡುವ ಅವರ ಅಭಿನಯ ನಿಜಕ್ಕೂ ಇಷ್ಟವಾಗುತ್ತದೆ. 

ಆದವಾನಿ ಲಕ್ಷ್ಮೀದೇವಿ, ಲೀಲಾವತಿ ತಮ್ಮ ಪಾತ್ರಗಳಲ್ಲಿ ಲೀನವಾಗಿದ್ದಾರೆ.. ಆದವಾನಿ ಲಕ್ಷ್ಮೀದೇವಿ ತಾಯಿ ಮಮತೆ ತೋರುವ ಕರುಣಾಮಯಿ ಆದರೆ, ಲೀಲಾವತಿ ಕೆಲವೊಮ್ಮೆ ಅಮ್ಮನ ಕರುಣಾಳು ಪಾತ್ರ, ಹಲವೆಡೆ ಅತ್ತೆ ಎನ್ನುವ ಗತ್ತು ಎರಡನ್ನು ಮಿಶ್ರಣಗೊಳಿಸಿರುವ ಅಭಿನಯ ತಾಕುತ್ತದೆ. 

ವೆಂಕಟರಾವ್ ತಲಗೇರಿ ಅಪ್ಪನ ಪಾತ್ರದಲ್ಲಿ ಛಾಪು ಒತ್ತುತ್ತಾರೆ, ಉದ್ವೇಗವಿಲ್ಲದ ನಿಧಾನ ರೀತಿಯ ಸಂಭಾಷಣೆ,ಆ ಧ್ವನಿ, ಅಪ್ಪ ಎನ್ನುವ ಜವಾಬ್ಧಾರಿಯ ಗುಣ ಮೈ ಎತ್ತಿದಂತೆ ಅಭಿನಯ ನೀಡಿದ್ದಾರೆ. ಅದರಲ್ಲೂ ಕಡೆಯಲ್ಲಿ ಸಂಗೀತದ ಗುರುಗಳಿಗೆ ಅವರ ಶಿಷ್ಯೆ ಕಚೇರಿ ಮಾಡಬಾರದೆಂದು ಹೇಳಿ ಎಂದು ಕೇಳಿಕೊಳ್ಳುವ ದೃಶ್ಯ ಸೂಪರ್. 

ಚಿಕ್ಕ ಚೊಕ್ಕ ಪಾತ್ರದಲ್ಲಿ ಎಂ ಏನ್ ಲಕ್ಷ್ಮೀದೇವಿ ಮತ್ತು ವಜ್ರಮುನಿ ಗಮನಸೆಳೆಯುತ್ತಾರೆ. 

ಇಡಿ ಚಿತ್ರ ಸಂಗೀತದ ರಥದ ಮೇಲೆ ಸಾಗುತ್ತದೆ. ವಿಜಯಭಾಸ್ಕರ್ ಅವರು ತಮ್ಮ ಛಾಯೆಯನ್ನು ಈ ಚಿತ್ರದಲ್ಲಿ ಒತ್ತಿಬಿಟ್ಟಿದ್ದಾರೆ. ಅವರ  ಸಂಗೀತವನ್ನು ಹೊರಗೆ ತೆಗೆದು ಈ ಚಿತ್ರವನ್ನು ನೋಡಿದರೆ ಬಹಳ ಸಪ್ಪೆ ಎನ್ನಿಸುತ್ತದೆ. ಆದರೆ ಸಂಗೀತ ಕಲಾವಿದರ ಅಭಿನಯವನ್ನು ನುಂಗದೆ, ಅವರ ಅಭಿನಯಕ್ಕೆ ಹೊಳಪು ಕೊಡುವ ರತ್ನವಾಗಿರುವುದು ವಿಶೇಷ. 

ಈ ಚಿತ್ರದಲ್ಲಿ ಸಂಗೀತವನ್ನು ಪ್ರಧಾನವಾಗಿ ಇಟ್ಟುಕೊಂಡು ರೂಪಿಸಿರುವ ಚಿತ್ರ. ಆರತಿಯೇ ಈ ಚಿತ್ರದ ಕೇಂದ್ರ ಬಿಂದು. ಅವರ ಸುತ್ತಲೇ ಇಡಿ ಚಿತ್ರ ಸುತ್ತುತ್ತದೆ.  ಬರುವ ಪಾತ್ರಗಳು ಅವರ ಸಂಗೀತದ ಆಸಕ್ತಿಯ ಬಗ್ಗೆ ಪುರಸ್ಕಾರ ಇಲ್ಲಾ ತಿರಸ್ಕಾರ  ತೋರುವಂತೆ ಅಭಿನಯಿಸಿವೆ. ರೇಡಿಯೋ ರಂಗಮ್ಮ, ಮುಸುರಿ, ವಜ್ರಮುನಿ, ಲಕ್ಷ್ಮೀದೇವಿ, ಕೊಂಚ ಹೊತ್ತು ಶಿವರಾಂ ಎಲ್ಲರೂ ಅವರ ಸಂಗೀತದ ಆಸಕ್ತಿಗೆ  ಬರೆ ಎಳೆಯುವಂತೆ ಮಾಡಿದರೆ, ಸೀತಾರಾಮ್, ವೆಂಕಟರಾವ್, ಲಕ್ಷ್ಮೀದೇವಿ, ಲೀಲಾವತಿ, ಅಶ್ವತ್, ಮತ್ತು ನಾಯಕನಾಗಿ ಅಭಿನಯಿಸಿರುವ ಗೋವಿಂದರಾವ್ ಮಣ್ಣೂರ್ ಮುದ್ದಾಗಿ ಕಾಣುವುದಷ್ಟೇ ಅಲ್ಲದೆ ಸಂಗೀತಕ್ಕೆ ಪ್ರೋತ್ಸಾಹ ಕೊಡುವಲ್ಲಿ ಗಮನ ಸೆಳೆಯುವ ಕೊಡುಗೆ ಕೊಟ್ಟಿದ್ದಾರೆ. 

ಸಂಗೀತವನ್ನು ವೃತ್ತ ಎಂದು ಭಾವಿಸಿ ಅದನ್ನು  ಚಿತ್ರಿಸಲು ಹೊರಟರೆ ಅಲ್ಲಿ ಕೇಂದ್ರ ಬಿಂದು ಆರತಿ, ಪರಿಧಿಯಲ್ಲಿ ಕಾಣುವ, ಬರುವ ಪಾತ್ರಗಳೇ ಮಿಕ್ಕವು. ಗುರು ಪಾತ್ರ ಮಾತ್ರ ಪರಿಧಿಯೊಳಗೆ ಬರುತ್ತಾರೆ ಹೊರತು ಮಿಕ್ಕವರೆಲ್ಲಾ ಪರಿಧಿಯ ಹೊರಗೆ ನಿಲ್ಲುತ್ತಾರೆ,. ಇಂಥಹ ಒಂದು ಅನುಭವ ಕೊಡುವ ಈ ಚಿತ್ರ ಪುಟ್ಟಣ್ಣ ಕಣಗಾಲ್ ಅವರ ಚಿತ್ರಗಳಲ್ಲಿ ಒಂದು ರತ್ನವಾಗಿ ನಿಲ್ಲಲು ಸಹಾಯ ಮಾಡಿವೆ. 

ಪುಟ್ಟಣ್ಣ ಕಣಗಾಲ್, ದೇವಕಿ ಮೂರ್ತಿಅವರ ಕಥೆಯನ್ನು ಅಚ್ಚುಕಟ್ಟಾಗಿ ಚಿತ್ರಕಥೆಗೆ ಅಳವಡಿಸಿಕೊಂಡು ಎಲ್ಲೂ ಬೇಸರಬಾರದಂತೆ, ಸಂಗೀತ ಬಲ್ಲವರೂ, ಬಾರದಿರುವವರು ಕೂಡ ನೋಡಿ ಮೆಚ್ಚಿ ತಲೆದೂಗುವಂತೆ ಚಿತ್ರಿಕರಿಸಿರುವುದು ಅವರ ಅದ್ಭುತ ಪ್ರತಿಬೆಗೆ ಸಾಕ್ಷಿ. 

೧. ಚಿತ್ರದ ಆರಂಭ ಪುಟ್ಟಣ್ಣ ಅವರ ಚಿತ್ರಗಳಲ್ಲಿ ಯಾವಾಗಲು ವಿಶೇಷ, ಅಲ್ಲಿಯ ಚಿತ್ರದ ಸಂದೇಶದ ಒಂದು ಝಲಕ್ ಕೊಟ್ಟಿರುತ್ತಾರೆ.  ಸಂಗೀತ ಸಾಧಕರ ಚಿತ್ರಗಳ ಹಿನ್ನೆಲೆಯಲ್ಲಿ, ವಾದ್ಯಗಳ ಚಿತ್ರಗಳ ಜೊತೆಯಲ್ಲಿ ಆರಂಭವಾಗುವ ಟೈಟಲ್ ಕಾರ್ಡ್ ಗಮನ ಸೆಳೆಯುತ್ತದೆ. ಸಂಗೀತಕ್ಕೆ ತಮ್ಮನ್ನೇ ಅರ್ಪಿಸಿಕೊಂಡ ಮಹಾನ್ ಚೇತನಗಳ ದರ್ಶನ ಆರಂಭದಲ್ಲೇ ಮಾಡಿಸುತ್ತಾರೆ. 

೨. ಹಲವಾರು ದೃಶ್ಯಗಳಲ್ಲಿ, ಕಲಾವಿದರ ಅಭಿನಯದಲ್ಲಿ ತಳಮಳ, ಆತಂಕ, ಅನುಮಾನ, ಹುಯ್ದಾಟ ಇವನ್ನು ಚಿತ್ರಿಕರಿಸುವಾಗ ಕ್ಯಾಮೆರವನ್ನು ತೂಗಡಿಸಿ, ಅಲುಗಾಡಿಸಿ, ಇಲ್ಲವೇ ಅತ್ತಾ ಇತ್ತಾ ತೂರಾಡುವ ಶೈಲಿಯಲ್ಲಿ ಉಪಯೋಗಿಸಿದ್ದಾರೆ. ಕಲಾವಿದರ ಅಭಿನಯಕ್ಕೆ ಇನ್ನಷ್ಟು ಸಾಂಧ್ರತೆ ಹೆಚ್ಚಾಗಲು ಸಹಕಾರಿಯಾಗಿದೆ.  

೩. ಶಾರದೆಯ ಮದುವೆ ವಿಷಯ ಬಂದಾಗ.. ನೆರಳಿನಲ್ಲಿ ಅವಳ ವೀಣೆಯನ್ನು ಕಿತ್ತುಕೊಂಡು, ಅದನ್ನು ಬಿಸಾಡುವ ದೃಶ್ಯ, ಅವಳ ಮನಸ್ಸಲ್ಲೇ ನಡೆಯುತ್ತಿರುವ ತಳಮಳವನ್ನು ಸೂಕ್ಷ್ಮವಾಗಿ ವಿವರಿಸಿದ್ದಾರೆ. ಇದು ಅವರ ಜಾಣ್ಮೆಗೆ ಹಿಡಿದ ಕನ್ನಡಿ. ನೂರಾರು ಮಾತುಗಳಲ್ಲಿ ಹೇಳಬೇಕಾದ ದೃಶ್ಯವನ್ನು ಕೇವಲ ಕೆಲವೇ ಕ್ಷಣಗಳಲ್ಲಿ ತಲುಪಿಸುವ ಅವರ ಕ್ರಿಯಾಶೀಲತೆಗೆ ನಮನ. 

೪. ಸ್ವಾಮೀ ವಿವೇಕಾನಂದರ ಅಮರವಾಣಿಯ ಧ್ಯೋತಕವಾಗಿ ರೂಪಿಗೊಂಡಿರುವ ಕನ್ಯಾಕುಮಾರಿಯಲ್ಲಿನ ಅವರ ಸುಂದರ ದೇವಾಲಯದ ಸುಂದರ ಪರಿಸರದಲ್ಲಿ ಚಿತ್ರೀಕರಣ ಮಾಡಿರುವುದು ಬಹಳ ಇಷ್ಟವಾಗುತ್ತದೆ. ಬಹುಶಃ ಈ ಚಿತ್ರವೇ ಮೊದಲು ಅಲ್ಲಿ ಚಿತ್ರೀಕರಣ ಮಾಡಿದ್ದು ಅನ್ನಿಸುತ್ತದೆ.

5. ಇಡಿ ಚಿತ್ರದಲ್ಲಿ ಒಂದು ಅಂಶ ಎದ್ದು ಕಾಣುತ್ತದೆ, ಆರಂಭದಿಂದಲೂ ತುಂಟಿ, ತರಲೆ ಮಾಡುವ ಪಾತ್ರದಲ್ಲಿ ಮೂಡಿಬರುವ ಶಾರದೆಯ ತಂಗಿ ಪಾತ್ರ (ಜಿ ವಿ ಶಾರದ) ಮದುವೆಯ ನಂತರ ಗಂಭೀರ ಪಾತ್ರಕ್ಕೆ ನುಗ್ಗುವುದು, ಹಾಗೆಯೇ ಅಶ್ವತ್ ಚಿತ್ರದುದ್ದಕ್ಕೂ ಶಾರದೆಯ ಪರವಾಗಿ ನಿಲ್ಲುವ ಅವರು ಕಡೆಯ ದೃಶ್ಯಗಳಲ್ಲಿ ಶಾರದೆಗೆ ವಿರುದ್ಧವಾಗಿ ನಿಲ್ಲುವುದು. ಇಂಥಹ ವೈರುಧ್ಯ ಪಾತ್ರಗಳಲ್ಲಿನ ಅಭಿನಯವನ್ನು ಹೊರತೆಗೆಯುವಲ್ಲಿ ಪುಟ್ಟಣ್ಣ ಅವರ ಯಾವಾಗಲು ಸಿದ್ಧ ಹಸ್ತರಾಗಿದ್ದರು.

೬." ಭಾರತ ಭೂಶಿರ ಮಂದಿರ ಸುಂದರಿ" ಹಾಡನ್ನು ಗುರುಗಳ ಮನೆಯಲ್ಲಿ ಚಿತ್ರೀಕರಿಸಿರುವ ಶೈಲಿ, ಆರತಿ ಮುಖವನ್ನು ಮಾತ್ರ ಸ್ಟಡಿ ಕ್ಯಾಮೆರಾದಲ್ಲಿ ತೋರಿಸಿ, ಅದನ್ನು ಕೇಳಲೆಂದು ಬಂದ ಮಂದಿಯನ್ನು ತೋರಿಸುವಾಗ ಆ ದೃಶ್ಯಗಳು ತೂಗಾಡುತ್ತ ಇರುವಂತೆ ಚಿತ್ರೀಕರಿಸಿದ್ದಾರೆ. ಸಂಗೀತದ ಶಕ್ತಿಯನ್ನು ತೋರಿಸುವ ಒಂದು ವಿಭಿನ್ನ ರೀತಿ. ರಾಮಚಂದ್ರ ಶಾಸ್ತ್ರೀ ಅವರು ಆ ಹಾಡಿನಲ್ಲಿ ಬಂದು ಹೋದರೂ ಅವರು ಹೇಳುವ ಮಾತು "ಅನಂತ ಶಾಸ್ತ್ರಿಗಳೇ ಹೃದಯ ಹಿಂಡುವ ನಿಮ್ಮ ಶಿಷ್ಯಳ ಸಂಗೀತ ಎಲ್ಲರ ಮನವನ್ನು ತಣಿಸಲಿ.. " ಇಷ್ಟವಾಗುತ್ತದೆ.

೭. ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡ ಈ ಚಿತ್ರ ಇಂದಿಗೂ ಸಂಗೀತಮಯ ಚಿತ್ರ ಎಂದಾಗ ಮೊದಲಿಗೆ ಬಂದು ನಿಲ್ಲುತ್ತದೆ.

ಉಪಾಸನೆ ಒಂದು ಚಿತ್ರರತ್ನವಾಗಿ ನಿಲ್ಲಲು ಎಲ್ಲರ ಪರಿಶ್ರಮದ ಅಗತ್ಯ ಇದೆ. ಇಡಿ ಚಿತ್ರವನ್ನು ಹೆಗಲಿಗೆ ಜೋತು ಹಾಕಿಕೊಂಡು ಚಿತ್ರಿಸಿರುವ ಪುಟ್ಟಣ್ಣ ಕಣಗಾಲ್ ಧ್ವನಿ ಎಂಬ ಒಂದು ಚಿಕ್ಕ ಸಂಗತಿಯನ್ನು ಇಟ್ಟುಕೊಂಡು ತಣ್ಣನೆ ಮಧುರ ಅನುಭವ ಕೊಡುವ ಚಿತ್ರವನ್ನಾಗಿ ಕೊಟ್ಟಿದ್ದಾರೆ. ಅದಕ್ಕೆ ನಮ್ಮ ಅದ್ಭುತ ನಿರ್ದೇಶಕರಿಗೆ ಒಂದು ಸಲಾಂ ಹೇಳೋಣ.. !!!

Tuesday, December 2, 2014

ಮಂಗಳಕರವಾದ ಶುಭಮಂಗಳ (1975)

ನೂಲಿನ ಉಂಡೆಯನ್ನು ನಿಧಾನವಾಗಿ ಬಿಡಿಸುತ್ತಾ ಹೋದಹಾಗೆ. ನೂಲಿನ ಉದ್ದವೂ ವಿಸ್ತರಿಸುತ್ತಾ ಹೋಗುತ್ತದೆ. ಹಾಗೆಯೇ ಒಂದು ಸಣ್ಣ ಎಳೆಯನ್ನು ನಿಧಾನವಾಗಿ ಹರಡುತ್ತಾ ಹೋದ ಹಾಗೆ ಅದರ ಹರಿವು ಅರಿವಾಗುತ್ತಾ ಹೋಗುತ್ತದೆ,

ಪುಟ್ಟಣ್ಣ ಕಣಗಾಲ್ ಕೂಡ ಹಾಗೆ.. ಒಂದು ಸಣ್ಣ ಛಲವನ್ನು ಹೊತ್ತು ಚಿತ್ರರಂಗಕ್ಕೆ ಬಂದರು. ಚಲನ ಚಿತ್ರದ ಎಲ್ಲಾ ಪ್ರಾಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇದರ ಫಲಿತಾಂಶ ಪ್ರತಿ ಚಿತ್ರದಲ್ಲಿಯೂ ಹೊಸ ವಿಷಯ, ಹೊಸ ಸಂದೇಶ, ಹೊಸ ಬಗೆಯ ತಾಣ, ಹೊಸ ಲಯ ಎಲ್ಲವೂ ಹೊಸದು

ಅವರ ಎಲ್ಲಾ ಚಿತ್ರಗಳನ್ನು ಸಾಲು ಸಾಲು ನಿಲ್ಲಿಸಿದರೆ ಒಂದಕ್ಕಿಂತ ಒಂದು ವಿಭಿನ್ನ., ಅದು ಅವರು ಕನ್ನಡಾಂಬೆಯ ಪೂಜೆಗೆ ಸಲ್ಲಿಸುವ ವಿವಿಧ ಪುಷ್ಪ ನಾಮಾವಳಿ,

ಇಂದು ಅವರ ಜನುಮದಿನ.. ಶುಭಾಪ್ರದವಾಗಿಯೇ ಇರುತ್ತದೆ ಎನ್ನುವುದಕ್ಕೆ ಅವರ ಶುಭಮಂಗಳ ಚಿತ್ರದ ಮೂಲಕ ಅವರ ಚರಣಕ್ಕೆ ಅರ್ಪಿಸುತ್ತಿರುವ ಈ ಮಾಲಿಕೆ ಸಾಕ್ಷಿ,

ಹುಟ್ಟು ಹಬ್ಬದ ಶುಭ ಕೋರುವ ಮೂಲಕ ಈ ಲೇಖನ ಮಾಲಿಕೆಯನ್ನು ಮುಂದುವರೆಸುತ್ತಿದ್ದೇನೆ... ಬನ್ನಿ ಕಡಲ ಕಿನಾರೆಯಲ್ಲಿ ಸ್ನೇಹದ ಕಡಲಲ್ಲಿ ಮೀಯೋಣ....


 ಶ್ರೀನಿಧಿ ಪ್ರೊಡಕ್ಷನ್ಸ್  ಲಾಂಛನದಲ್ಲಿ ತಯಾರಾದ ಈ ಚಿತ್ರ ತಯಾರಾದದ್ದು ಕರಾವಳಿಯ ಮಡಿಲಲ್ಲಿ. ಕರಾವಳಿಯ ಸುಂದರ ದೃಶ್ಯಗಳನ್ನು ಇಡಿ ಚಿತ್ರದಲ್ಲಿ ಕಾಡುವಂತೆ ಸೆರೆ ಹಿಡಿದಿರುವುದು ಛಾಯಾಗ್ರಾಹಕ ಎನ್ ಜಿ ರಾವ್.

ಸ್ನೇಹದ ಮಹತ್ವವನ್ನು ಸಾರುವ ಈ ಚಿತ್ರದ ಆರಂಭ ಸೊಗಸಾಗಿದೆ.  ಸ್ನೇಹದ ಉಗಮ ಯಾರಿಗೂ ಅರಿವಾಗುವುದಿಲ್ಲ. ಒಂದು ಸಣ್ಣ ನೋಟ, ಒಂದು ಸಣ್ಣ ನಗು, ಒಂದು ಸಣ್ಣ ಮುನಿಸು ಸ್ನೇಹಕ್ಕೆ ನಾಂದಿ ಹಾಡುತ್ತದೆ. ಹಾಗೆಯೇ ಚಿತ್ರದ ಆರಂಭ ಒಂದು ಸಣ್ಣ ಝರಿಯಿಂದ ಶುರುವಾಗಿ ಚಿತ್ರದ ಹೆಸರು ತಾರಾಗಣ ಎಲ್ಲವನ್ನು ತೋರಿಸುತ್ತಾ ಹೋಗುತ್ತಾರೆ. ಹಾಗೆ ಮುಂದುವರಿದಂತೆಯೇ ಝರಿ, ಸಣ್ಣ ತೊರೆಯಾಗುತ್ತದೆ, ನದಿಯಾಗುತ್ತದೆ, ಬೆಟ್ಟದಿಂದ ಧುಮುಕಿ ಜಲಪಾತವಾಗುತ್ತದೆ, ಕಣಿವೆಯಲ್ಲಿ ಹರಿಯುತ್ತದೆ, ಸಮುದ್ರ ಸೇರುತ್ತದೆ. ಸ್ನೇಹದ ಮಹತ್ವ ತೋರಿಸುವುದಕ್ಕಾಗಿ ಎಷ್ಟು ಸೊಗಸಾದ ವಿಧಾನ ಅನುಸರಿಸಿದ್ದಾರೆ ನಮ್ಮ ಪುಟ್ಟಣ್ಣ,

ಶ್ರೀಮತಿ ವಾಣಿಯವರ ಕಾದಂಬರಿಯ ಒಂದು ಎಳೆಯನ್ನು ಹಿಡಿದು ಈ ಚಿತ್ರವನ್ನು ಮಾಡಿದ್ದರೂ ಅದರ ಸಂಪೂರ್ಣ ಕಾಣಿಕೆ ಕಾದಂಬರಿಕಾರ್ತಿಗೆ ಅರ್ಪಿಸುವುದು ಅವರ ದೊಡ್ಡತನ ತೋರುತ್ತದೆ.

ಸಂಬಂಧಿಕರಾಗಿದ್ದರು ಸ್ನೇಹದ ಅಡಿಪಾಯದ ಮೇಲೆ ಅರಳುವ ನಾಯಕ ನಾಯಕಿಯ ಜೀವನ ಎಲ್ಲೋ ಹುಟ್ಟಿ, ಎಲ್ಲೋ ಹರಿದು, ಸ್ನೇಹದ ಸುಂದರ ಹಂತ ಮಿಲನದಲ್ಲಿ ನಿಲ್ಲುತ್ತದೆ. ಎಷ್ಟು ವಿವಿಧಬಗೆಯ ಯೋಚನೆ ಈ ಕಥಾ ಹಂದರದ್ದು.

ಒಂದು ಹೆಣ್ಣು ಮನಸ್ಸು ಹೇಗೆ ಭಾವನೆಗಳಿಗೆ ಅರಳುತ್ತದೆ, ರೋಷದ ಮಾತುಗಳಿಗೆ ಕೆರಳುತ್ತದೆ ಎನ್ನುವುದು ಚಿತ್ರದುದ್ದಕ್ಕೂ ನಾಯಕಿಯ ಎರಡು ಜಡೆಯಲ್ಲಿ ಬಿಂಭಿತವಾಗಿದೆ.

ಇಲ್ಲಿ ಪ್ರತಿಪಾತ್ರಗಳು ಅಭಿನಯಿಸಿಲ್ಲ ಬದಲಾಗಿ ನಟರೆ ಪಾತ್ರಗಳಾಗಿದ್ದಾರೆ,  ಪುಟ್ಟಣ್ಣ ಅವರು ಮತ್ತೆ ಕೆಲವೇ ನಟ ನಟಿಯರ ತಾರಾಗಣದಲ್ಲಿ ಈ ಚಿತ್ರವನ್ನು  ಚಿತ್ರಿಸಿದ್ದಾರೆ.

ಸಂಗೀತ ವಿಜಯಭಾಸ್ಕರ್ ಅವರ ಭದ್ರ ಕೋಟೆಯಲ್ಲಿ ನಿಂತರೆ, ಛಾಯಾಗ್ರಹಣ  ಎನ್ ಜಿ ರಾವ್ ಅವರ ಸಾರಥ್ಯಕ್ಕೆ ಸಿದ್ಧವಾಗಿರುತ್ತದೆ, ಸೊಗಸಾದ ಸಂಭಾಷಣೆಯ ಕತೃಗಳು ಹಾಸ್ಯ ಪಿತಾಮಹ ಬಿChi, ಜೊತೆಯಲ್ಲಿ ಯೋಗಾನರಸಿಂಹ ಮೂರ್ತಿ.

ತಂದೆಯ ಕೆಲವು  ರೋಷ ಸೇಡು ಹಠದ ಗುಣಗಳನ್ನು ಬಳುವಳಿಯಾಗಿ ಪಡೆದ ನಾಯಕಿ ತನ್ನ ಸ್ವಾಭಿಮಾನ, ಹಠ, ಛಲಕ್ಕೆ ಜೋತು ಬಿದ್ದು ಪಾತ್ರ ನಿರ್ವಹಿಸುತ್ತಾಳೆ. ಜೀವನದ ಕಡಲಿನಲ್ಲಿ ಸ್ನೇಹದ ತರಂಗಗಳು ಬಡಿದು ಬಡಿದು ಅವಳ ಸಿಟ್ಟು ರೋಷ ಹಠ ಇವನ್ನು ಕಮ್ಮಿ ಮಾಡುತ್ತಾ ಸ್ನೇಹದ ಸಂಕೋಲೆಗೆ ಶರಣಾಗುತ್ತಾಳೆ.

ಆರತಿ " ಹೇಮಾ"ಳನ್ನು ಆಲಂಗಿಸಿ ಮುದ್ದಾಡಿ ಅಪ್ಪಿಕೊಂಡು ಅವಳೊಳಗೆ ತೂರಿಕೊಂಡು ಬಿಟ್ಟಿದ್ದಾರೆ. ಇಡಿ ಚಿತ್ರದುದ್ದಕ್ಕೂ ಹೇಳುವ "ಪ್ರಭಾಕರ" ಶಬ್ದ ಅವರ ದನಿಯಲ್ಲೇ ಕೇಳಬೇಕು. ಪ್ರತಿ ದೃಶ್ಯದಲ್ಲೂ ಆವರಿಸಿಕೊಳ್ಳುತ್ತಾ ಹೋಗುವ ಅವರು.. ಅವರಿರಿರದೆ ಚಿತ್ರವಿಲ್ಲ ಎನ್ನುವಷ್ಟು ಕಾಡುತ್ತಾರೆ.

  • ಕಾರನ್ನು ಓದಿಸಿ ಪ್ರಭಾಕರನನ್ನು ಗೋಳು ಹುಯ್ದು ಕೊಳ್ಳುವ ದೃಶ್ಯ 
  • ಲೆಖ್ಖ ಲೆಖ್ಖ ಎನ್ನುತ್ತಾ ಪ್ರತಿ ಬಾರಿಯೂ ಗಲಾಟೆ ಮಾಡುವ ದೃಶ್ಯ 
  • ಇಷ್ಟು ದೊಡ್ಡ ಜಗತ್ತಲ್ಲಿ ನನಗೊಬ್ಬಳಿಗೆ ಜಾಗ ಇರೋಲ್ವೆ.. ಎನ್ನುವಾಗ ಹತಾಶೆ ಕಂಡರೂ ಸ್ವಲ್ಪ ಬಿಗುಮಾನ ಇರುವ ಮಾತುಗಳು 
  • ತಿಮ್ಮ, ಮೂಗ ನಮ್ಮ ಮನೆ ಆಳಲ್ಲ ನನ್ನ ಒಡಹುಟ್ಟಿದವರು ಎನ್ನುವ ಅವರ ಮಾತಿನ ಧಾಟಿ ಸೂಪರ್ 
  • ಕೆಲಸ ಸಿಕ್ಕಿ ಸಂಬಳ ತಂದು ಪ್ರಭಾಕರನನ್ನು ಛೇಡಿಸುವ ದೃಶ್ಯ "ಈ ಶತಮಾನದ ಮಾದರಿ ಹೆಣ್ಣು" ಹಾಡುತ್ತಾ ಪ್ರಭಾಕರನ ಬರುವಿಕೆಗೆ ಕಾಯುವ ಅಭಿನಯ 
  • ಪ್ರಭಾಕರನ ಸ್ನೇಹಕ್ಕೆ ಸೋತು ತನ್ನ ಕೊನೆಗೆ ಬಂದಾಗ ಅಪ್ಪನ ಭಾವ ಚಿತ್ರವನ್ನು ಮಡಚಿಟ್ಟು ಇಂಥಹ ಸ್ನೇಹಕ್ಕೆ ನಾ ಹೇಗಪ್ಪ ಸೋಲದಿರಲಿ ಎನ್ನುವಾಗ ಕಣ್ಣೀರಾಗುತ್ತೇವೆ
  • ಒಂದು ಸನ್ನಿವೇಶದಲ್ಲಿ ಪ್ರಭಾಕರ ಹೇಮಾಳ ಮೇಲೆ ಅನುಮಾನ ಪಟ್ಟು ಅವಮಾನಿಸಿದಾಗ. ಅಳುತ್ತಾ ಕೂತಾಗ .. ತಪ್ಪನ್ನು ಅರಿತ ಪ್ರಭಾಕರ ಕ್ಷಮೆ ಕೇಳುತ್ತಾ ಕಣ್ಣಲ್ಲಿ ನೀರು ತುಂಬಿ ಕೊಂಡಾಗ.. ಅಳುತ್ತ ಇದ್ದ ಹೇಮಾ, ತುಸು ಮುನಿಸಿನಲ್ಲಿ... ಸ್ವಲ್ಪವೇ ನಗುತ್ತಾ.. "ಅದ್ಯಾಕೋ ಪ್ರಭಾಕರ ಅಳ್ತೀಯ ಹೆಣ್ಣಿಗರಾಮ.. " ಈ ದೃಶ್ಯ ಸೂಪರ್. ಒಂದು ಕಡೆ ಅಳು, ಕೋಪ, ಸ್ನೇಹಿತನಿಗೆ ಬೇಸರವಾಯ್ತು ಎನ್ನುವ ಭಾವ ಎಲ್ಲವೂ ಮೇಳೈಸಿ ತೋರಿಸಿರುವ ಅವರ ಭಾವ ಸೂಪರ್ 
  •  ಪ್ರಭಾಕರನ ಮನೆ ತನ್ನ ಹೆಸರಿಗೆ ಇದೆ ಎಂದು ಗೊತ್ತಾದ ಮೇಲೆ.. ಪ್ರಭಾಕರ ಆ ಮನೆಯನ್ನು ಬಿಟ್ಟು ಹೋಗುತ್ತೇನೆ ಎಂದಾಗ.. ಇಲ್ಲೇ ಇರು ಎಂದು ಒತ್ತಾಯ ಮಾಡುತ್ತಾಳೆ... ಆಗ ಹೆಣ್ಣಾದ ನಿನಗೆ ಸ್ವಾಭಿಮಾನ ಇದೆ.. ಗಂಡಾದ ನನಗೆ ಸ್ವಾಭಿಮಾನ ಸತ್ತು ಹೋಗಿದೆಯ ಎಂದಾಗ ಕಪಾಳಕ್ಕೆ ಹೊಡೆಯುವ ಶಬ್ದ ಜೊತೆಯಲ್ಲಿ ಹೇಮಾಳ ಅಭಿನಯ. 
ಒಟ್ಟಿನಲ್ಲಿ ಇಡಿ ಚಿತ್ರವನ್ನು ತನ್ನ ಭುಜದ ಮೇಲೆ ಹೊತ್ತು ಸಾಗಿರುವ ಪರಿ ಆರತಿ ಹೇಮಾಳ ಪಾತ್ರವನ್ನು ಅಭಿನಯಿಸೋಕೆ ಜನ್ಮ ತಾಳಿದ್ದಾರೆ ಅನ್ನುವಷ್ಟು ಇಷ್ಟವಾಗುತ್ತಾರೆ. 

ಶ್ರೀನಾಥ್ ಪ್ರಭಾಕರನ ಪಾತ್ರದಲ್ಲಿ ಇಳಿದು ಬಿಟ್ಟಿದ್ದಾರೆ.. ನಾಯಕನಾಗಿ ಮೊದಲ ದೊಡ್ಡ ಚಿತ್ರ ಇದು. ನಂತರ ಪುಟ್ಟಣ್ಣ ಅವರ ಸುಮಾರು ಚಿತ್ರಗಳಲ್ಲಿ ಮಿನುಗಿದ್ದಾರೆ. ಹೇಮಾಳ ಜೊತೆಯಲ್ಲಿನ ಜಗಳ, ತಮಾಷೆ, ಸ್ನೇಹ ಎಲ್ಲವು ಸೂಪರ್. ಅವರ ಜೀವನದ ಒಂದು ಭಾಗವೇ ಆಗಿ ಹೋದ "ಸ್ನೇಹದ ಕಡಲಲ್ಲಿ ನೆನಪಿನ ದೋಣಿಯಲಿ" ಹಾಡು ಸುಂದರವಾಗಿದೆ. ಹೇಮಾಳ ಪ್ರತಿ ಸಂಭಾಷಣೆಗೂ ತಕ್ಕ ಪ್ರತಿಯುತ್ತರ ಕೊಡುತ್ತ ಹೋಗುವ ಅವರ ಪಾತ್ರದ ಹರಿವು ಇಷ್ಟವಾಗುತ್ತದೆ. ಸ್ನೇಹಕ್ಕೆ ಸ್ನೇಹದ ಮನಸ್ಸಿಗೆ ಮನಸೋಲುವ ಅಭಿನಯ ಸುಂದರವಾಗಿದೆ 


ತಿಮ್ಮನ ಪಾತ್ರದಲ್ಲಿ ನಟ ಶಿವರಾಂ ಕೆಲವೊಮ್ಮೆ ನಗಿಸುತ್ತಾರೆ, ಕೆಲವೊಮ್ಮೆ ಮನಸ್ಸಿಗೆ ತಾಕುತ್ತಾರೆ.. "ಹೇಮವ್ವ ಪ್ರಭಾಕರಪ್ಪ ನಿಮ್ಮನ್ನು ಬಚಾಯಿಸಿದರು.. ಎನ್ನುವಾಗ ಕಣ್ಣೀರು ತುಂಬಿಕೊಳ್ಳುತ್ತಾರೆ.. ಸೂರ್ಯಂಗೂ ಚಂದ್ರಂಗೂ ಹಾಡಿನಲ್ಲಿ ಹೇಮಾ ಮತ್ತು ಪ್ರಭಾಕರನನ್ನು ಸೇರಿಸಲು ಪಡುವ ಪಾಡು ಇಷ್ಟವಾಗುತ್ತದೆ. "ಸಮುದ್ರದಲ್ಲಿ ಈ ಪಾಟಿ ನೀರೈತೆ.. ಕುಡಿಯೋಕೆ ಒಂದು ನೀರು ಸಿಗುತ್ತಾ ಹೇಳಿ" ಎನ್ನುವಾಗ ತಿಮ್ಮ ಅನುಭವಿ ರೀತಿಯಲ್ಲಿ ಮಾತಾಡುತ್ತ ಹೋಗುವ ಪಾತ್ರ ಇಷ್ಟವಾದರೆ, ಮನೆಯ ಫೌಂಟನ್ ನಲ್ಲಿ ಸ್ನಾನ ಮಾಡುವಾಗ, ಊಟ ಮಾಡಿದಮೇಲೆ ಹಣ್ಣಿನ ತಟ್ಟೆಯನ್ನು ಎತ್ತಿಕೊಂಡು ಹೋಗುವಾಗ ನಗೆ ಉಕ್ಕಿಸುತ್ತಾರೆ.

ಮೂಗನ ಪಾತ್ರದಲ್ಲಿ ಅಂಬರೀಶ್.. ಅಬ್ಬಾ ಎನ್ನಿಸುತ್ತಾರೆ ಇಡಿ ಚಿತ್ರದಲ್ಲಿ ತಿಮ್ಮನ ನೆರಳಾಗೆ ಇರುವ ಈ ಪಾತ್ರ.. ಹೇಮಾ ಕೆಲಸ ಮಾಡುವ ಅಂಗಡಿಯಲ್ಲಿ ಆ ಅಂಗಡಿಯ ಯಜಮಾನರ ಮಕ್ಕಳು ಅವಳನ್ನು ಪೀಡಿಸಿದರು ಎಂದು ತಿಳಿದಾಗ ರೋಷ ವೇಷದಲ್ಲಿ ಬಂದು ತಿಮ್ಮನ ಕಣ್ಣೀರನ್ನು ಒರೆಸಿ ಅಂಗಡಿಗೆ ನುಗ್ಗಿ ಬಡಿಯುವ ದೃಶ್ಯ ಇಷ್ಟವಾಗುತ್ತದೆ. ಈ ದೃಶ್ಯದಲ್ಲಿ ಹೇಮಾ ತನ್ನ ಕಷ್ಟವನ್ನು ಹೇಳಿಕೊಳ್ಳಲು ಮೂಗನನ್ನು ಆರಿಸಿಕೊಳ್ಳುವುದು.. ಭಾವ ವ್ಯಕ್ತ ಪಡಿಸಿಕೊಳ್ಳೋಕೆ ಮಾತಲ್ಲ ಮುಖ್ಯ ಭಾವ ಮತ್ತು ಭಾವನೆ ಮುಖ್ಯ ಎಂದು ತೋರಿಸುತ್ತದೆ.  ಯಾಕೆ ಅಂದ್ರೆ ಈ ದೃಶ್ಯದಲ್ಲಿ ಮಾತು ಬರುವ ಎಲ್ಲರೂ ಹೇಮಾ ತಪ್ಪು ಮಾಡಿದ್ದಾಳೆ ಎಂದೇ ನಂಬಿರುತ್ತಾರೆ.. ಮೂಗ ಒಬ್ಬನೇ ಅರ್ಥ ಮಾಡಿಕೊಳ್ಳಲು ಪ್ರಯತ್ನ ಪಡುವುದು. ಪುಟ್ಟಣ್ಣ ಇಂಥಹ ಸಂಕೀರ್ಣ ಪಾತ್ರ ಸೃಷ್ಟಿಸುವುದರಲ್ಲಿ ಎತ್ತಿದ ಕೈ. ಅಂಬರೀಶ್ ಇಡಿ ಚಿತ್ರದಲ್ಲಿ ಇಷ್ಟವಾಗುತ್ತಾರೆ.

ಪುಟ್ಟಣ್ಣ ನವರ ನಾಗರಹಾವು ಚಿತ್ರದಲ್ಲಿ ಅಬ್ಬರಿಸಿದ್ದ ಚಾಮಯ್ಯ ಮೇಷ್ಟ್ರು ಈ ಚಿತ್ರದಲ್ಲಿ ಅಶ್ವತ್ ವೈದ್ಯರ ಚಿಕ್ಕ ಚೊಕ್ಕ ಪಾತ್ರದಲ್ಲಿ ಬಂದು ನಗಿಸುತ್ತಾರೆ. ಪುಟ್ಟಣ್ಣ ಅವರ ಚಿತ್ರಗಳನ್ನು ನಿರಾಕರಿಸಲು ಸಾಧ್ಯವೇ ಇಲ್ಲ ಎನ್ನುವ ಹಂತ ಅಶ್ವಥ್ ಅವರ ಚಿಕ್ಕ ಪಾತ್ರವನ್ನು ಒಪ್ಪಿಕೊಳ್ಳುವುದರ ಮೂಲಕ ತೋರಿಸುತ್ತಾರೆ .

ಆದ್ರೆ ರೀತಿಯಲ್ಲಿ ಸೀತಾರಾಂ ಚಿಕ್ಕ ಪಾತ್ರವಾದರೂ ಮುಂದೆ ಉಪಾಸನೆ ಚಿತ್ರದಲ್ಲಿ ಗಮನ ಸೆಳೆಯುವಂಥಹ ಅಭಿನಯ ನೀಡಿ ಮನಗೆಲ್ಲುತ್ತಾರೆ. ಹೀಗೆ ಕಲಾವಿದರಿಗೆ ಅವರ ಆಳವನ್ನು ತೋರಿಸುತ್ತಾ ಅವರ ಪ್ರತಿಭೆಯನ್ನು ಹೊರ ತೆಗೆಯುವ ಶಕ್ತಿ ಪುಟ್ಟಣ್ಣ ಅವರಿಗೆ ಕರಗತವಾಗಿತ್ತು.

ಈ ಚಿತ್ರದ ಹಾಡುಗಳು ಅಜರಾಮರ..

"ಈ ಶತಮಾನದ ಮಾದರಿ ಹೆಣ್ಣು" ವಾಣಿ ಜಯರಾಂ "ಹೆಣ್ಣು" ಎನ್ನುವ ಪದವನ್ನು ಉಲಿಯುವ ರೀತಿ ಸೂಪರ್. ವಿಜಯನಾರಸಿಂಹ ಅವರ ಸಾಹಿತ್ಯವನ್ನು ಎತ್ತರದ ಸ್ಥಾಯಿಯಲ್ಲಿ ಹಾದಿ ಮನ ಗೆದ್ದಿದ್ದಾರೆ ವಾಣಿ ಜಯರಾಂ.

"ಸ್ನೇಹದ ಕಡಲಲ್ಲಿ ನೆನಪಿನ ದೋಣಿಯಲಿ" ಸ್ನೇಹದ ಮಹತ್ವ, ಬಾಲ್ಯದ ಹುಡುಗಾಟ ಎಲ್ಲವನ್ನು ಕಲಸಿ ಬರೆದಿರುವ ಚಿ ಉದಯಶಂಕರ್ ಸ್ನೇಹಕ್ಕೆ ಒಂದು ಹಾಡು ಎಂದಾಗ ಈ ಹಾಡೇ ನೆನಪಿಗೆ ಬರುವುದು. ಎಸ್ ಪಿ ಬಾಲಸುಬ್ರಮಣ್ಯಂ ಅವರು ಜೀವ ತುಂಬಿ ಹಾಡಿದ್ದಾರೆ. ಶ್ರೀನಾಥ್ ಅವರ ಅನೇಕ ಗೀತೆಗಳನ್ನು ಹಾಡಿರುವ ಇವರಿಬ್ಬರ ಸ್ನೇಹಕ್ಕೆ ಮುನ್ನುಡಿ ಈ ಹಾಡಾಯಿತು.

ಕನಸ್ಸಲ್ಲಿ ಕಂಡು ಬರುವ "ಶುಭ ಮಂಗಳ ಸುಮೂಹೂರ್ತವೆ" ವಾಣಿ ಜಯರಾಂ ಮತ್ತು ಪಿ ಬಿ ಶ್ರೀನಿವಾಸ್ ಗಮನಸೆಳೆಯುತ್ತಾರೆ. ಕಣಗಾಲ್ ಪ್ರಭಾಕರ್ ಶಾಸ್ತ್ರಿಯವರ ಸಾಹಿತ್ಯವನ್ನು ಅಷ್ಟೇ ಮುದ್ದಾಗಿ ಚಿತ್ರಿಸಿರುವ ಶೈಲಿ ಪಟಾಕಿ ಸಿಡಿಮದ್ದು ಇಲ್ಲದೆ ಬರಿ ಹೂಬಾಣಗಳ ಮಧ್ಯೆ ಸುಂದರವಾಗಿ ಮೂಡಿ ಬಂದಿದೆ.

ಮಲ್ಪೆಯ ಕಡಲ ತೀರದ "ಸೈಂಟ್ ಮೇರಿಸ್" ಸುಂದರ ದ್ವೀಪದಲ್ಲಿ ಚಿತ್ರಿಸಿರುವ ಹಾಡು "ನಾಕೊಂದ್ಲ ನಾಕು" ಎಂ ಎನ್ ವ್ಯಾಸರಾವ್ ಅವರ ತುಂಟ ಸಾಹಿತ್ಯ, ಜೊತೆಯಲ್ಲಿ ಪ್ರಕೃತಿಯ ವಿಹಂಗಮ ಬಣ್ಣನೆ ಇಷ್ಟವಾಗುತ್ತದೆ. ಎಸ್ ಪಿ ಬಾಲಸುಬ್ರಮಣ್ಯಂ ಮತ್ತೆ ತುಂಟ ತನದ ಈ ಹಾಡಿಗೆ ದನಿಯಾಗುತ್ತಾರೆ.

ಪುಟ್ಟಣ್ಣ ಅವರು ಪ್ರತಿಭೆಗಳನ್ನು ಹೇಗೆ ಹುಡುಕುತ್ತಿದ್ದರು ಎನ್ನುವುದಕ್ಕೆ ಉತ್ತಮ ಸಾಕ್ಷಿ "ಸೂರ್ಯಂಗೂ ಚಂದ್ರಂಗೂ" ಹಾಡು. ನಿರ್ದೇಶಕ ರವಿ ಅವರ ದಪ್ಪ ದನಿಯಲ್ಲಿ ಹಾಡಿಸಿರುವ ಈ ಹಾಡು ಇಷ್ಟವಾಗುವುದು ಅದರ ಸಾಹಿತ್ಯ, ಹಳ್ಳಿಯ ಶೈಲಿಯಲ್ಲಿಯೇ ಹಾಡಿರುವ ಬಗೆ, ಜೊತೆಯಲ್ಲಿ ಶಿವರಾಂ ಅವರ ಅಭಿನಯ. ಎಂ ಎನ್ ವ್ಯಾಸರಾವ್ ಅವರ ಅರ್ಥ ಗರ್ಭಿತ ಸಾಹಿತ್ಯ ಮನಗೆಲ್ಲುತ್ತದೆ.

ಇನ್ನೊಬ್ಬ ಸುಂದರ ನಟ ಆರ್ ನಾಗೇಂದ್ರ ರಾಯರ ಮಗ ಸುದರ್ಶನ್ ಅವರ ಸಿರಿ ಕಂಠ ದಲ್ಲಿ ಮೂಡಿರುವ ಗೀತೆ "ಹೂವೊಂದು ಬಳಿ ಬಂದು" ಹಾಡಿಗೆ ಒಂದು ಭಾವುಕ ಚೌಕಟ್ಟು ಒದಗಿಸುವಲ್ಲಿ ಈ ಹಾಡು ಗಾಯನ ತನ್ನ ಕಾಣಿಕೆ ಸಲ್ಲಿಸುತ್ತದೆ. ವಿಜಯನಾರಸಿಂಹ ಅವರ ಸುಂದರ ಪದಗಳ ಜಾದೂ ಶ್ರೀನಾಥ್ ಅವರ ಅಭಿನಯ ಈ ಹಾಡಿಗೆ ಮೆರುಗು ತಂದಿದೆ.

ಇಡಿ ಚಿತ್ರದಲ್ಲಿ ಸ್ನೇಹದ ಕಡಲಿನ ಮೇಲೆ ತೇಲಿಸುವಂತೆ ಅನುಭವ ಕೊಡುವ ಸಂಗೀತ ವಿಜಯಭಾಸ್ಕರ್ ಅವರದ್ದು. ಪ್ರತಿ ಹಾಡಿಗೂ ಪ್ರತಿ ಸನ್ನಿವೇಶಕ್ಕೂ ವಿಭಿನ್ನ ರೀತಿಯಲ್ಲಿ ಸಂಗೀತ ತುಂಬುತ್ತಾ ಜೀವ ತುಂಬುವ ಅವರ ಸಂಗೀತ ಈ ಚಿತ್ರದ ಉತ್ತಮ ಯಶಸ್ಸಿಗೆ ಕಾರಣವಾಗಿತ್ತು. ಅದ್ಭುತ ಗೆಳೆತನ ವಿಜಯಭಾಸ್ಕರ್, ಪುಟ್ಟಣ್ಣ ಮತ್ತು ವಿಜಯನಾರಸಿಂಹ ಅವರದ್ದು. ಈ ಗೆಳೆತನದ ಅಪಾರ ಶಕ್ತಿ ಈ ಚಿತ್ರದ ಯಶಸ್ಸಿಗೆ ದುಡಿದಿದೆ.

ಗುರುಗಳೇ ಇಂಥಹ ಸ್ನೇಹದ ಕಡಲಲ್ಲಿ ನಮ್ಮನ್ನು ತೇಲಿಸಿ ಸಾಗಿಸಿರುವ ಈ ಚಿತ್ರದ ನುಡಿ ನಮನದ ಜೊತೆಯಲ್ಲಿ ನಿಮಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ನಿಮ್ಮ ಅಭಿಮಾನಿ ಬಳಗದ ಮೂಲಕ ಕೋರುತ್ತಿದ್ದೇವೆ.  ಶುಭಮಂಗಳಕರ ನೆನಪುಗಳೊಂದಿಗೆ ಮತ್ತೊಂದು ಚಿತ್ರದ ಜೊತೆಯಲ್ಲಿ ಬರುವೆ.






Monday, November 24, 2014

ಎಡವಿದರೆ ಕಲ್ಲು ಗುಡ್ಡವೇ.. ಎಡಕಲ್ಲು ಗುಡ್ಡದ ಮೇಲೆ (1973)

ಪುಟ್ಟಣ್ಣ ಯಾಕೆ ಇಷ್ಟ ಆಗ್ತಾರೆ.. ಕಾರಣ ಹುಡುಕುತ್ತಾ ಹೋದ ಹಾಗೆ ಶರಧಿಯಲ್ಲಿ ಕಪ್ಪೆ ಚಿಪ್ಪು ಹುಡುಕಿದ ಹಾಗೆ.. ಒಂದು ಸಿಕ್ಕಾಗ ಇನ್ನೊಂದು ಕಾಣುತ್ತದೆ. ಅರೆ ಇದು ಚೆನ್ನಾಗಿದೆ ಅಂತ ಇನ್ನೊಮ್ಮೆ ಕಣ್ಣರಳಿಸಿದರೆ ಇನ್ನೊಂದು ಸೊಗಸಾಗಿ ಕಾಣುತ್ತದೆ.

ಅವರ ಬೆಳ್ಳಿಮೋಡದಿಂದ ನಾಗರಹಾವು ಚಿತ್ರದವರೆಗೆ ಬರೆದ ನಂತರ ಹಿಂದೆ ತಿರುಗಿ ನೋಡಿದರೆ ಒಂದು ರೀತಿ ಸಂತೃಪ್ತಿ, ಮುಂದೆ  ಆನಿಸಿ ನೋಡಿದರೆ ಇನ್ನೊಂದು ಬಗೆಯ ರತ್ನಗಳು ಹೊಳೆಯುತ್ತಿವೆ.

ಭಾರತಿಸುತ ಅವರ ಸುಧಾ ವಾರಪತ್ರಿಕೆಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಅದೇ ಹೆಸರಿನ ಕಾದಂಬರಿಯನ್ನು ಚಿತ್ರಕಥೆ ಬರೆದು ನಿರ್ದೆಶಿಸಿದ್ದಾರೆ ಪುಟ್ಟಣ್ಣ ಕಣಗಾಲ್.

ಶ್ರೀಕಾಂತ್ & ಶ್ರೀಕಾಂತ್ ಎಂಟರ್ಪ್ರೈಸಸ್ ಲಾಂಛನದಲ್ಲಿ ತಯಾರಾದ ಈ ಚಿತ್ರ ೧೯೭೩  ತೆರೆಯನ್ನು ಅಲಂಕರಿಸಿತು. ಒಂದು ರೀತಿಯ ವಿಚಿತ್ರ ಅನ್ನಿಸುವಷ್ಟು ಕಥೆಗೆ ಹೂರಣ ತುಂಬಿ ನಟಿಸಿದ್ದು ಅಭಿನಯ ಶಾರದೆ ಜಯಂತಿ. ಪ್ರವರ್ಧಮಾನಕ್ಕೆ ಬರುತ್ತಿದ್ದ ಆರತಿ, ಎಡಕಲ್ಲು ಗುಡ್ಡ ಚಂದ್ರಶೇಖರ್ ಎಂದೇ ಖ್ಯಾತರಾಗಿದ್ದ ಚಂದ್ರು, ಶರಪಂಜರ, ನಾಗರಹಾವು ಚಿತ್ರಗಳಲ್ಲಿ ಚಮತ್ಕಾರಿ ಅಭಿನಯ ನೀಡಿ, ಜೊತೆಯಲ್ಲಿ ಗೆಜ್ಜೆ ಪೂಜೆ ಚಿತ್ರವನ್ನು ನಿರ್ಮಿಸಿದ್ದ ಶಿವರಾಂ ಮತ್ತು ಪೋಷಕ ಪಾತ್ರದಲ್ಲಿ ರಂಗ.

ಇಡಿ ಚಿತ್ರದಲ್ಲಿ ಆವರಿಸಿಕೊಂಡಿರುವುದು ಈ ಐದೇ ಮಂದಿ. ಇವರುಗಳನ್ನೇ ಕೇಂದ್ರವಾಗಿತ್ತು ಕೊಂಡು ಎಲ್ಲೂ ಬೇಸರ ತರಿಸದೇ ಚಿತ್ರವನ್ನು ಮಾಡಿ ಗೆದ್ದವರು ಪುಟ್ಟಣ್ಣ ಎಂಬ ಮಾಂತ್ರಿಕ ನಿರ್ದೇಶಕ.

ನರೇಂದ್ರ ಬಾಬು ಅವರ ಸಂಭಾಷಣೆ, ಎಸ್ ವಿ ಶ್ರೀಕಾಂತ್ ಅವರ ಛಾಯಾಗ್ರಹಣ, ಸಂಗೀತ ನಿಧಿ ಎಂ ರಂಗರಾವ್ ಇವರಿಂದ ಕೂಡಿದ ಈ ಚಿತ್ರಕ್ಕೆ ಸೊಗಸಾದ ಹಾಡುಗಳನ್ನು ಬರೆದವರು ಕಣಗಾಲ್ ಪ್ರಭಾಕರ್ ಶಾಸ್ತ್ರೀ, ವಿಜಯನಾರಸಿಂಹ, ಆರ್ ಎನ್ ಜಯಗೋಪಾಲ್, ನರೇಂದ್ರಬಾಬು.  ಹಾಡುಗಳಿಗೆ ದನಿಯಾದವರು ಪಿ ಸುಶೀಲ, ಎಸ್ ಪಿ ಬಾಲಸುಬ್ರಮಣ್ಯಂ, ಎಸ್ ಜಾನಕಿ.

ಈ ಚಿತ್ರ ಮನಸ್ಸೆಳೆಯುವುದು ಈ ಕಾರಣಗಳಿಂದ

೧. ಕಾಮ ಎಂಬ ಅರಿಷಡ್ವರ್ಗದ ಪ್ರಮುಖ  ವೈರಿಯನ್ನು ಕೇಂದ್ರ ಕಥಾ ವಸ್ತುವಾಗಿದ್ದರೂ ಇಡಿ ಪರಿವಾರ ಒಟ್ಟು ಕೂತು ನೋಡಬಹುದಾದ ಚಿತ್ರ ಮಾಡಿದ್ದು
೨. ಜಯಂತಿ ಆಗಲೇ ಪ್ರಸಿದ್ಧ ತಾರೆ ಎಂದು ಹೆಸರು ಮಾಡಿದ್ದರು, ಈ ರೀತಿಯ ಒಂದು ಸಂಕೀರ್ಣ ಪಾತ್ರವನ್ನು ಒಪ್ಪಿ ನಟಿಸಿದ್ದು
೩. ರಂಗ ಅವರ ಚಿತ್ರ ಜೀವನದಲ್ಲಿ ಒಂದು ವಿಭಿನ್ನ ಚಿತ್ರವಾಗಿ ಮೂಡಿ ಬಂದದ್ದು.
೪. ಪುಟ್ಟಣ್ಣ ಅವರು ಮೊದಲಬಾರಿಗೆ ಕರುನಾಡಿನಿಂದ ಒಂದು ಕಾಲನ್ನು ಹೊರಗೆ ಇತ್ತು ಕೇರಳದ ವೈನಾಡಿನಲ್ಲಿರುವ ಎಡಕಲ್ಲು ಗವಿಯಲ್ಲಿ ಕೆಲವು ಸನ್ನಿವೇಶಗಳನ್ನು ಚಿತ್ರಿಸಿದ್ದು.

ಚಿತ್ರದ ಹೆಸರು, ತಾರಾಗಣ, ತಾಂತ್ರಿಕ ವರ್ಗವನ್ನು ತೋರಿಸುವ ಜೊತೆಯಲ್ಲಿ ಅರಿಷಡ್ವರ್ಗಗಳ ಬಗ್ಗೆ ಕಿರು ಮಾತನ್ನು ಹೇಳಿ, ಜೊತೆಯಲ್ಲಿ ಪುರುಷ ಗೊಂಬೆಗಳನ್ನ ಪೂರಕವಾಗಿ ತೋರಿಸಿ ಚಿತ್ರದ ಆರಂಭದಲ್ಲೇ ತಾನು ಹೇಳ ಹೊರಟಿರುವ ಸಂದೇಶವನ್ನು ಸಾರಿ ಸಾರಿ ಹೇಳಿದ್ದಾರೆ.

ಕಾಮತುರಣಾಂ ನಲಜ್ಜಂ ನಭಯಂ ಇನ್ನು ಮೂಲಕ ಚಲನ ಚಿತ್ರ ಆರಂಭವಾಗುತ್ತದೆ.

"ವಿರಹ ನೂರು ನೂರು ತರಹ" ಹಾಡು ಸಾಹಿತ್ಯ, ಸಂಗೀತ ಮತ್ತು ಛಾಯಗ್ರಹಣದಿಂದ ಮನಗೆದ್ದರೆ. ಪಿ ಸುಶೀಲ ಮತ್ತು ಜಯಂತಿ ಪ್ರೇಕ್ಷಕರಿಗೆ ಹೇಳುತ್ತಾರೆ.. ಇರಿ ಸರ್ ನಮ್ಮ ಕಡೆಯೂ ಗಮನಿಸಿ ಅಂತ.
ಅದ್ಭುತ ಗಾಯನ ಸುಶೀಲಮ್ಮ ಅವರದಾದರೆ, ಅದಕ್ಕೆ ಪೈಪೋಟಿ ನೀಡುವಂತೆ ಜಯಂತಿ (ಇರಿ ಸ್ವಲ್ಪ ಸಮಯ ತಡೆದುಕೊಳ್ಳಿ ಲೇಖನದ ಮುಂದಿನ ಭಾಗದಲ್ಲಿ ಜಯಂತಿ ಅವರ ಬಗ್ಗೆ ಬರೆದಿದ್ದೇನೆ) ಅಭಿನಯದ ಮೂಲಕ ತೆರೆದಿಡುತ್ತಾರೆ. ವಿಜಯನಾರಸಿಂಹ ಅಕ್ಷರಶಃ ಪದಗಳ ಗಾರುಡಿಗ. ಭಾವಾಂತರಂಗದಲ್ಲಿ ಅಲ್ಲೋಲ ಕಲ್ಲೋಲಾ ಎನ್ನುವಾಗ ಕೊಳದ ನೀರಲ್ಲಿ ಮೋಡವನ್ನು ತೋರಿಸಿ ನೀರಿನ ಅಲಗಾಡುವಿಕೆಯನ್ನು ಕದಡಿದ ಮನಸ್ಸಿಗೆ ಹೋಲಿಸಿರುವ ಸನ್ನಿವೇಶ ಒಂದು ಅದ್ಭುತ ಸಂಯೋಜನೆ.

ತಮ್ಮ ದೇಹದ ಬಯಕೆಯನ್ನು ತೋಡಿ ಕೊಂಡಾಗ ರಂಗ ಹೇಳುವ ನಿಜಾಂಶ..  ನಂತರ ಉರಿಯುತ್ತಿದ್ದ ಬೆಂಕಿಗೆ ಜಯಂತಿ ನೀರು ತಂದು ಸುರಿಯುವ ದೃಶ್ಯ ಸೂಪರ್.

ಅಡ್ಡ ಬಡ್ದ ಬೈಕ್ ಓಡಿಸುತ್ತಾ ಬರುವ ಚಂದ್ರು ಮೊದಲ ದೃಶ್ಯದಲ್ಲಿಯೇ ಆತನ ಗುಣವನ್ನು ತೋರಿಬಿಡುತ್ತಾರೆ. ರಸ್ತೆಯಲ್ಲಿ ಓಡಿಸದೇ ಸಿಕ್ಕ ಮೈದಾನದಲ್ಲಿ ಇಷ್ಟ ಬಂದಾ ಹಾಗೆ ಓಡಿಸುವ ಮೂಲಕ ತಾನು ಯಾರ ಹಂಗಿಗೂ ಸಿಗದ ಮನುಷ್ಯ ಎಂಬ ತರ್ಕವನ್ನು ತೋರಿಬಿಡುತ್ತಾರೆ. ವಿಚಿತ್ರ ವೇಷಭೂಷಣ, ಮಾತು ಮಾತಿಗೂ "ಇದೆ ಫಸ್ಟ್ ಟೈಮ್" ಎನ್ನುವ ಪದವನ್ನು ಸೇರಿಸೋದು, ಈ ಪಾತ್ರ ಒಂದು ವಿಭಿನ್ನವಾಗಿ ರೂಪುಗೊಳ್ಳಲು ಸಹಾಯ ಮಾಡಿದೆ.

"ಗುಂಡಿನ ಮತ್ತೆ ಗಮ್ಮತ್ತು ಅಳತೆ ಮೀರಿದರೆ ಆಪತ್ತು" ಎಸ್ ಪಿ  ಈ ಹಾಡನ್ನು ಪಕ್ಕ ಕುಡುಕರ ಶೈಲಿಯಲ್ಲಿಯೇ ಹಾಡಿದ್ದಾರೆ. ನರೇಂದ್ರ ಬಾಬು ಅವರ ಸಾಹಿತ್ಯಕ್ಕೆ ಅಚ್ಚುಕಟ್ಟಾದ ನಟನೆ ಶಿವರಾಂ ಅವರದು. ಇವರು ಪ್ರತಿ ಸಂಭಾಷಣೆಯಲ್ಲಿ "ಗಮ್ಮತ್ತು, ಲಿಮಿಟ್ ಎನ್ನುವ ಪದಗಳನ್ನು ಉಪಯೋಗಿಸುತ್ತಲೇ ಹೇಳುವ ಮಾತು "ನಾ ಹೇಳಿದ ಹಾಗೆ ಕೇಳು.. ಆದರೆ ನಾ ಮಾಡಿದಂತೆ ಮಾಡಬೇಡ"..  ಉಪದೇಶ ಯಾರು ಹೇಳುತ್ತಾರೆ ಅನ್ನೊಂದು ಮುಖ್ಯ ಅಲ್ಲಾ ಏನು ಹೇಳುತ್ತಾರೆ ಅನ್ನೊಂದು ಮುಖ್ಯ ಎಂದು ತೋರಿಸುತ್ತಾರೆ.

ಇವರಿಬ್ಬರು ರಂಗ ಅವರ ಮನೆಗೆ ಪರಿಚಯ ಆದ ಮೇಲೆ ಚಿತ್ರ ಶುರುವಾಗುತ್ತೆ.  ದೊಡ್ಡ ದೊಡ್ಡ ಬಂಗಲೆಯಲ್ಲಿ ಒಂಟಿ ತನ.. ,ಸಾಹುಕಾರನನ್ನು ಸಾಹುಕಾರರ ಹಾಗೆ ಮಾಡದೆ ಬಯಕೆಯಲ್ಲಿ ದಟ್ಟ ದರಿದ್ರ ಸ್ಥಿತಿಗೆ ತಳ್ಳುತ್ತದೆ ಅನ್ನುವ ಮಾರ್ಮಿಕ ಸಂದೇಶ . ಎಲ್ಲಾ ಇದೆ ಏನೂ ಇಲ್ಲ ಅನ್ನಿಸುವ ವಿಚಿತ್ರ ಸನ್ನಿವೇಶ.

ಮನೆಯ ಯಜಮಾನನಿಗೆ ಹೇಳದೆ ಮಾಡುವ ಕೆಲಸ ಜೀವನದ ದಾರಿಯನ್ನು  ಹೇಗೆ ತಪ್ಪಿಸುತ್ತದೆ ಎನ್ನುವುದಕ್ಕೆ ಚಂದ್ರು ಜೊತೆಯಲ್ಲಿ ಜಯಂತಿ ಎಡಕ್ಕಲ್ಲು ಗುಡ್ಡಕ್ಕೆ ಹೋಗುತ್ತಾ "ಸಂತೋಷ ಆಹಾ ಸಂಗೀತ" ಹಾಡಿನಲ್ಲಿ ಎಸ್ಪಿ ಮತ್ತು ಪಿ ಸುಶೀಲ ಅವರ ಹಾಡುಗಾರಿಕೆ ಮತ್ತು ವಿಜಯನಾರಸಿಂಹ ಅವರ ಸಾಹಿತ್ಯ ಗಮನ ಸೆಳೆಯುತ್ತದೆ.

ಚುಟುಕಾಗಿ ಎಡಕಲ್ಲು ಗುಡ್ಡವನ್ನು ತೋರಿಸುವ ಈ ಹಾಡಿನಲ್ಲಿ ಮತ್ತು ನಂತರದ ದೃಶ್ಯದಲ್ಲಿ ಸಾವಿರಾರು ವರ್ಷಗಳ ಹಿಂದೆ ಬಂಡೆಗಳಲ್ಲಿನ ಕೆತ್ತನೆ ಗಮನ ಸೆಳೆಯುತ್ತದೆ. ಮಾನವನ ಆದಿ ಕಾಲದಿಂದಲೂ ಈ ಕಾಮ ಎನ್ನುವ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ ಎನ್ನುವ ಮಾತು ನಿಜ ಅನ್ನಿಸುತ್ತದೆ.

ತಪ್ಪು ಹೆಜ್ಜೆ ಇಡಲು ಮುನ್ನುಗುವ ಆ ಕ್ಷಣವನ್ನು ಬಣ್ಣ ಬಣ್ಣಗಳ ಬೆಳಕಿನ ಸಹಾಯದಿಂದ ಬಿಂಬಿತವಾಗುವ ದೃಶ್ಯ ಅಮೋಘ ಕಲ್ಪನೆ. ಇಲ್ಲಿಯೂ ಕೂಡ ಅಶ್ಲೀಲ ಎನ್ನಿಸುವ ದೃಶ್ಯವನ್ನು ನಾಗರೀಕ ಪ್ರಜ್ಞೆಯಿಂದ ಬರಿ ಸಾಂಕೇತಿಕವಾಗಿ ಕಡಲಿನ ಅಲೆಗಳ ಅಬ್ಬರ, ಎಲೆಯಿಂದ ಜಿನುಗುವ ನೀರಿನ ಬಿಂದು ಹೀಗೆ ಸಾಂಕೇತಿಕವಾಗಿ ಚಿತ್ರೀಕರಿಸಿದ್ದಾರೆ.

ಜೀವನದ ಹಾದಿಯಲ್ಲಿ ತಪ್ಪು ಹೆಜ್ಜೆಯನ್ನಿಟ್ಟು ಬಂದ ಮೇಲೆ ತನ್ನ ಗಂಡನಿಗೆ ಆ ವಿಷಯ ಹೇಳಲಾಗದೆ ತೊಳಲಾಡುವ ದೃಶ್ಯವನ್ನು ಕ್ಯಾಮೆರ ನಿಧಾನವಾಗಿ ಓಲಾಡುತ್ತಾ ಜಯಂತಿಯ ಹಿಂದೆ ಹೋಗುವ ರೀತಿ ತೋರಿರುವುದು ಮತ್ತೊಮ್ಮೆ ಪುಟ್ಟಣ್ಣ ಅವರ ಹಿಡಿತ ನಿರ್ದೇಶಕರ ಸ್ಥಾನದ ಮೇಲೆ ಎಷ್ಟು ಉನ್ನತ ಮಟ್ಟದಲ್ಲಿದೆ ಎಂದು ತೋರಿಸುತ್ತದೆ.

ಊರಿನ ಮನೆಯಲ್ಲಿ ಸಂಸಾರದ ವಿಷಯವನ್ನು ರಂಗ ಅವರ ಬಳಿ ನ್ಯಾಯ ತೀರ್ಮಾನ ಮಾಡಲು ಬಂದಾಗ.. ಬಯಕೆಯನ್ನು ತೃಪ್ತಿ ಪಡಿಸದ ಗಂಡಿನ ಬಳಿ ಜೀವನ ಮಾಡುವುದು ವ್ಯರ್ಥ ಎಂದು ಊರಿನ ಜನರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅಂಥಹ ಸಂದರ್ಭದಲ್ಲಿ ರಂಗ ತನ್ನ ಜೀವನವನ್ನು ತುಲನೆ ಮಾಡಿ.. ಜಯಂತಿ ತನ್ನ ಬಾಳಿನ ದೇವತೆ ಎಂದು ಅವಳ ತಲೆಯ ಮೇಲೆ ಹೂವನ್ನು ಹಾಕುತ್ತಾರೆ.  ತಾನು ನಿಜ ಎಂದು ನಂಬಿದ್ದ ನಂಬಿಕೆಗೆ ಬದ್ಧನಾಗಿ ಇರುವುದು ಮತ್ತು ತನ್ನ ಹೆಂಡತಿ ಹಾದಿ ತಪ್ಪಿರುವುದರ ಬಗ್ಗೆ ಸ್ವಲ್ಪವೂ ಅರಿವಿರದೆ ನಡೆದುಕೊಳ್ಳುವ ಈ ದೃಶ್ಯ ನಂಬಿದ ಸತ್ಯವೆ ಒಳ್ಳೆಯದು ಅನ್ನಿಸುತ್ತದೆ.

ಇವುಗಳ ಗಡಿಬಿಡಿಯ ಮಧ್ಯೆ ಬರುವ ಆರತಿ ಪಾತ್ರ ತುಂಬಾ ವಿಭಿನ್ನವಾಗಿ ಮೂಡಿ ಬಂದಿದೆ. ಜಯಂತಿ ಎಡವಿ ಬೀಳುವ ಪಾತ್ರದಲ್ಲಿ ಅಭಿನಯಿಸಿದ್ದರೆ.. ಆರತಿ ಎಡವಿ ಬಿದ್ದವರನ್ನು ತಡವಿ ಎತ್ತುವ ಪಾತ್ರದಲ್ಲಿ ಬಂದಿದ್ದಾರೆ. ಚಂದ್ರು ಆರತಿಯ ಮೇಲೆ ಕಣ್ಣು ಹಾಕಿದಾಗ ಬಗ್ಗದೆ ಚೇಡಿಸುತ್ತಾ ಸಾಗುವ "ಸನ್ಯಾಸಿ ಸನ್ಯಾಸಿ ಅರ್ಜುನ ಸನ್ಯಾಸಿ" ಹಾಡು ಋತುವಿನ ಬದಲಾವಣೆಯಲ್ಲಿಯೂ ಬಯಕೆಗಳ ಪಾತ್ರ ಹಿರಿದು ಎಂದು ಹಾಡುತ್ತಾ ಹೋಗುತ್ತಾರೆ. ಎಸ್ ಜಾನಕಿಯಮ್ಮನವರ ಕೋಮಲ ಸ್ವರ ಆರ್ ಎನ್ ಜಯಗೋಪಾಲ್ ಅವರ ಸುಲಲಿತ ಸಾಹಿತ್ಯ, ಆರತಿಯ ಅವರ ಅಭಿನಯ ಈ ಹಾಡಿನ ಬೆಡಗು ಹೆಚ್ಚಿಸಿದೆ.

ಕೊಡವ ಸಂಸ್ಕೃತಿಯ ಮದುವೆಯ ಒಂದು ಚಿಕ್ಕ ಝಲಕ್ ಇಲ್ಲಿ ಮೂಡಿ ಬಂದಿದೆ. "ಯಾವೂರವ್ವ ಇವ ಯಾವೂರವ್ವ" ಹಾಡಿನಲ್ಲಿ ಕಣಗಾಲ್ ಪ್ರಭಾಕರ್ ಶಾಸ್ತಿ ಅವರ ಸಾಹಿತ್ಯದಲ್ಲಿ ಮಡಿಕೇರಿ ಸುತ್ತ ಮುತ್ತಲ ಅನೇಕ ಪೇಟೆ ಹಳ್ಳಿಗಳ ಹೆಸರುಗಳನ್ನ ತಂದು ಹಾಡಿನಲ್ಲಿ ಕೂರಿಸಿರುವುದು  ವಿಶೇಷ. ಜಾನಕಿಯಮ್ಮ ಅವರ ಕಂಠದಲ್ಲಿ, ಆರತಿಯವರ ವ್ಯಯ್ಯಾರದ ನೃತ್ಯವೇ ಸೊಗಸು.

ಎಡಕಲ್ಲು ಗುಡ್ಡಕ್ಕೆ ಚಂದ್ರು ಆರತಿಯನ್ನು ಕರೆದೊಯ್ದಾಗ ಅಲ್ಲಿ ಆರತಿ ತೋರುವ ಧೈರ್ಯ, ಮನಸ್ಥಿತಿ ಇಂದಿನ ಪೀಳಿಗೆಗೆ ಒಂದು ದಾರಿ ದೀಪ ಎನ್ನಿಸುತ್ತದೆ.  ಎಡವಲು ಅವಕಾಶ ಹೇರಳವಾಗಿದ್ದರೂ ಮನೋ ಬಲ ಸಿದ್ಧಿಸಿದ್ದಾಗ ಇಂಥಹ ಚಿಕ್ಕ ಚಿಕ್ಕ ಉನ್ಮಾದಗಳಿಗೆ ಬಲಿಯಾಗಲು ಸಾಧ್ಯವೇ ಇಲ್ಲ.

ತನ್ನ ಅಕ್ಕಳನ್ನು ಮರಳಿ ದಾರಿಗೆ ತರುವ ಪ್ರಯತ್ನ "ನಿಲ್ಲು ನಿಲ್ಲೇ ಪತಂಗ ಬೇಡ ಬೇಡ ಬೆಂಕಿಯ ಸಂಗ" ವಿಜಯನಾರಸಿಂಹ ಪದಗಳ ಮಹಲನ್ನೇ ಕಟ್ಟಿದ್ದಾರೆ. ಅದ್ಭುತ ಸಾಹಿತ್ಯ, ಅಮೋಘ ಗಾಯನ.  ಆರತಿಯವರ ಅಭಿನಯ, ಜಯಂತಿ ಅವರ ತೊಳಲಾಟ ಸೂಪರ್.

ಅಂತಿಮ ದೃಶ್ಯದಲ್ಲಿ ತನ್ನ ಎಲ್ಲಾ ಎಡವಿದ ಪ್ರಸಂಗಗಳನ್ನು ಜಯಂತಿ ತನ್ನ ಗಂಡನಿಗೆ ಹೇಳುತ್ತಾ ತಪ್ಪನ್ನು ಒಪ್ಪಿಕೊಳ್ಳುವಾಗ ಕ್ಯಾಮೆರ ಓಲಾಟ ಜಯಂತಿಯ ಮನಸ್ಥಿತಿಯನ್ನು ನಿಖರವಾಗಿ ಬಿಂಬಿಸುತ್ತದೆ. ಒಂದು ಚಿಕ್ಕ ಚಿಕ್ಕ ದೃಶ್ಯಗಳಲ್ಲಿ ಕೂಡ ಪುಟ್ಟಣ್ಣ ತೋರುತ್ತಿದ್ದ ಜಾದೂ ಗಮನಸೆಳೆಯುತ್ತದೆ.  ಜೊತೆಯಲ್ಲಿಯೇ ಸಂಸಾರದ ಗುಟ್ಟನ್ನು ಹೇಳುವೆ ಎಂದು ಬೆದರಿಸುವ ಚಂದ್ರು ಮನೆಗೆ ಬಂದಾಗ ಅವರ ನೆರಳನ್ನು ಭೂತಾಕಾರವಾಗಿ ದೊಡ್ಡದಾಗಿ ತೋರಿಸುವ ಮೂಲಕ ಬಯಕೆ ಚಿಕ್ಕ ಗಾತ್ರದಲ್ಲಿ ಬಂದರೂ ಅದು ಹೊತ್ತು ತರುವ ಸಮಸ್ಯೆ ಭೂತಾಕಾರವಾಗಿ ನಿಲ್ಲುತ್ತದೆ ಮತ್ತು ಕಾಡುತ್ತದೆ ಎಂದು ತೋರಿದ್ದಾರೆ. ಉತ್ತಮ ನೆರಳು ಬೆಳಕಿನ ಸಂಯೋಜನೆ.
*****
ಜಯಂತಿ ಈ ಚಿತ್ರದ ನಾಯಕಿ, ಕಣ್ಣಲ್ಲೇ ಅವರು ಕಾರುವ ಬಯಕೆಯ ಭಾವ, ನಾಜೂಕಿನ ಸನ್ನಿವೇಶಗಳಲ್ಲಿ ತನಗಿಂತಲೂ ಕಿರಿಯ ನಟ ಚಂದ್ರುವಿನ ಜೊತೆಯಲ್ಲಿನ ಅಭಿನಯ ವಾಹ್ ಎನ್ನಿಸುತ್ತದೆ. ಈ ಚಿತ್ರದುದ್ದಕ್ಕೂ ಕಣ್ಣುಗಳಿಗೆ ಕಾಡಿಗೆ ತುಸು ಹೆಚ್ಚಾಗಿಯೇ ಬಳಸಿದ್ದಾರೆ. ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ ಎನ್ನುವ ಹಾಗೆ, ಈ ತೀಕ್ಷ್ಣ ಕಾಡಿಗೆ ಕಣ್ಣುಗಳು ಅವರ ಬಯಕೆ, ಮನಸ್ಥಿತಿ ಎಲ್ಲವನ್ನು ಸೂಚ್ಯವಾಗಿ ತೋರಿಸುತ್ತದೆ.

ವಿರಹ ನೂರು ನೂರು ತರಹ ಹಾಡಿನಲ್ಲಿ ಕಣ್ಣು ಮುಖದಲ್ಲೇ ವ್ಯಕ್ತ ಪಡಿಸುವ ಆ ಕಾಮದ ಬಯಕೆ, ಕೆಲವು ದೃಶ್ಯಗಳಲ್ಲಿ ಕಣ್ಣಲ್ಲೇ ಕಾರುವ ರೋಷ, ಜಿಗುಪ್ಸೆ, ತನ್ನ ತಂಗಿ ಆರತಿಯನ್ನು ಬಲೆಗೆ ಎಳೆದುಕೊಳ್ಳುತ್ತಿದ್ದಾನೆ ಎಂದು ಅರಿವಾದಾಗ ಅದನ್ನು ತಡೆಯಲು ಪ್ರಯತ್ನ ಪಡುವ ಅಭಿನಯ (ಅಡಿಗೆ ಮನೆಯ ಹತ್ತಿರ ಚಂದ್ರುವಿಗೆ ಹೋಗು ಎಂದು ಹೇಳುವ ದೃಶ್ಯ) ಅದ್ಭುತ.

ಆ ಧ್ವನಿ, ಆ ನೋಟ, ವೇಷ ಭೂಷಣ ಎಲ್ಲವನ್ನೂ ಸೇರಿಸಿಕೊಂಡು ನಿಖರವಾಗಿ ಜಯಂತಿ ಆ ಪಾತ್ರದೊಳಗೆ ನುಗ್ಗಿಬಿಟ್ಟಿದ್ದಾರೆ

ಆರತಿ ಉತ್ತರಾರ್ಧದಲ್ಲಿ ಬಂದರು ತಮ್ಮ ಪಾಲನ್ನು ಸರಿಯಾಗಿಯೇ ಗುರುತಿಸಿಕೊಂಡಿದ್ದಾರೆ. ಮನೊಧೈರ್ಯಕ್ಕೆ ಇನ್ನೊಂದು ಹೆಸರಾಗುವ ಪಾತ್ರ ಅವರದು. ಪ್ರತಿ ಹಂತದಲ್ಲೂ ತಮ್ಮ ಇರುವಿಕೆಯನ್ನು ತೋರುವ ಅವರ ಅಭಿನಯ ಸೊಗಸಾಗಿದೆ.

ಪೋಷಕ ಪಾತ್ರದಲ್ಲಿ ಬರುವ ರಂಗ, ತೊಳಲಾಡುವ ಪಾತ್ರದಲ್ಲಿ ಅಚ್ಚುಕಟ್ಟಾಗಿ ನಟಿಸಿದ್ದಾರೆ. ತನ್ನ ಹೆಂಡತಿ ಜಾರಿದ್ದಾಳೆ ಎಂದು ಅವಳೇ ತಪ್ಪನ್ನು ಒಪ್ಪಿಕೊಂಡಾಗ... ಪ್ರೇಮದ ಮೇಲೆ ಕಾಮ ಜಯ ಸಾಧಿಸಿದ ಹೊತ್ತು ಎಂದು ಹೇಳಿ ಇಡಿ ಸನ್ನಿವೇಶವನ್ನು ತಿಳಿಗೊಳಿಸುತ್ತಾರೆ.. ಕಡೆಗೆ ಕೇಳುವ ಪ್ರಶ್ನೆ ನಿನಗೆ ಬೇಕಿರುವುದು ಕಾಮವೋ ಪ್ರೇಮವೋ... ಅನ್ನುವಾಗ ಅವರ ಮುಖಭಾವ, ಅಭಿನಯ ಇಷ್ಟವಾಗುತ್ತದೆ.

ಚಂದ್ರು.. ಆಹಾ ಏನು ಹೇಳಲಿ ಈ ಪಾತ್ರದ ಬಗ್ಗೆ. ಇವರು ನಟಿಸಬೇಕಾಗಿದ್ದು ಘಟಾನುಘಟಿಗಳ ಮಧ್ಯೆ. ಅಷ್ಟರಲ್ಲಿಯೇ ಜಯಂತಿ, ಆರತಿ, ಶಿವರಾಂ, ರಂಗ ತಮ್ಮ ಛಾಪನ್ನು ಚಿತ್ರರಂಗದಲ್ಲಿ ಮೂಡಿಸಿದ್ದರು. ಅವರುಗಳ ಮಧ್ಯೆ ತುಂಟ ದಾರಿ ತಪ್ಪಿದ ಹುಡುಗನಾಗಿ ಅಭಿನಯಿಸುವುದು ಸವಾಲೇ ಸರಿ. ಜಯಂತಿಯ ಪಾತ್ರವನ್ನು ಮೋಹಿಸುವ ಸನ್ನಿವೇಶ, ರಂಗ ಅವರ ಬಳಿ ಕೂಗುತ ಮಾತಾಡುವ ಪರಿ, ಶಿವರಾಂ ಅವರನ್ನು ಬಯ್ದು ದೂರ ಅಟ್ಟುವ ದೃಶ್ಯ, ಆರತಿ ಜೊತೆಯಲ್ಲಿನ ಅಭಿನಯ ಎಲ್ಲವಕ್ಕೂ ಪಕ್ಕ ಪ್ಲೇ ಬಾಯ್ ರೂಪ ಕೊಟ್ಟಿದ್ದಾರೆ. ವೇಷಭೂಷಣಗಳು, ಮಾತಿನ ಚಟಾಕಿ "ಇದೆ ಫಸ್ಟ್ ಟೈಮ್" ಅವರ ಪಾತ್ರವನ್ನ ಇನ್ನಷ್ಟು ಸೊಗಸು ಮಾಡಿವೆ.

ಶಿವರಾಂ ಒಂದು ಚಿಕ್ಕ ಚಿಕ್ಕ ಪಾತ್ರವೇ ಆದರೂ.. ಗಮ್ಮತ್ತು, ನಿಯತ್ತು, ಲಿಮಿಟ್ ಈ ಪದಗಳಲ್ಲೇ ಅವರ ಸಂಭಾಷಣೆ ಆರಂಭ ಇಲ್ಲಾ ಮುಕ್ತಾಯ.. ತನ್ನ ವಯಸ್ಸಿಗೂ ಮೀರಿದ ಪಾತ್ರವಾದರೂ ಅಭಿನಯದಲ್ಲಿ ಗೆದ್ದಿದ್ದಾರೆ.

ಕಾಮ ಕ್ಷಣ ಮಾತ್ರ.. ಪ್ರೇಮ ಎಲ್ಲಾ ಸಮಯಕ್ಕೂ ಎನ್ನುವ ಸುಂದರ ನೀತಿಯನ್ನು ಹೇಳುತ್ತಾ ಜಾರಿ ಬಿದ್ದರೆ ಅದಕ್ಕೆ ಸಾವೇ ಗುರಿ ಎನ್ನುವುದನ್ನು ಜಯಂತಿ ಮತ್ತು ಚಂದ್ರುವಿನ ಪಾತ್ರದ ಅವಸಾನದಲ್ಲಿ ತೋರಿದ್ದಾರೆ. ಗಂಡ ಜಾರಿ ಹೋದ ಹೆಂಡತಿಯನ್ನು ಸ್ವೀಕರಿಸುತ್ತೇನೆ ಎಂದು ಹೇಳಿದರು.. ತಪ್ಪು ಮಾಡಿದ್ದಕ್ಕೆ ಸಾವೇ ಪ್ರಾಯಶ್ಚಿತ್ತ ಎಂದು ತನ್ನನ್ನೇ ಕೊನೆಗಾಳಿಸುವ ಆ ದೃಶ್ಯದಲ್ಲಿ ತಪ್ಪು ಮಾಡಬೇಡಿ. ಮಾಡಿದರೆ ಆ ನೊಂದು ಬೆಂದು ಬಾಳುವ ಬದಲು ಮರೆಯಾಗಿ ಹೋಗಿ ಎನ್ನುತ್ತದೆ ಸಂದೇಶ. ಈ ಮಾತುಗಳು ಚರ್ಚೆ ಒಳಪಡಬಹುದಾದರೂ ಆ ಕಾಲ ಘಟ್ಟದಲ್ಲಿ ಇದು ಒಂದು ಅಪರಾಧ ಎನ್ನುತ್ತಿದ್ದ ಕಾಲದಲ್ಲಿ ಈ ರೀತಿಯ ಅಂತ್ಯ ಈ ಚಿತ್ರದಲ್ಲಿ ಬಂದದ್ದು ಸರಿ ಅನ್ನಿಸುತ್ತದೆ.

ಒಂದು ಸುಂದರ ಕಥೆಯನ್ನು ಅಷ್ಟೇ ಅಚ್ಚುಕಟ್ಟಾಗಿ ತೆರೆ ಮೇಲೆ ತರುವುದು ಮತ್ತು ಅಲ್ಲಿ ವಿಚಿತ್ರ ಸನ್ನಿವೇಶಗಳನ್ನು ಕೂಡ ಎಲ್ಲರೂ ಕೂತು ನೋಡುವ ಹಾಗೆ ಹೆಣೆಯುವುದು ನಿರ್ದೇಶಕರ ತಾಕತ್ತು. ಅಂಥಹ ಒಂದು ಸವಾಲಿನಲ್ಲಿ ಗೆಜ್ಜೆ ಪೂಜೆ, ನಾಗರಹಾವು ಚಿತ್ರಗಳಲ್ಲಿ ಗೆದ್ದಿದ್ದ ಪುಟ್ಟಣ್ಣ ಅವರು ಈ ಚಿತ್ರದಲ್ಲಿ ತಮ್ಮ ನಿರ್ದೇಶಕರ ಶಕ್ತಿಯನ್ನು ಪರಿಣಾಮಕಾರಿ ನಿರೂಪಿಸಿದ್ದಾರೆ. ಒಂದು ವಯಸ್ಕರ ಚಿತ್ರ ಆಗಬಹುದಿದ್ದ ಈ ಕಥೆಯನ್ನು ಸುಲಲಿತವಾಗಿ ಬರಿ ಸಾಂಕೇತಿಕ ದೃಶ್ಯಗಳಲ್ಲಿ ಮಾತ್ರ ಆ ಭಾವವನ್ನು ತೋರಿಸಿ ಚಿತ್ರ ರೂಪಿಸಿರುವುದು "ಎಡಕಲ್ಲು ಗುಡ್ಡದ ಮೇಲೆ" ಚಿತ್ರ ಒಂದು ರತ್ನವಾಗಿ ಮಾರ್ಪಟ್ಟಿರುವುದಕ್ಕೆ ಸಾಕ್ಷಿ. ಪುಟ್ಟಣ್ಣ ಕಣಗಾಲ್ ಗುರುಗಳೇ ನಿಮಗೆ ನಮೋ ನಮಃ. 

Thursday, November 20, 2014

ಕಸ್ತೂರಿ ಕಪ್ಪು ಆದರೆ ನಿವಾಸದ ಯಜಮಾನನ ಮನಸ್ಸು ವರ್ಣಮಯ!! (1971)

ತೇನ್ ಸಿಂಗ್ ಗೌರಿಶಂಕರ ತುತ್ತ ತುದಿಯಲ್ಲಿ ನಿಂತಾಗ ಸಂಭ್ರಮದ ವಿಷಯವಾಗಿತ್ತು.. ನೀಲ್ ಆರ್ಮ್ ಸ್ಟ್ರಾಂಗ್ ಚಂದ್ರಲೋಕಕ್ಕೆ ಪಾದ ಇಟ್ಟಾಗ ಸಂತಸವಿತ್ತು.. ಕಾರಣ ತಂತ್ರಜ್ಞಾನ, ಮನುಷ್ಯನ ಅಂಕೆ ಶಂಕೆಗಳು ಒಂದು ಹಂತದಲ್ಲಿ ತನ್ನ ಹತೋಟಿಯಲ್ಲಿದ್ದಾಗ.. ಹೌದು ಇವೆಲ್ಲ ನೆಡೆದು ಒಂದು ನಲವತ್ತು ವರ್ಷಗಳ ಮೇಲೆ ಆಯಿತು.

ಅಕ್ಕಿ ಒಂದು ಕೆ. ಜಿ. ಗೆ ಒಂದು ರೂಪಾಯಿಗಿಂತ ಕಮ್ಮಿ ಇದ್ದ ಕಾಲ.. ಇಂದು ಒಂದು ನೂರು ರೂಪಾಯಿಗೆ ಕೊಂಚ ಕಮ್ಮಿ ಇದೆ.. ಹಾಗೆ ಮಾನವನ ಆಸೆ, ದುರಾಸೆ, ಅಸೂಯೆ, ಸ್ವಾರ್ಥ ಮುಂಚೆಗಿಂತಲೂ ದುಪ್ಪಟ್ಟು ಆಗುತ್ತಲೇ ಇದೆ... ಕಮ್ಮಿಯಾಗುತ್ತಾ ಸಾಗಿದೆ ಜೀವನ ಮೌಲ್ಯಗಳು . 

ಇವೆಲ್ಲ ಮಾತು ಯಾಕೆ ಅಂದಿರಾ.. ಕಸ್ತೂರಿ ನಿವಾಸ ಚಿತ್ರದ ವರ್ಣಮಯ ರೂಪವನ್ನು ನೋಡಿ ಬಂದ ಮೇಲೆ ಅನ್ನಿಸಿದ ಮಾತುಗಳು. 

ಈ ಚಿತ್ರದ ಜೀವಾಳ ಉತ್ತರಾರ್ಧದಲ್ಲಿದೆ. ಅಣ್ಣಾವ್ರಿಗೆ ಗಡ್ಡ ಮೂಡಿ ಬಂದ ಮೇಲೆ ಅವರ ಅಭಿನಯ ವಾಹ್ ವಾಹ್ ಅನ್ನಿಸುತ್ತದೆ. 
ಸಂಭಾಷಣೆ ವೈಖರಿ, ಜೀವನದಲ್ಲಿ ಹಣಕಾಸಿನ ವಿಷಯದಲ್ಲಿ ಜಾರು ಹಾದಿಯಲ್ಲಿದ್ದರೂ ತಾ ನಂಬಿಕೊಂಡಿದ್ದ ಆದರ್ಶ, ಹಿರಿಯ ತಲೆಮಾರಿನವರು ಹಾಕಿಕೊಟ್ಟ ಸಂಸ್ಕಾರ ಇವುಗಳನ್ನು ಕಾಪಾಡಲು ಹೋರಾಡುವ ಪಾತ್ರದಲ್ಲಿ ಅಣ್ಣಾವ್ರು ತಲ್ಲೀನರಾಗಿ ಬಿಡುತ್ತಾರೆ. 

ಮೈಯನೆ ಹಿಂಡಿ ನೊಂದರು ಕಬ್ಬು ಸಿಹಿಯ ಕೊಡುವುದು..
ತೇಯುತಲಿದ್ದರು ಗಂಧದ ಪರಿಮಳ ತುಂಬಿ ಬರುವುದು 
ತಾನೇ ಉರಿದರು ದೀಪವು ಮನೆಗೆ ಬೆಳಕ ಕೊಡುವುದು 
ದೀಪ ಬೆಳಕ ಕೊಡುವುದು.. 

ಇಡಿ ಚಿತ್ರದ ಜೀವಾಳ ಈ ನಾಲ್ಕು ಸಾಲಿನಲ್ಲಿ ಬರೆದಿದ್ದಾರೆ ಸಾಹಿತ್ಯ ರತ್ನ ಚಿ ಉದಯಶಂಕರ್.. ಹಾಗೂ ಇಡಿ ಚಿತ್ರಕ್ಕೆ ತಳಹದಿ ಈ ಮೇಲಿನ ಸಾಲುಗಳು. 

ಈ ಸಾಲುಗಳಿಗೆ ಅಣ್ಣಾವ್ರ ಅಭಿನಯ ನೋಡಿಯೇ ಆನಂದ ಪಡಬೇಕು.. ಆ ಕುರುಚಲು ಗಡ್ಡ.. ಕಪ್ಪು ಕೋಟು ಪ್ಯಾಂಟು.. ಮೆಲ್ಲಗೆ ಹಾರುವ ಕೂದಲು.. ಮುಖದಲ್ಲಿ ಮಾಸದ ನಗೆ.. ಜೀವನದ ಕಷ್ಟಗಳು ಹಿಂಡಿ ಹಿಪ್ಪೆ ಮಾಡುತ್ತಿದ್ದರು ಕಣ್ಣಲ್ಲಿ ಹೊಳಪು .. ಮೊಗದಲ್ಲೂ ನಗು .. ಒಮ್ಮೆಲೇ ಹಾಗೆ ಜೀವನದ ಕಷ್ಟಗಳಿಗೆ ಸೆಟೆದು ನಿಂತಾಗ.. ಕಷ್ಟಗಳು ಸೆಟೆದು ನಮ್ಮಿಂದ ದೂರ ನಿಲ್ಲುತ್ತವೆ ಅನ್ನಿಸಿಬಿಟ್ಟಿತು. 



ಅಣ್ಣಾವ್ರ ಅಭಿನಯ ಕೆಲವು ಸೂಪರ್ ಸೂಪರ್ ಅನ್ನಿಸುವ ತುಣುಕುಗಳು 
  • ಮೇಲೆ ಹೇಳಿದ ಸನ್ನಿವೇಶ 
  • ಲೀಲಾ.. ತನ್ನ ಮದುವೆಯ ಬಗ್ಗೆ ವಿಷಯ ಹೇಳಿದಾಗ, ತನ್ನ ಆಸೆಗೆ ತಣ್ಣೀರು ಬಿತ್ತು ಎಂದು ಗೊತ್ತಾದ ಮೇಲೆ, ಮೆಟ್ಟಿಲು ಹತ್ತುತ್ತಾ ಮನೆ ಕೆಲಸದ ರಾಮಯ್ಯನಿಗೆ "ಪೂರ್ ಫೆಲೋ.. ಪೂರ್ ಫೆಲ್ಲೋ.. " ಅನ್ನುತ್ತಾ ಅರ್ಧ ನಗುತ್ತಾ ಕಣ್ಣಲ್ಲಿ ನೀರು ತುಂಬಿಕೊಂಡು ಹೋಗುವ ದೃಶ್ಯ 
  • ಪ್ರಭು ಲೀಲಾ ನನ್ನಲ್ಲಿ ಏನೋ ಬೇಡಲು ಬಂದಿದ್ದಾಳೆ.. ನನ್ನ ಹತ್ತಿರ ಇರುವ ವಸ್ತುವನ್ನು ಮಾತ್ರ ಕೇಳಲಿ
  • ಕಸ್ತೂರಿ ನಿವಾಸದ ವಂಶದಲ್ಲಿ ಇದುವರೆಗೂ ಇಲ್ಲ ಎಂದು ಹೇಳಿಲ್ಲ.. ನನ್ನ ಬಾಯಲ್ಲಿ ಇಲ್ಲ ಎಂದು ಹೇಳಿಸಲು ನನ್ನನ್ನು ಬದುಕಿಸಿದ್ದೀಯ ಪ್ರಭು 
  • "ಆಡಿಸಿ ನೋಡು ಬೀಳಿಸಿ ನೋಡು" ಸಂತಸ ಮತ್ತು ದುಃಖದ ಎರಡು ಹಾಡಿಗೆ ಅಭಿನಯ.. ಅದರಲ್ಲೂ ದುಃಖದ ಛಾಯೆಯ ಗೀತೆಗೆ. ಕಣ್ಣೀರನ್ನು ಒರೆಸಿಕೊಳ್ಳುತ್ತಾ ನಡೆಯುತ್ತಾ ಸಾಗುವ ದೃಶ್ಯ ಮನಕಲಕುತ್ತದೆ. 
  • ಉಂಗುರ ತೆಗೆದು ಕೊಟ್ಟ ಮೇಲೆ ಅಶ್ವಥ್ ಹತ್ತಿರ ಬಂದು.. ಅದೃಶ್ಯ ಉಂಗುರದ ಹರಳಲ್ಲಿ ಇರೋಲ್ಲ.. ಅಂತ ಹೇಳಿ ಹಣೆಯ ಮೇಲೆ ಗೆರೆ ಎಳೆದು ತೋರಿಸುತ್ತಾರೆ. ಸೂಪರ್ ಸೂಪರ್ 

ಇನ್ನು ಕೆ ಎಸ್ ಅಶ್ವಥ್ ಈ ಚಿತ್ರಕ್ಕೆ ಬಂಗಾರದ ಕಳಸ.. ಅಷ್ಟೊತ್ತಿಗೆ ಅಪಾರ ಹೆಸರು ಗಳಿಸಿದ್ದ ಈ ನಟ ರತ್ನ.. ಮನೆ ಆಳಿನ ಪಾತ್ರದಲ್ಲಿ ವೈಭವಯುತ ನಟನೆ ನೀಡಿದ್ದಾರೆ.. 
  • ಅಣ್ಣಾವ್ರು ಲೀಲಾಳ ಹತ್ತಿರ ಫೋನಿನಲ್ಲಿ ಪ್ರೀತಿಯಿಂದ ಮಾತಾಡುವಾಗ ಅಶ್ವಥ್ ಕೊಡುವ ನೋಟ
  • ಬುದ್ಧಿ.. ಉಂಗುರ ತೆಗೆಯಬಾರದಿತ್ತು.. ಎಂದು ಕಳಕಳಿಯಾಗಿ ಹೇಳುವ ಮಾತು 
  • ಊಟ ಚೆನ್ನಾಗಿತ್ತು ಅಂತ ಹೇಳಿ ತಿಂದ್ರಲ್ಲವ್ವ.. ಅದೇ ಪಾರಿವಾಳ ಮಾರಿ ಬಂದ ಹಣದಲ್ಲಿ ಸಾಮಾನು ತಂದು ಮಾಡಿದ ಅಡಿಗೆ 
  • ಮನೆ ಕಸ್ಕಂಡ್ರಿ, ಆಸ್ತಿ ಕಸ್ಕಂಡ್ರಿ, ಅಂತಸ್ತು ಕಸ್ಕಂಡ್ರಿ, ಪದವಿ ಕಸ್ಕಂಡ್ರಿ.. ಕಡೆಗೆ ಪಾರಿವಾಳ ಕಸ್ಕಳಕ್ಕೂ ಬಂದ್ಬಿಟ್ರಿ.. ಹೊಗ್ರವ್ವ ಇನ್ನೇನು ಕಸಕಳಕ್ಕೆ ಬಂದ್ರಿ.. 
  • ಜೋರಾಗಿ ಕೈ ಮುಗಿದು .. "ಇಬ್ಬರೂ ಅನಾಥರನ್ನು ತಂದು ಸಾಕಿದ್ರು.. ನೀವು ಮತ್ತು ಚಂದ್ರಪ್ಪ.. ಇಬ್ಬರೂ ಸರಿಯಾಗಿ ಮಾಡಿದ್ರಿ"
  • ಅಣ್ಣಾವ್ರು ಪಾರಿವಾಳವನ್ನು ಹದ್ದಿನ ಮೇಲೆ ಛೂ ಬಿಡಲು ಹೋದಾಗ.. ಅವರನ್ನು ತಡೆದು ಹದ್ದಿಗೆ ಕಲ್ಲು ಹೊಡೆಯುತ್ತಾ ಹೇಳುವ ಸಂಭಾಷಣೆ 
  • ಚಿತ್ರದುದ್ದಕ್ಕೂ ಬೆನ್ನು ಬಾಗಿಸಿ ನಡೆಯುತ್ತಾ ಮನೋಜ್ಞ ಅಭಿನಯ ನೀಡಿದ್ದಾರೆ. ತನ್ನ ಧಣಿಯನ್ನು ನೆರಳಂತೆ ಕಡೆಯ ತನಕ ಕಾಯುವ ಪಾತ್ರ ನಿಜಕ್ಕೂ ಅದ್ಭುತ. 
ಬಾಲಣ್ಣ ತನ್ನ ವಿಚಿತ್ರ ಸಂಭಾಷಣೆ ಮೂಲಕ ತನ್ನ ಇರುವನ್ನು ತೋರುತ್ತಾರೆ.  ಪ್ರಾಸಬದ್ಧ ಮಾತುಗಳು, ಅಂಗೀಕ ಅಭಿನಯ, ಮುಖದ ಭಾವ .  ಚಿತ್ರದ ಮೊದಲರ್ಧದಲ್ಲಿ ಮಿಂಚುತ್ತಾರೆ. ಉತ್ತಾರಾರ್ಧದಲ್ಲಿ ಮೆಲ್ಲಗೆ ಚಂದ್ರುವನ್ನು ಎತ್ತಿ ಕಟ್ಟಲು ಉಪಾಯ ಮಾಡುವ ಪಾತ್ರದಲ್ಲಿ ಮಿನುಗುತ್ತಾರೆ. 

ಕಪ್ಪು ಬಿಳುಪಿನಲ್ಲಿ ಜಯಂತಿ ಹೊಳೆಯುತ್ತಾರೆ.. ಇನ್ನು ವರ್ಣ ಜಾಲದಲ್ಲಿ ಅಬ್ಬಾ ಎಷ್ಟು ಸುಂದರ.. ಅದ್ಭುತ ಕಂಗಳು, ಭಾವ ಉಕ್ಕಿಸುವ ನಟನೆ ಇಷ್ಟವಾಗುತ್ತಾರೆ, 
ಚಿಕ್ಕ ಚೊಕ್ಕ ಪಾತ್ರದಲ್ಲಿ.. ಒಂದು ಹಾಡಿಗೆ, ಒಂದು ದೃಶ್ಯಕ್ಕೆ ಬರುವ ಆರತಿ, "ನೀ ಬಂದು ನಿಂತಾಗ" ಹಾಡಿನಲ್ಲಿ ಎಲ್ಲರ ಮನದಲ್ಲಿ ಛಾಪು ಒತ್ತಿ ಬಿಟ್ಟಿದ್ದಾರೆ. 
ರಾಜಾಶಂಕರ್ ಆ ಕಾಲದ ಉತ್ತಮ ಪೋಷಕ ನಟ, ಸ್ಪುರದ್ರೂಪಿ, ದಟ್ಟ ಹುಬ್ಬುಗಳಿಂದ ಹೆಸರಾಗಿದ್ದ ಈತ, ಅಣ್ಣಾವ್ರ ಅನೇಕ ಚಿತ್ರಗಳಲ್ಲಿ ಕಾಯಂ ನಟ. ಉತ್ತಮ ಅಭಿನಯ ನೀಡಿದ್ದಾರೆ.. ಅದರಲ್ಲೂ ತನ್ನ ತಪ್ಪಿನ ಅರಿವಾಗಿ ಅಣ್ಣಾವ್ರ ಮುಂದೆ ಕ್ಷಮೆ ಕೇಳುವ ದೃಶ್ಯದಲ್ಲಿ ಮನಗೆಲ್ಲುತ್ತಾರೆ. 

ಕಪ್ಪು ಬಿಳುಪಿನ ಆ ಕಾಲದಲ್ಲಿ ಜನರ ಮನಸ್ಸು ನಿರ್ಮಲವಾಗಿತ್ತು, ಈ ರೀತಿಯ ಚಿತ್ರ, ನಾಯಕ ಉದಾರಿ, ಧರ್ಮ ನಿಷ್ಠ, ಇಂಥಹ ಉದಾತ್ತ ಪಾತ್ರಗಳಿಂದ ಕೂಡಿದ ನಾಯಕ, ಅಥವಾ ಕಥಾವಸ್ತು ಕಡಿಮೆ ಬರುತ್ತಿದ್ದ ಕಾಲದಲ್ಲಿ ಅಚಾನಕ್ ಈ ಚಿತ್ರ ಬಂದಾಗ ಪ್ರೇಕ್ಷಕರು ಹುಚ್ಚೆದ್ದು ನೋಡಿ ಸಂತಸ ಪಟ್ಟಿದ್ದರು. ಚಿತ್ರಕಥೆಯನ್ನು ತರ್ಕದ ಕತ್ತರಿಗೆ ಸಿಳುಕಿಸಿದಾಗ ಪೇಲವ ಅನ್ನಿಸಬಹುದು. ಹಾಗೆ ನೋಡಿದರೆ ಚಲನ ಚಿತ್ರಗಳೇ ಒಂದು ಭ್ರಮೆ, ಚಿತ್ರ ವಿಚಿತ್ರ ತರ್ಕಗಳಿಗೆ ಉತ್ತರಗಳೇ ಇಲ್ಲ. 

ಈ ತರ್ಕದ ತಲೆಯನ್ನು ತೆಗೆದಿಟ್ಟು ಉತ್ತಮ ಸಂಭಾಷಣೆ, ಸಾಹಿತ್ಯ, ಹಾಡುಗಳು, ಅಭಿನಯ, ಕಣ್ಣು ಕೋರೈಸುವ ಬಣ್ಣ ಬಣ್ಣದ ಪಾತ್ರಗಳು ತೆರೆಯ ಮೇಲೆ ಬಂದು ಮನ ಬೆಳಗುವುದನ್ನು ನೋಡಲು ಖಂಡಿತ ಚಿತ್ರ ಮಂದಿರಕ್ಕೆ ಹೋಗಲೇ ಬೇಕು. 



ಕೆ ಸಿ ಎನ್ ಕುಟುಂಬ ಕನ್ನಡ ಚಿತ್ರರಂಗದಲ್ಲಿ ಸಾಧನೆಯ ಶಿಖರವನ್ನೇ ಮೂಡಿಸಿದೆ. ಅಂಥಹ ಇನ್ನೊಂದು ಪ್ರಯತ್ನ ಕಸ್ತೂರಿ ನಿವಾಸದ ಕೃತಿಯನ್ನು ಬಣ್ಣದಲ್ಲಿ ಅದ್ದಿ ತೆಗೆದದ್ದು. ಒಂದು ಅದ್ಭುತ ಶ್ರಮ ಇಡಿ ಚಿತ್ರದ ಪ್ರತಿಯೊಂದು ಅಂಚಿನಲ್ಲೂ  ನೋಡಬಹುದು. ಆ ಕಾಲದ ವರ್ಣವನ್ನು ಗಮನದಲ್ಲಿಟ್ಟುಕೊಂಡು ತಯಾರಾದ ಈ ವರ್ಣಮಯ ಶ್ರಮ ಕೊಟ್ಟ ಹಣಕ್ಕೆ ಖಂಡಿತ ಮೋಸ ಮಾಡುವುದಿಲ್ಲ. 

ಹೋಗಿ ಬನ್ನಿ ಕನ್ನಡ ಚಿತ್ರಗಳ ಅಭಿಮಾನಿಗಳೇ.. ಕಸ್ತೂರಿ ಕಪ್ಪು ನಿಜ.. ಆದರೆ ಈ ಕಸ್ತೂರಿ ವರ್ಣಮಯ... !!!